Beginning
ಪೇತ್ರನು ಜೆರುಸಲೇಮಿಗೆ ಹಿಂತಿರುಗುವನು
11 ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು. 2 ಆದರೆ ಪೇತ್ರನು ಜೆರುಸಲೇಮಿಗೆ ಬಂದಾಗ ಕೆಲವು ಯೆಹೂದ್ಯ ವಿಶ್ವಾಸಿಗಳು[a] ಅವನೊಂದಿಗೆ ವಾದ ಮಾಡಿದರು. 3 ಅವರು, “ಯೆಹೂದ್ಯರಲ್ಲದವರ ಮತ್ತು ಸುನ್ನತಿ ಮಾಡಿಸಿಕೊಂಡಿಲ್ಲದವರ ಮನೆಗಳಿಗೆ ನೀನು ಹೋದೆ! ನೀನು ಅವರೊಂದಿಗೆ ಊಟವನ್ನು ಸಹ ಮಾಡಿದೆ!” ಎಂದು ಹೇಳಿದರು.
4 ಆದ್ದರಿಂದ ಪೇತ್ರನು ನಡೆದ ಸಂಗತಿಯನ್ನೆಲ್ಲಾ ಅವರಿಗೆ ವಿವರಿಸಿದನು. 5 ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು. 6 ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು. 7 ಆಗ, ‘ಪೇತ್ರನೇ, ಎದ್ದೇಳು! ಇವುಗಳಲ್ಲಿ ಯಾವುದನ್ನು ಬೇಕಾದರೂ ಕೊಯ್ದುತಿನ್ನು!’ ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
8 “ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು.
9 “ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು.
10 “ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು. 11 ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು. 12 ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು. 13 ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ. 14 ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.
15 “ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ[b] ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು. 16 ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು. 17 ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.
18 ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
ಅಂತಿಯೋಕ್ಯಕ್ಕೆ ಸುವಾರ್ತೆ
19 ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು. 20 ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು. 21 ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.
22 ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. 23-24 ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
25 ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು. 26 ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
27 ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು. 28 ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.) 29 ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು. 30 ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.
ಹೆರೋದ ಅಗ್ರಿಪ್ಪನಿಂದ ಸಭೆಗೆ ಹಿಂಸೆ
12 ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ, 2 ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಯಾಕೋಬನು ಯೋಹಾನನ ಅಣ್ಣ. 3 ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು. 4 ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು. 5 ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.
ಪೇತ್ರನಿಗೆ ಸೆರೆಮನೆಯಿಂದ ಬಿಡುಗಡೆ
6 ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು. 7 ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು. 8 ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.
9 ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು. 10 ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.
11 ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.
12 ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು. 13 ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು. 14 ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು. 15 ಆ ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.
16 ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ಆ ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು. 17 ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.
18 ಮರುದಿನ, ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು. 19 ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು.
ಹೆರೋದ ಅಗ್ರಿಪ್ಪನ ಮರಣ
ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು. 20 ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.
21 ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು. 22 ಆ ಜನರು, “ಈ ಧ್ವನಿಯು ಮನುಷ್ಯನದಲ್ಲ, ದೇವರದೇ!” ಎಂದು ಕೂಗಿದರು. 23 ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.
24 ದೇವರ ಸಂದೇಶವು ಹಬ್ಬುತ್ತಿತ್ತು ಮತ್ತು ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದ ವಿಶ್ವಾಸಿಗಳ ಸಮುದಾಯವು ದೊಡ್ಡದಾಗತೊಡಗಿತು.
25 ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು.
ಬಾರ್ನಬ ಮತ್ತು ಸೌಲರಿಗೆ ವಹಿಸಲಾದ ವಿಶೇಷಕಾರ್ಯ
13 ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ. 2 ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.
3 ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.
ಸೈಪ್ರಸ್ನಲ್ಲಿ ಬಾರ್ನಬ ಮತ್ತು ಸೌಲರು
4 ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು. 5 ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ. 7 ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು. 8 ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು. 9 ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ, 10 ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ! 11 ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು.
ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು. 12 ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.
ಪೌಲ ಬಾರ್ನಬರು ಸೈಪ್ರಸ್ನಿಂದ ತೆರಳುವರು
13 ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು. 14 ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು.
ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. 15 ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
16 ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ! 17 ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು. 18 ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು. 19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು. 20 ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು.
“ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು. 21 ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು. 22 ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.
23 “ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು. 24 ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು. 25 ‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.
26 “ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ. 27 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು! 28 ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 “ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು. 30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು! 31 ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.
32 “ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ. 33 ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ:
‘ನೀನೇ ನನ್ನ ಮಗನು.
ಇಂದೇ ನಾನು ನಿನ್ನನ್ನು ಪಡೆದೆನು.’(A)
34 ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ:
‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ
ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’(B)
35 ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ:
‘ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.’(C)
36 “ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು! 37 ಆದರೆ ದೇವರಿಂದ ಜೀವಂತವಾಗಿ ಎಬ್ಬಿಸಲ್ಪಟ್ಟ ಯೇಸುವಿನ ದೇಹ ಸಮಾಧಿಯಲ್ಲಿ ಕೊಳೆಯಲ್ಪಡಲಿಲ್ಲ. 38-39 ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು. 40 ಆದ್ದರಿಂದ ಪ್ರವಾದಿಗಳು ತಿಳಿಸಿರುವ ಈ ಕೆಲವು ಸಂಗತಿಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:
41 ‘ಅಪಹಾಸ್ಯ ಮಾಡುವವರೇ,
ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ.
ನೀವು ನಂಬಲೊಲ್ಲದ ಒಂದು ಕಾರ್ಯವನ್ನು
ನಾನು ಮಾಡುವೆನು.
ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ
ನೀವು ನಂಬುವುದಿಲ್ಲ!’”(D)
42 ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು. 43 ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
44 ಮುಂದಿನ ಸಬ್ಬತ್ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು. 45 ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು. 46 ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ! 47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ:
‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು
ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’(E)”
48 ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.
49 ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು. 50 ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು. 51 ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ,[c] ಇಕೋನಿಯಾ ಪಟ್ಟಣಕ್ಕೆ ಹೋದರು. 52 ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.
Kannada Holy Bible: Easy-to-Read Version. All rights reserved. © 1997 Bible League International