Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಕೊಲೊಸ್ಸೆಯವರಿಗೆ 1-4

ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ.

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಈ ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.

ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯೇ ದೇವರು. ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ. 5-6 ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ. ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ. ಪವಿತ್ರಾತ್ಮ ಪ್ರೇರಿತವಾದ ನಿಮ್ಮ ಪ್ರೀತಿಯ ಬಗ್ಗೆ ಎಪಫ್ರನು ಸಹ ನಮಗೆ ತಿಳಿಸಿದನು.

ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ.

ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ 10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ 11 ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.

12 ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು. 13 ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ. 14 ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.

ನಾವು ಕ್ರಿಸ್ತನ ಕಡೆಗೆ ನೋಡುವಾಗ ದೇವರನ್ನೇ ಕಾಣುತ್ತೇವೆ

15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ.
    ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ.
    ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.
16 ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು,
    ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು,
    ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು.
ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.

17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು.
    ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.
18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ.
    ಪ್ರತಿಯೊಂದೂ ಆತನಿಂದಲೇ ಬರುತ್ತದೆ.
    ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ.
ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.

19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,
20     ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ
    ಭೂಪರಲೋಕಗಳಲ್ಲಿರುವ ಸಮಸ್ತವನ್ನು
ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.

21 ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ. 22 ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು. 23 ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.

ಸಭೆಗಾಗಿ ಪೌಲನ ಕಾರ್ಯ

24 ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ. 25 ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ. 26 ಆದಿಕಾಲದಿಂದಲೂ ಅಡಗಿಸಿಟ್ಟಿದ್ದ ರಹಸ್ಯಸತ್ಯವೇ ಈ ಉಪದೇಶ. ಈ ಸತ್ಯವನ್ನು ಎಲ್ಲಾ ಜನರಿಗೆ ಮರೆಮಾಡಲಾಗಿತ್ತು. ಈಗಲಾದರೋ ಈ ರಹಸ್ಯಸತ್ಯವನ್ನು ದೇವರ ಪವಿತ್ರ ಜನರಿಗೆ ತಿಳಿಸಲಾಗಿದೆ. 27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ. 28 ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ. 29 ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.

ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ. ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.

ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ. ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.

ಕ್ರಿಸ್ತನಲ್ಲಿ ನೆಲೆಗೊಂಡಿರಿ

ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ. ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.

ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು. ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.) 10 ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.

11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ. 12 ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.

13 ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು. 14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು. 15 ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.

ಮಾನವ ನಿರ್ಮಿತ ನಿಯಮಗಳನ್ನು ಅನುಸರಿಸಬೇಡಿ

16 ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ. 17 ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು. 18 ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ. 19 ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.

20 ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ: 21 “ಇದನ್ನು ತಿನ್ನಬೇಡ”, “ಅದರ ರುಚಿ ನೋಡಬೇಡ”, “ಅದನ್ನು ಮುಟ್ಟಬೇಡ” ಎಂದು ಹೇಳುವುದೇಕೆ? 22 ಪ್ರಾಪಂಚಿಕ ವಿಷಯಗಳ ಕುರಿತಾದ ಈ ನಿಯಮಗಳೆಲ್ಲ ಬಳಸಿದ ಮೇಲೆ ನಾಶವಾಗುತ್ತವೆ. ಅವುಗಳು ಜನರ ಆಜ್ಞೆ ಮತ್ತು ಜನರ ಉಪದೇಶಗಳೇ ಹೊರತು ದೇವರವಲ್ಲ. 23 ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.

ಕ್ರಿಸ್ತನಲ್ಲಿ ನಿಮ್ಮ ಹೊಸಜೀವನ

ನೀವು ಕ್ರಿಸ್ತನ ಜೊತೆಯಲ್ಲಿ ಜೀವಂತವಾಗಿ ಎದ್ದುಬಂದಿರುವುದರಿಂದ ಪರಲೋಕದವುಗಳನ್ನು ಪಡೆಯಲು ಪ್ರಯತ್ನಿಸಿರಿ. ಕ್ರಿಸ್ತ ಯೇಸು ಪರಲೋಕದಲ್ಲಿ ದೇವರ ಬಲಗಡೆ ಆಸನಾರೂಢನಾಗಿದ್ದಾನೆ. ಪರಲೋಕದವುಗಳನ್ನು ಮಾತ್ರ ಆಲೋಚಿಸಿ, ಭೂಲೋಕದವುಗಳನ್ನು ಆಲೋಚಿಸಬೇಡಿ. ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ. ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.

ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ. ಇವು ದೇವರನ್ನು ಕೋಪಗೊಳಿಸುತ್ತವೆ. ಪೂರ್ವಕಾಲದ ನಿಮ್ಮ ದುಷ್ಟಜೀವನದಲ್ಲಿ ಈ ಕಾರ್ಯಗಳನ್ನೆಲ್ಲ ನೀವು ಮಾಡಿರುವಿರಿ.

ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ. 10 ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ. 11 ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.

ಇತರರೊಂದಿಗೆ ನಿಮ್ಮ ಹೊಸ ಜೀವನ

12 ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ. 14 ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು. 15 ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.

16 ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ. 17 ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಮನೆಯವರೊಂದಿಗೆ ನಿಮ್ಮ ಹೊಸ ಜೀವನ

18 ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ.

19 ಪುರುಷರೇ, ನಿಮ್ಮ ಪತ್ನಿಯರನ್ನು ಪ್ರೀತಿಸಿ, ಅವರೊಡನೆ ಸಾತ್ವಿಕರಾಗಿರಿ.

20 ಮಕ್ಕಳೇ, ನಿಮ್ಮ ತಂದೆತಾಯಿಗಳಿಗೆ ಎಲ್ಲಾ ವಿಷಯಗಳಲ್ಲಿಯೂ ವಿಧೇಯರಾಗಿರಿ. ಇದು ಪ್ರಭುವಿಗೆ ಸಂತೋಷವನ್ನು ಉಂಟುಮಾಡುವುದು.

21 ತಂದೆಗಳೇ, ನಿಮ್ಮ ಮಕ್ಕಳಿಗೆ ಕಿರುಕುಳ ಕೊಡಬೇಡಿ. ಇಲ್ಲವಾದರೆ ಅವರು ಕುಂದಿಹೋಗುವರು.

22 ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ. 23 ಎಲ್ಲಾ ಕಾರ್ಯಗಳನ್ನು ನಿಮ್ಮಿಂದಾದಷ್ಟು ಅತ್ಯುತ್ತಮವಾಗಿಯೇ ಮಾಡಿರಿ. ಯಾವುದೇ ಕಾರ್ಯವನ್ನಾಗಲಿ ಜನರಿಗಾಗಿ ಮಾಡದೆ ಪ್ರಭುವಿಗಾಗಿ ಮಾಡಿರಿ. 24 ಪ್ರಭುವಿನಿಂದಲೇ ನಿಮಗೆ ಪ್ರತಿಫಲ ದೊರೆಯುತ್ತದೆ ಎಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಆತನು ತನ್ನ ಜನರಿಗೆ ಮಾಡಿದ ವಾಗ್ದಾನವು ನಿಮ್ಮ ನೆನಪಿನಲ್ಲಿರಲಿ. 25 ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ.

ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.

ಕ್ರೈಸ್ತರು ಮಾಡತಕ್ಕ ಕಾರ್ಯಗಳು

ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ. ಈ ಸತ್ಯವನ್ನು ನಾನು ಜನರಿಗೆ ಸ್ಪಷ್ಟವಾಗಿಯೂ ಸರಳವಾಗಿಯೂ ತಿಳಿಸಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.

ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ. ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.

ಪೌಲನೊಂದಿಗಿರುವ ಜನರನ್ನು ಕುರಿತ ಸುದ್ಧಿ

ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ. ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ. ಒನೇಸಿಮನು ಕ್ರಿಸ್ತನಲ್ಲಿ ನಂಬಿಗಸ್ತನಾದ ಪ್ರೀತಿಯ ಸಹೋದರನಾಗಿದ್ದಾನೆ. ಅವನು ನಿಮ್ಮ ಊರಿನವನೇ. ಇಲ್ಲಿ ಸಂಭವಿಸಿದ್ದೆಲ್ಲವನ್ನು ಅವರು ನಿಮಗೆ ತಿಳಿಸುತ್ತಾರೆ.

10 ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.) 11 ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.

12 ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ. 13 ಅವನು ನಿಮಗೋಸ್ಕರ, ಲವೊದಿಕೀಯ ಮತ್ತು ಹಿರೆಯಾ ಪೊಲಿಯದ ಜನರಿಗೋಸ್ಕರ ಬಹಳ ಪ್ರಯಾಸಪಟ್ಟು ಕೆಲಸ ಮಾಡಿದನೆಂಬುದು ನನಗೆ ತಿಳಿದಿದೆ. 14 ದೇಮನು ಮತ್ತು ಪ್ರೀತಿಯ ಸ್ನೇಹಿತನಾದ ವೈದ್ಯ ಲೂಕನು ವಂದನೆಗಳನ್ನು ಹೇಳುತ್ತಾರೆ.

15 ಲವೊದಿಕೀಯದಲ್ಲಿರುವ ಸಹೋದರ ಸಹೋದರಿಯರಿಗೆ ವಂದನೆಗಳನ್ನು ತಿಳಿಸಿರಿ. ನುಂಫಳಿಗೂ ಅವಳ ಮನೆಯಲ್ಲಿ ಸೇರುವ ಸಭೆಯವರಿಗೂ ವಂದನೆಗಳನ್ನು ತಿಳಿಸಿರಿ. 16 ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ. 17 ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.

18 ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International