Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 10-12

ಮಿಡತೆಗಳಿಂದ ಬಾಧೆ

10 ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.

ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು! ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು. ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ. ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ’” ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.

ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.

ಆದ್ದರಿಂದ ಫರೋಹನು ಮೋಶೆ ಆರೋನರನ್ನು ತನ್ನ ಬಳಿಗೆ ಕರೆಯಿಸಿ, “ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ. ಆದರೆ ಹೋಗುವವರು ಯಾರೆಂಬುದನ್ನು ನನಗೆ ತಿಳಿಸಿ” ಅಂದನು.

ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.

10 ಫರೋಹನು ಅವರಿಗೆ, “ಯೆಹೋವನಾಣೆ, ನೀವು ನಿಮ್ಮ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಹೋಗಲು ನಾನು ಅನುಮತಿ ಕೊಡುವುದೇ ಇಲ್ಲ. 11 ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.

12 ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.

13 ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು. 14 ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ. 15 ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.

16 ಫರೋಹನು ಕೂಡಲೇ ಮೋಶೆ ಆರೋನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ. 17 ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.

18 ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು. 19 ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ. 20 ಆದರೆ ಫರೋಹನು ಮತ್ತೆ ಹೃದಯವನ್ನು ಕಠಿಣಪಡಿಸಿಕೊಂಡು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ.

ಮೂರು ದಿನ ಕಾರ್ಗತ್ತಲೆ

21 ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

22 ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು. 23 ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.

24 ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು.

25 ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ 26 ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.

27 ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ. 28 ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.

29 ಅದಕ್ಕೆ ಮೋಶೆಯು ಫರೋಹನಿಗೆ, “ಸರಿ, ಇನ್ನು ಮೇಲೆ ನಾನು ನಿನ್ನ ಸನ್ನಿಧಿಗೆ ಬರುವುದೇ ಇಲ್ಲ” ಎಂದು ಹೇಳಿದನು.

ಚೊಚ್ಚಲು ಮಕ್ಕಳ ಮರಣ

11 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’ ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.

ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು. ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ. ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ. ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ. ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.

ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು. 10 ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.

ಪಸ್ಕ ಹಬ್ಬ

12 ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ, “ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು. ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು. ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು. ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು. ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು. ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.

“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು. ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು. 10 ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

11 “ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.

12 “ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು. 13 ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು.[a] ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.

14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು. 15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು. 16 ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು. 17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ. 18 ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ. 19 ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು. 20 ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.

21 ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ. 22 ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು. 23 ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು.[b] ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ. 24 ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. 25 ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು. 26 ‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ, 27 ‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು.

“ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.” 28 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.

29 ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು. 30 ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.

ಇಸ್ರೇಲರಿಗೆ ಈಜಿಪ್ಟಿನಿಂದ ಬಿಡುಗಡೆ

31 ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿ. 32 ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ! ನನ್ನನ್ನು ಆಶೀರ್ವದಿಸಿ!” ಎಂದು ಹೇಳಿದನು. 33 ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.

34 ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. 35 ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು. 36 ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.

37 ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ[c] ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.) 38 ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು. 39 ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.

40 ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು. 41 ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ[d] ಈಜಿಪ್ಟನ್ನು[e] ಬಿಟ್ಟು ಹೊರಟವು. 42 ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.

43 ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು. 44 ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು. 45 ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು.

46 “ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು. 47 ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು. 48 ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು. 49 ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.

50 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು. 51 ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International