Beginning
ದೇವರ ಮಗನ ಆಗಮನ
(ಮತ್ತಾಯ 21:33-46; ಲೂಕ 20:9-19)
12 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.
2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು. 3 ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು. 4 ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು. 5 ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
6 “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
7 “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು, 8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.
9 “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ. 10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’(A)”
12 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.
ಯೇಸುವನ್ನು ವಂಚಿಸಲು ಯೆಹೂದ್ಯನಾಯಕರ ಪ್ರಯತ್ನ
(ಮತ್ತಾಯ 22:15-22; ಲೂಕ 20:20-26)
13 ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು. 14 ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು[a] ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು. 16 ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.
17 ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.
ಯೇಸುವನ್ನು ವಂಚಿಸಲು ಸದ್ದುಕಾಯರ ಪ್ರಯತ್ನ
(ಮತ್ತಾಯ 22:23-33; ಲೂಕ 20:27-40)
18 ನಂತರ ಸದ್ದುಕಾಯರಲ್ಲಿ (ಸದ್ದುಕಾಯರು ಪುನರುತ್ಥಾನವಿಲ್ಲವೆಂದು ನಂಬುತ್ತಾರೆ.) ಕೆಲವರು ಯೇಸುವಿನ ಬಳಿಗೆ ಬಂದು, 19 “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.[b] 20 ಏಳು ಜನ ಸಹೋದರರಿದ್ದರು. ಮೊದಲನೆಯ ಸಹೋದರನು ಮದುವೆ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತುಹೋದನು. 21 ಆದ್ದರಿಂದ ಎರಡನೆಯ ಸಹೋದರನು ಆಕೆಯನ್ನು ಮದುವೆಯಾದನು. ಆದರೆ ಅವನೂ ಮಕ್ಕಳಿಲ್ಲದೆ ಸತ್ತುಹೋದನು. ಮೂರನೆಯ ಸಹೋದರನಿಗೂ ಹೀಗೆಯೇ ಆಯಿತು. 22 ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿ ಆಕೆಯಲ್ಲಿ ಮಕ್ಕಳಿಲ್ಲದೆ ಸತ್ತುಹೋದರು. ಕೊನೆಗೆ ಆಕೆಯೂ ಸತ್ತುಹೋದಳು. 23 ಹೀಗಿರಲು ಜನರು ಪುನರುತ್ಥಾನ ಹೊಂದಿದಾಗ ಆಕೆಯು ಯಾರ ಹೆಂಡತಿಯಾಗುವಳು?” ಎಂದರು.
24 ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ. 25 ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ. 26 ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’(B) ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು. 27 ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.”[c]
ಅತ್ಯಂತ ಮುಖ್ಯ ಆಜ್ಞೆ ಯಾವುದು?
(ಮತ್ತಾಯ 22:34-40; ಲೂಕ 10:25-28)
28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
29 ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು. 30 ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’(C) ಇದೇ ಅತ್ಯಂತ ಮುಖ್ಯವಾದ ಆಜ್ಞೆ. 31 ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’(D) ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.
32 ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು. 33 ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.
34 ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.
ಮೆಸ್ಸೀಯನು ದಾವೀದನ ಮಗನೋ ಅಥವಾ ದಾವೀದನ ಪ್ರಭುವೋ?
(ಮತ್ತಾಯ 22:41-46; ಲೂಕ 20:41-44)
35 ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ?
36 ‘ಪ್ರಭುವು ನನ್ನ ಪ್ರಭುವಿಗೆ,
ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ
ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’(E)
ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ! 37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.
ಯೇಸು ಧರ್ಮೋಪದೇಶಕರನ್ನು ಖಂಡಿಸಿದ್ದು
(ಮತ್ತಾಯ 23:6-7; ಲೂಕ 20:45-47)
38 ಯೇಸು ತನ್ನ ಉಪದೇಶವನ್ನು ಮುಂದುವರಿಸಿ, “ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ. ಅವರು ಪೇಟೆಬೀದಿಗಳಲ್ಲಿ ಜನರಿಂದ ಗೌರವ ಪಡೆಯಲು ಅಪೇಕ್ಷಿಸುತ್ತಾರೆ. 39 ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ. 40 ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.
ಬಡವಿಧವೆಯ ಕಾಣಿಕೆ
(ಲೂಕ 21:1-4)
41 ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು. 42 ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು[d] ಅಂದರೆ ಒಂದು ಪೈಸೆಯನ್ನು ಹಾಕಿದಳು.
43 ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ. 44 ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.
ದೇವಾಲಯದ ಮುಂದಿನ ವಿನಾಶ
(ಮತ್ತಾಯ 24:1-44; ಲೂಕ 21:5-33)
13 ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ಈ ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು.
2 ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.
3 ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು. 4 ಆ ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.
5 ಅದಕ್ಕೆ ಯೇಸು, “ಎಚ್ಚರಿಕೆಯಿಂದಿರಿ! ನಿಮಗೆ ಮೋಸ ಮಾಡಲು ಯಾರಿಗೂ ಆಸ್ಪದ ಕೊಡಬೇಡಿ. 6 ಅನೇಕ ಜನರು ಬಂದು, ‘ನಾನೇ ಕ್ರಿಸ್ತನು; ನಾನೇ ಕ್ರಿಸ್ತನು’ ಎನ್ನುತ್ತಾ ಅನೇಕ ಜನರನ್ನು ಮೋಸಗೊಳಿಸುತ್ತಾರೆ. 7 ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು. 8 ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
9 “ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು. 10 ಈ ಸಂಗತಿಗಳು ಸಂಭವಿಸುವುದಕ್ಕಿಂತ ಮೊದಲು ನೀವು ಜನರಿಗೆಲ್ಲ ಸುವಾರ್ತೆಯನ್ನು ತಿಳಿಸಬೇಕು. 11 ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.
12 “ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 13 ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.
14 “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು. 15 ಮಾಳಿಗೆಯ ಮೇಲಿರುವವನು ಕೆಳಗಿಳಿದು ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ. 16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳಲು ಹಿಂತಿರುಗದಿರಲಿ.
17 “ಆ ಸಮಯವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಎಳೆಕೂಸುಗಳನ್ನು ಹೊಂದಿರುವ ತಾಯಂದಿರಿಗೆ ಬಹಳ ಸಂಕಟಕರವಾಗಿರುತ್ತದೆ. 18 ಈ ಸಂಗತಿಗಳು ಚಳಿಗಾಲದಲ್ಲಿ ನಡೆಯದಂತೆ ಪ್ರಾರ್ಥನೆ ಮಾಡಿರಿ. 19 ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ. 20 ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು.
21 “ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ. 22 ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ. 23 ಆದ್ದರಿಂದ ಎಚ್ಚರಿಕೆಯಿಂದಿರಿ, ಇದು ನಡೆಯುವ ಮುಂಚೆ ಇದೆಲ್ಲದರ ಬಗ್ಗೆ ನಿಮ್ಮನ್ನು ಎಚ್ಚರಿಸಿದ್ದೇನೆ.
24 “ಈ ಸಂಕಟವು ತೀರಿದ ಮೇಲೆ,
‘ಸೂರ್ಯನು ಕತ್ತಲಾಗುತ್ತಾನೆ.
ಚಂದ್ರನು ಬೆಳಕನ್ನು ಕೊಡುವುದಿಲ್ಲ.
25 ನಕ್ಷತ್ರಗಳು ಆಕಾಶದಿಂದ ಬೀಳುವವು
ಮತ್ತು ಆಕಾಶದಲ್ಲಿರುವ ಶಕ್ತಿಗಳು ನಡುಗುವವು.’[e]
26 “ಆಗ ಮನುಷ್ಯಕುಮಾರನು ಅಧಿಕಾರದಿಂದಲೂ ಮಹಾಮಹಿಮೆಯೊಡನೆಯೂ ಮೇಘಗಳಲ್ಲಿ ಬರುವುದನ್ನು ಜನರು ನೋಡುತ್ತಾರೆ. 27 ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.
28 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. 29 ಅಂತೆಯೇ ನಾನು ನಿಮಗೆ ಹೇಳಿದ ಈ ಸಂಗತಿಗಳು ನೆರವೇರುವುದನ್ನು ನೀವು ನೋಡುವಾಗ, ಸಮಯವು ಹತ್ತಿರವಾಗಿದೆಯೆಂದೂ ಬರಲು ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳಿರಿ. 30 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ. 31 ಭೂಮ್ಯಾಕಾಶಗಳು ನಾಶವಾಗುತ್ತವೆ. ಆದರೆ ನಾನು ಹೇಳಿದ ಮಾತುಗಳು ಎಂದೆಂದಿಗೂ ನಾಶವಾಗುವುದಿಲ್ಲ.
32 “ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ. 33 ಎಚ್ಚರಿಕೆಯಿಂದಿರಿ! ಯಾವಾಗಲೂ ಸಿದ್ಧರಾಗಿರಿ! ಆ ಸಮಯ ಯಾವಾಗ ಬರುತ್ತದೆಂದು ನಿಮಗೆ ತಿಳಿದಿಲ್ಲ.
34 “ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ, 35 ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು. 36 ಯಜಮಾನನು ಬೇಗನೆ ಹಿಂತಿರುಗಿ ಬರಬಹುದು. ನೀವು ಯಾವಾಗಲೂ ಸಿದ್ಧವಾಗಿದ್ದರೆ, ಅವನು ಬಂದಾಗ ನೀವು ನಿದ್ರಿಸುತ್ತಿರುವುದಿಲ್ಲ. 37 ನಾನು ನಿಮಗೂ ಪ್ರತಿಯೊಬ್ಬರಿಗೂ ಹೇಳುವುದೇನೆಂದರೆ, ‘ಸಿದ್ಧರಾಗಿರಿ!’”
Kannada Holy Bible: Easy-to-Read Version. All rights reserved. © 1997 Bible League International