Beginning
ನಾಲ್ಕನೆ ಭಾಗ
(ಕೀರ್ತನೆಗಳು 90–106)
ಪ್ರಾರ್ಥನೆ. ರಚನೆಗಾರ: ದೇವಮನುಷ್ಯನಾದ ಮೋಶೆ.
90 ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.
2 ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ
ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು.
ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!
3 ಜನರಿಗೆ ಜನ್ಮನೀಡುವಾತನೂ ನೀನೇ;
ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.
4 ಸಾವಿರ ವರ್ಷಗಳು ನಿನಗೆ ಗತಿಸಿಹೋದ
ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ.
5 ನೀನು ನಮ್ಮನ್ನು ಗುಡಿಸಿಹಾಕುವೆ.
ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ.
ನಾವು ಹುಲ್ಲಿನಂತಿದ್ದೇವೆ.
6 ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ
ಸಾಯಂಕಾಲದೊಳಗೆ ಒಣಗಿಹೋಗುತ್ತದೆ.
7 ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು.
ನಿನ್ನ ರೌದ್ರವು ನಮ್ಮನ್ನು ತಲ್ಲಣಗೊಳಿಸಿದೆ.
8 ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ.
ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.
9 ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು.
ನಮ್ಮ ಜೀವಿತಗಳು ನಿಟ್ಟುಸಿರಿನಂತೆ ತೀರಿಹೋದವು.
10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ.
ಕಷ್ಟಸಂಕಟಗಳೇ ಅದರ ಆಡಂಬರ.
ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ!
ನಾವು ಹಾರಿ ಹೋಗುತ್ತೇವೆ.
11 ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು.
ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.
12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು.
ಆಗ ನಾವು ವಿವೇಕಿಗಳಾಗುವೆವು.
13 ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ.
ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.
14 ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು.
ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ.
ಈಗ ನಮ್ಮನ್ನು ಸಂತೋಷಗೊಳಿಸು.
16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.
17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು.
ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ;
ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.
91 ಮಹೋನ್ನತನ ಮೊರೆಹೊಕ್ಕಿರುವವನು
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
2 ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ
ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.
3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ
ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು.
ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ.
ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.
5 ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ;
ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.
6 ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ
ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ.
7 ನೀನು ಸಾವಿರ ವೈರಿಗಳನ್ನು ಸೋಲಿಸುವೆ.
ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು.
ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.
8 ನೀನು ಅದನ್ನು ಕಣ್ಣಾರೆ ಕಂಡು
ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ.
9 ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ.
ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.
10 ಯಾವ ಕೇಡೂ ನಿನಗೆ ಸಂಭವಿಸದು.
ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.
11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.
12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು
ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13 ಸಿಂಹಗಳ ಮೇಲೆಯೂ ಮತ್ತು
ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.
14 ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು;
ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು.
ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು;
ಅವರನ್ನು ತಪ್ಪಿಸಿ ಘನಪಡಿಸುವೆನು.
16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು;
ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”
ಸಬ್ಬತ್ ದಿನದ ಸ್ತುತಿಗೀತೆ.
92 ಯೆಹೋವನೇ, ನಿನ್ನನ್ನು ಸ್ತುತಿಸುವುದೂ
ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ.
2-3 ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ
ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ
ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ.
4 ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ.
ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.
5 ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ.
ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.
6 ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ.
ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.
7 ದುಷ್ಟರು ಹುಲ್ಲಿನಂತೆಯೂ
ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು.
ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.
8 ಯೆಹೋವನೇ, ನೀನಾದರೋ ಸದಾಕಾಲ ಸನ್ಮಾನ ಹೊಂದುವೆ.
9 ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು;
ಕೆಟ್ಟಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು.
10 ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ.
ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.
11 ವೈರಿಗಳು ನನ್ನ ಸುತ್ತಲೂ ಸೇರಿಬಂದಿದ್ದಾರೆ.
ಅವರು ಆಕ್ರಮಣಕ್ಕೆ ಸಿದ್ಧವಾಗಿರುವ ಬಲಿಷ್ಠವಾದ ಹೋರಿಗಳಂತಿದ್ದಾರೆ.
ಅವರು ನನ್ನ ಬಗ್ಗೆ ಹೇಳುತ್ತಿರುವುದೂ ನನಗೆ ಕೇಳುತ್ತಿದೆ.
12-13 ನೀತಿವಂತರಾದರೋ ಯೆಹೋವನ ಆಲಯದಲ್ಲಿ
ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು.
ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ
ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.
14 ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ
ಎಲೆಮರಗಳಂತೆ ಫಲಿಸುವರು.
15 ಯೆಹೋವನು ಒಳ್ಳೆಯವನೆಂಬುವುದಕ್ಕೆ
ಅವರು ದೃಷ್ಟಾಂತವಾಗಿರುವರು.
ಆತನೇ ನನ್ನ ಬಂಡೆ.
ಆತನು ಎಂದಿಗೂ ತಪ್ಪು ಮಾಡನು.
93 ಯೆಹೋವನೇ ರಾಜನು.
ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು.
ಅದು ಕದಲುವುದೇ ಇಲ್ಲ.
2 ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ.
ಆದಿಯಿಂದಲೂ ಇರುವಾತನು ನೀನೊಬ್ಬನೇ!
3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ.
ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.
4 ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ.
ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
5 ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ.
ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.
94 ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು!
ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!
2 ಇಡೀಲೋಕದ ನ್ಯಾಯಾಧಿಪತಿ ನೀನೇ.
ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.
3 ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು?
ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?
4 ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ
ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು?
5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ.
ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.
6 ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ.
ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.
7 ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ.
ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.
8 ದುಷ್ಟರೇ, ನೀವು ಮೂಢರಾಗಿದ್ದೀರಿ!
ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ?
ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ!
ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.
9 ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ?
ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?
10 ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ.
ಜನರಿಗೆ ಉಪದೇಶಿಸುವವನೂ ಆತನೇ.
11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ.
ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.
12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ.
ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.
13 ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ.
ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.
14 ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ.
ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.
15 ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು.
ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.
16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ.
ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.
17 ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ,
ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18 ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ
ಆತನು ನನಗೆ ಆಧಾರ ನೀಡಿದನು.
19 ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ
ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.
20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ.
ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.
21 ಅವರು ನೀತಿವಂತರಿಗೆ ಎದುರಾಗಿ
ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.
22 ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ.
ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!
23 ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು.
ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು.
ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.
95 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ!
ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
2 ಆತನಿಗೆ ಕೃತಜ್ಞತಾಸುತ್ತಿ ಮಾಡೋಣ.
ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
3 ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ!
ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
4 ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
5 ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ.
ಭೂಮಿಯೂ ಆತನ ಕೈಕೆಲಸವೇ.
6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ.
ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
7 ನಮ್ಮ ದೇವರು ಆತನೇ, ನಾವು ಆತನವರೇ.
ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.
8 ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ
ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು.
ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು,
ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು.
ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು
ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”
Kannada Holy Bible: Easy-to-Read Version. All rights reserved. © 1997 Bible League International