Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
2 ರಾಜರುಗಳು 4-5

ವಿಧವೆಯ ಬೇಡಿಕೆ

ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.

ಎಲೀಷನು, “ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು” ಎಂದು ಕೇಳಿದನು.

ಆ ಸ್ತ್ರೀಯು, “ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ” ಎಂದು ಹೇಳಿದಳು.

ಆಗ ಎಲೀಷನು, “ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ. ನಂತರ ನಿನ್ನ ಮನೆಗೆ ಹೋಗಿ ಬಾಗಿಲುಗಳನ್ನು ಮುಚ್ಚು. ನೀನು ಮತ್ತು ನಿನ್ನ ಮಕ್ಕಳು ಮಾತ್ರ ಮನೆಯಲ್ಲಿರಬೇಕು. ಈ ಪಾತ್ರೆಗಳಿಗೆಲ್ಲಾ ಎಣ್ಣೆಯನ್ನು ತುಂಬಿಸಿ ಪ್ರತ್ಯೇಕವಾದ ಸ್ಥಳದಲ್ಲಿಡು” ಎಂದು ಹೇಳಿದನು.

ಆ ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಆ ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು. ಅವಳು ಅನೇಕ ಪಾತ್ರೆಗಳನ್ನು ತುಂಬಿಸಿಟ್ಟು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ” ಎಂದಳು.

ಆದರೆ ಎಲ್ಲಾ ಪಾತ್ರೆಗಳು ತುಂಬಿಹೋಗಿದ್ದವು. ಅವಳ ಮಕ್ಕಳಲ್ಲಿ ಒಬ್ಬನು, “ಇಲ್ಲಿ ಯಾವ ಪಾತ್ರೆಗಳೂ ಇಲ್ಲ” ಎಂದು ಹೇಳಿದನು. ಆ ಸಮಯಕ್ಕೆ ಸರಿಯಾಗಿ ಪಾತ್ರೆಯಲ್ಲಿದ್ದ ಎಣ್ಣೆಯು ಮುಗಿದಿತ್ತು.

ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.

ಎಲೀಷ ಮತ್ತು ಶೂನೇಮಿನ ಸ್ತ್ರೀ

ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಪ್ರಮುಖಳಾದ ಸ್ತ್ರೀಯೊಬ್ಬಳು ಶೂನೇಮಿನಲ್ಲಿ ವಾಸಿಸುತ್ತಿದ್ದಳು. ಆ ಸ್ತ್ರೀಯು ತನ್ನ ಮನೆಯಲ್ಲಿ ಊಟಮಾಡಿಕೊಂಡು ಹೋಗುವಂತೆ ಎಲೀಷನನ್ನು ಕೇಳಿಕೊಂಡಳು. ಅಂದಿನಿಂದ ಎಲೀಷನು ಆ ಸ್ಥಳದ ಮೂಲಕ ಹೋಗುವಾಗಲೆಲ್ಲಾ ಅವಳ ಮನೆಯಲ್ಲಿ ಊಟಮಾಡುತ್ತಿದ್ದನು.

ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ. 10 ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಆ ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು.

11 ಒಂದು ದಿನ ಎಲೀಷನು ಆ ಸ್ತ್ರೀಯ ಮನೆಗೆ ಬಂದನು. ಅವನು ಆ ಕೊಠಡಿಗೆ ಹೋಗಿ ವಿಶ್ರಾಂತಿಯನ್ನು ಪಡೆದನು. 12 ಎಲೀಷನು ತನ್ನ ಸೇವಕನಾದ ಗೇಹಜಿಗೆ, “ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಾ” ಎಂದು ಹೇಳಿದನು.

ಸೇವಕನು ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು. 13 ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು.

ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.

14 ಎಲೀಷನು ಗೇಹಜಿಗೆ, “ನಾನು ಅವಳಿಗೆ ಏನು ಮಾಡಲಿ?” ಎಂದು ಕೇಳಿದನು.

ಗೇಹಜಿಯು, “ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ” ಎಂದು ಉತ್ತರಿಸಿದನು.

15 ಆಗ ಎಲೀಷನು, “ಅವಳನ್ನು ಕರೆದುಕೊಂಡು ಬಾ” ಎಂದು ಹೇಳಿದನು.

ಗೇಹಜಿಯು ಆ ಸ್ತ್ರೀಯನ್ನು ಕರೆದನು. ಆಕೆಯು ಬಂದು ಅವನ ಬಾಗಿಲಿನ ಹತ್ತಿರ ನಿಂತಳು. 16 ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು.

ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.

17 ಆ ಸ್ತ್ರೀಯು ಗರ್ಭಿಣಿಯಾದಳು. ಎಲೀಷನು ಹೇಳಿದಂತೆ, ಮುಂದಿನ ವಂಸತದಲ್ಲಿ ಅವಳು ಒಬ್ಬ ಮಗನಿಗೆ ಜನ್ಮನೀಡಿದಳು.

18 ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು ನೋಡಲು ಆ ಬಾಲಕನು ಹೊಲಕ್ಕೆ ಹೋಗಿದ್ದನು. 19 ಈ ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು.

ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿ” ಎಂದು ಹೇಳಿದನು.

20 ಆ ಸೇವಕನು ಬಾಲಕನನ್ನು ಅವನ ತಾಯಿಯ ಬಳಿಗೆ ಕರೆದೊಯ್ದನು. ಬಾಲಕನು ಮಧ್ಯಾಹ್ನದವರೆಗೆ ತಾಯಿಯ ತೊಡೆಯ ಮೇಲೆ ಕುಳಿತಿದ್ದನು. ನಂತರ ಅವನು ಸತ್ತುಹೋದನು.

ಶೂನೇಮಿನ ಸ್ತ್ರೀಯು ಎಲೀಷನನ್ನು ನೋಡಲು ಹೋಗುವಳು

21 ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು. 22 ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.

23 ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು.

ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.

24 ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.

25 ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು.

ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ! 26 ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು.

ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.

27 ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.

28 ಆಗ ಶೂನೇಮಿನ ಆ ಸ್ತ್ರೀಯು, “ಸ್ವಾಮೀ, ನಾನು ಮಗನನ್ನು ಕೇಳಲೇ ಇಲ್ಲ. ‘ನನ್ನನ್ನು ವಂಚಿಸಬೇಡ’ ಎಂದು ನಾನು ನಿನಗೆ ಹೇಳಿದೆ!” ಎಂದಳು.

29 ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.

30 ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು.

ಎಲೀಷನು ಮೇಲೆದ್ದು ಶೂನೇಮಿನ ಆ ಸ್ತ್ರೀಯನ್ನು ಹಿಂಬಾಲಿಸಿದನು.

31 ಶೂನೇಮಿನ ಆ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.

32 ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು. 33 ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು. 34 ಎಲೀಷನು ಹಾಸಿಗೆಗೆ ಹೋಗಿ ಮಗುವಿನ ಮೇಲೆ ಮಲಗಿದನು. ಎಲೀಷನು ತನ್ನ ಬಾಯಿಯನ್ನು ಮಗುವಿನ ಬಾಯಿಯ ಮೇಲಿಟ್ಟನು. ಎಲೀಷನು ತನ್ನ ಕೈಗಳನ್ನು ಮಗುವಿನ ಕೈಗಳ ಮೇಲಿಟ್ಟನು. ಎಲೀಷನು ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗುವಿನ ದೇಹವು ಬೆಚ್ಚಗಾಯಿತು.

35 ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.

36 ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು.

ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.

37 ಆಗ ಶೂನೇಮಿನ ಆ ಸ್ತ್ರೀಯು ಕೊಠಡಿಯೊಳಕ್ಕೆ ಹೋಗಿ, ಎಲೀಷನ ಪಾದಗಳಿಗೆ ಬಾಗಿ ನಮಸ್ಕರಿಸಿದಳು. ನಂತರ ಅವಳು ತನ್ನ ಮಗನನ್ನು ಎತ್ತಿಕೊಂಡು ಹೊರಗೆ ಹೋದಳು.

ಎಲೀಷ ಮತ್ತು ವಿಷದ ಸಾರು

38 ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.

39 ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡುಸೋರೆ ಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡುಸೋರೆ ಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.

40 ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.

41 ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು.

ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.

ಎಲೀಷನು ಪ್ರವಾದಿಗಳ ಗುಂಪಿಗೆ ಊಟ ಒದಗಿಸಿದನು

42 ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.

43 ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು.

ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಹೀಗೆನ್ನುವನು: ‘ಅವರು ತಿಂದರೂ ಆಹಾರವು ಉಳಿಯುತ್ತದೆ’” ಎಂದು ಹೇಳಿದನು.

44 ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಆ ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವು ಉಳಿದುಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು.

ನಾಮಾನನ ಸಮಸ್ಯೆ

ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.

ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು. ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.

ನಾಮಾನನು ತನ್ನ ಒಡೆಯನಾದ ಅರಾಮ್ಯರ ರಾಜನ ಬಳಿಗೆ ಹೋದನು. ಇಸ್ರೇಲಿನ ಹುಡುಗಿಯು ಹೇಳಿದ ಸಂಗತಿಗಳನ್ನು, ನಾಮಾನನು ಅರಾಮ್ಯರ ರಾಜನಿಗೆ ಹೇಳಿದನು.

ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು.

ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು. ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “…ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು.

ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.

ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”

ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು. 10 ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.

11 ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು. 12 ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ಆ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದುಕೊಂಡು ಕೋಪದಿಂದ ಹಿಂದಿರುಗಿ ಹೋದನು!

13 ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.

14 ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.

15 ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.

16 ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರಮಾಣ ಮಾಡುತ್ತೇನೆ, ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು.

ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು. 17 ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ! 18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು.

19 ಆಗ ಎಲೀಷನು, “ಸಮಾಧಾನದಿಂದ ಹೋಗು” ಎಂದನು.

ನಾಮಾನನು ಎಲೀಷನ ಬಳಿಯಿಂದ ಸ್ವಲ್ಪದೂರ ಹೋದನು. 20 ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,

21 ನಾಮಾನನ ಬಳಿಗೆ ಓಡಿದನು. ನಾಮಾನನು ತನ್ನ ಹಿಂದೆ ಓಡಿಬರುತ್ತಿರುವ ಒಬ್ಬನನ್ನು ನೋಡಿ ಗೇಹಜಿಯನ್ನು ಸಂಧಿಸಲು ರಥದಿಂದ ಇಳಿದನು. ನಾಮಾನನು, “ಎಲ್ಲವೂ ಕ್ಷೇಮವೇ?” ಎಂದು ಕೇಳಿದನು.

22 ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

23 ನಾಮಾನನು, “ದಯಮಾಡಿ ಎಪ್ಪತ್ತು ಕಿಲೋಗ್ರಾಂ ತೆಗೆದುಕೊ!” ಎಂದು ಗೇಹಜಿಗೆ ಒತ್ತಾಯಪಡಿಸಿ ಎಪ್ಪತ್ತು ಕಿಲೋಗ್ರಾಂ ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಹಾಕಿದನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ತನ್ನ ಸೇವಕರಿಗೆ ಕೊಟ್ಟನು. ಆ ಸೇವಕರು ಈ ವಸ್ತುಗಳನ್ನು ತೆಗೆದುಕೊಂಡು ಗೇಹಜಿಯೊಡನೆ ಹೋದರು. 24 ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವುಗಳನ್ನು ಸೇವಕರಿಂದ ತೆಗೆದುಕೊಂಡು ಅವರನ್ನು ಕಳುಹಿಸಿಬಿಟ್ಟನು. ನಂತರ ಗೇಹಜಿಯು ಅವುಗಳನ್ನು ಮನೆಯಲ್ಲಿ ಅಡಗಿಸಿಟ್ಟನು.

25 ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು.

ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.

26 ಎಲೀಷನು ಗೇಹಜಿಗೆ, “ಅದು ನಿಜವಲ್ಲ! ನಾಮಾನನು ನಿನ್ನನ್ನು ಸಂಧಿಸಲು ತನ್ನ ರಥದಿಂದ ಹಿಂದಕ್ಕೆ ತಿರುಗಿದಾಗ ನನ್ನ ಹೃದಯವು ನಿನ್ನ ಹತ್ತಿರದಲ್ಲಿಯೇ ಇತ್ತು. ಹಣವನ್ನು, ಬಟ್ಟೆಗಳನ್ನು, ಆಲೀವನ್ನು, ದ್ರಾಕ್ಷಿಯನ್ನು, ಕುರಿಗಳನ್ನು, ಹಸುಗಳನ್ನು ಅಥವಾ ಸೇವಕಸೇವಕಿಯರನ್ನು ತೆಗೆದುಕೊಳ್ಳುವ ಕಾಲ ಇದಲ್ಲ. 27 ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು.

ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International