Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 36-39

ರಚನೆಗಾರ: ದಾವೀದ.

36 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ
    ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.
ಅವನು ತನ್ನನ್ನು ವಂಚಿಸಿಕೊಳ್ಳುವನು.
    ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ,
    ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.
ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ.
    ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ.
ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು.
    ಮರುದಿನ ಮುಂಜಾನೆ ಎದ್ದಾಗ,
    ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.

ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ.
    ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.
ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ.
    ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ.
ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.
ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ.
    ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.
ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು.
    ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು.
ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು!
    ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.
10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ.
    ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು.
11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ;
    ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.

12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ.
    ಅವರು ಮತ್ತೆಂದಿಗೂ ಮೇಲೇಳುವುದಿಲ್ಲ”
    ಎಂದು ಅವರ ಸಮಾಧಿಯ ಮೇಲೆ ಬರೆಯಿಸು.

ರಚನೆಗಾರ: ದಾವೀದ

37 ದುಷ್ಟರನ್ನು ನೋಡಿ ಉರಿಗೊಳ್ಳಬೇಡ.
    ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.
ದುಷ್ಟರು ಹುಲ್ಲಿನಂತೆಯೂ
    ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು.
ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ;
    ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.
ಯೆಹೋವನಿಗೆ ಸಂತೋಷದಿಂದ ಸೇವೆಮಾಡು.
    ನಿನಗೆ ಬೇಕಾದುದನ್ನು ಆತನೇ ಕೊಡುವನು.
ಯೆಹೋವನನ್ನು ಆಶ್ರಯಿಸಿಕೊ, ಆತನಲ್ಲಿ ಭರವಸವಿಡು.
    ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.
ನಿನ್ನ ನೀತಿಯೂ ನ್ಯಾಯವೂ
    ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ.
ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು.
    ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ.
    ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.
ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ.
ದುಷ್ಟರಾದರೋ ನಾಶವಾಗುವರು.
    ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.
10 ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ.
    ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!
11 ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು;
    ಸಮಾಧಾನವನ್ನು ಅನುಭವಿಸುವರು.

12 ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು.
    ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.
13 ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು.
    ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.
14 ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು.
    ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.
15 ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ.
    ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ.
16 ದುಷ್ಟನ ಶ್ರೀಮಂತಿಕೆಗಿಂತಲೂ
    ನೀತಿವಂತನ ಬಡತನವೇ ಮೇಲು.
17 ಯಾಕೆಂದರೆ ದುಷ್ಟರು ನಾಶವಾಗುವರು.
    ನೀತಿವಂತರನ್ನಾದರೋ ಯೆಹೋವನು ಪರಿಪಾಲಿಸುವನು.
18 ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು.
    ಅವರ ಭೂಮಿಯು ಸದಾಕಾಲ ಅವರದೇ ಆಗಿರುವುದು.
19 ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ.
    ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20 ದುಷ್ಟರಾದರೋ ಯೆಹೋವನ ವೈರಿಗಳಾಗಿದ್ದಾರೆ.
    ಅವರು ನಾಶವಾಗುವರು.
ಅವರ ಕಣಿವೆಗಳು ಒಳಗೆ ಸುಟ್ಟುಹೋಗುತ್ತವೆ;
    ಅವರು ಹೊಗೆಯಂತೆ ಇಲ್ಲವಾಗುವರು.
21 ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ.
    ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.
22 ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು.
    ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.
23 ಯೆಹೋವನು ನೀತಿವಂತನನ್ನು ತನ್ನ ಮಾರ್ಗದಲ್ಲಿ ನಡೆಸುವನು
    ಮತ್ತು ಅವನನ್ನು ಮೆಚ್ಚಿಕೊಳ್ಳುವನು.
24 ಅವನು ಎಡವಿದರೂ ಬೀಳುವುದಿಲ್ಲ;
    ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.
25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ.
    ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.
26 ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು.
    ಅವನ ಮಕ್ಕಳು ಆಶೀರ್ವಾದ ಹೊಂದುವರು.
27 ನೀನು ಕೆಟ್ಟದ್ದನ್ನು ಮಾಡದೆ
    ಒಳ್ಳೆಯದನ್ನೇ ಮಾಡಿದರೆ ಸದಾಕಾಲ ಬದುಕುವೆ.
28 ಯೆಹೋವನು ನ್ಯಾಯವನ್ನು ಪ್ರೀತಿಸುವನು.
    ಆತನು ತನ್ನ ಭಕ್ತರನ್ನು ತೊರೆದುಬಿಡದೆ
ಅವರನ್ನು ಯಾವಾಗಲೂ ಕಾಪಾಡುವನು.
    ದುಷ್ಟರನ್ನಾದರೋ ಆತನು ನಾಶಮಾಡುವನು.
29 ದೇವರು ವಾಗ್ದಾನ ಮಾಡಿದ ಭೂಮಿಯನ್ನು
    ನೀತಿವಂತರು ಪಡೆದುಕೊಂಡು ಅಲ್ಲಿ ಸದಾಕಾಲ ವಾಸಿಸುವರು.
30 ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು.
    ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.
31 ಯೆಹೋವನ ಉಪದೇಶವು ನೀತಿವಂತನ ಹೃದಯದಲ್ಲಿರುತ್ತದೆ.
    ಅವನು ನೀತಿಮಾರ್ಗದಲ್ಲಿ ನಡೆಯವನು.

32 ಕೆಡುಕರಾದರೋ ನೀತಿವಂತರಿಗೆ
    ಕೇಡುಮಾಡಲು ಹೊಂಚುಹಾಕುವರು.
33 ಆದರೆ ಯೆಹೋವನು ನೀತಿವಂತರನ್ನು ತೊರೆದುಬಿಡುವುದಿಲ್ಲ.
    ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ.
34 ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ.
    ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು;
    ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.

35 ಮಹಾದುಷ್ಟನನ್ನು ನಾನು ನೋಡಿದ್ದೇನೆ.
    ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.
36 ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು.
    ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.
37 ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು.
    ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.
38 ಧರ್ಮಶಾಸ್ತ್ರವನ್ನು ಉಲ್ಲಂಘಿಸುವವರು ಸಂಪೂರ್ಣವಾಗಿ ನಾಶವಾಗುವರು.
    ಅವರ ಮಕ್ಕಳೂ ನಾಶವಾಗುವರು.
39 ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ.
    ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯಸ್ಥಾನವಾಗಿದ್ದಾನೆ.
40 ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ.
    ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.

ಜ್ಞಾಪಕಾರ್ಥ ನೈವೇದ್ಯ ಸಮರ್ಪಣೆಯ ಹಾಡು. ರಚನೆಗಾರ: ದಾವೀದ.

38 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ.
    ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.
ನಿನ್ನಿಂದ ನನಗೆ ನೋವಾಗಿದೆ.
    ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ.
ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ.
    ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.
ನಾನು ಅಪರಾಧಿಯಾಗಿದ್ದೇನೆ.
    ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.
ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು.
    ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.
ನಾನು ಬಾಗಿ ಕುಗ್ಗಿಹೋಗಿದ್ದೇನೆ.
    ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.
ನನಗೆ ಜ್ವರವಿದೆ,
    ನನ್ನ ಇಡೀ ದೇಹ ನೋಯುತ್ತಿದೆ.
ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ.
    ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ.
    ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ;
    ನನ್ನ ದೃಷ್ಟಿಯು ಹಿಂಗಿಹೋಗಿದೆ.
11 ನಾನು ಅಸ್ವಸ್ಥನಾಗಿರುವುದರಿಂದ
    ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ.
    ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.
12 ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ;
    ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ;
    ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.
13 ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ.
    ಮೂಕನಂತೆ ಮಾತಾಡದವನಾಗಿದ್ದೇನೆ.
14 ನಾನು ಕಿವಿಕೇಳಿಸದವನಂತೆಯೂ
    ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ.
    ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು.
16 ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು.
    ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು.
17 ನಾನು ಅಪರಾಧಿಯೆಂದು ನನಗೆ ಗೊತ್ತಿದೆ;
    ನನ್ನ ನೋವನ್ನು ಮರೆಯಲಾರೆ.
18 ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ.
    ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.
19 ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ.
    ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.
20 ನಾನು ಉಪಕಾರವನ್ನು ಮಾಡಿದ್ದರೂ
    ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು.
ನಾನು ಒಳ್ಳೆಯದನ್ನು ಮಾಡಬೇಕೆಂದರೂ
    ಅವರು ನನ್ನನ್ನು ವಿರೋಧಿಸುತ್ತಾರೆ.
21 ಯೆಹೋವನೇ, ನನ್ನನ್ನು ಕೈಬಿಡಬೇಡ!
    ನನ್ನ ದೇವರೇ, ನನ್ನ ಸಮೀಪದಲ್ಲೇ ಇರು!
22 ಯೆಹೋವನೇ, ನನ್ನ ರಕ್ಷಕನೇ,
    ಬೇಗನೆ ಬಂದು ನನಗೆ ಸಹಾಯಮಾಡು!

ರಚನೆಗಾರ: ದಾವೀದ.

39 “ನಾನು ಜಾಗರೂಕನಾಗಿ ಮಾತಾಡುವೆ.
    ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ.
    ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.

ನಾನು ಮೌನವಾಗಿದ್ದೆನು.
    ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು.
    ಆದರೆ ನನ್ನ ವೇದನೆಯು ಹೆಚ್ಚಾಯಿತು.
ನಾನು ಬಹುಕೋಪಗೊಂಡಿದ್ದೆ.
    ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು.
    ಆಗ ನಾನು ಬಾಯಿತೆರೆದು,

ಯೆಹೋವನೇ, ನನ್ನ ಗತಿಯನ್ನು ತಿಳಿಸು!
    ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು?
    ನಾನೆಷ್ಟು ಕಾಲ ಬದುಕುವೆ?
ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ.
    ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು.
ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ.
    ಯಾವನೂ ಸದಾಕಾಲ ಬದುಕುವುದಿಲ್ಲ!

ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ.
    ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ.
    ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.

ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು?
    ನನ್ನ ನಿರೀಕ್ಷೆಯು ನೀನೇ.
ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ಬಿಡಿಸು.
    ಮೂರ್ಖರ ನಿಂದೆಗೆ ನನ್ನನ್ನು ಗುರಿಮಾಡಬೇಡ.
ನಾನು ಬಾಯಿತೆರೆದು ಮಾತಾಡುವುದಿಲ್ಲ.
    ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.
10 ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು.
    ಇಲ್ಲವಾದರೆ, ನಾನು ಸತ್ತೇ ಹೋಗುವೆನು.
11 ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ.
    ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ.
    ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.

12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು!
    ನನ್ನ ಮೊರೆಗೆ ಕಿವಿಗೊಡು!
    ನನ್ನ ಕಣ್ಣೀರನ್ನು ನೋಡು!
ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ.
    ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.
13 ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ.
    ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International