Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 24-25

ನೆಲಸಮವಾಗಲಿರುವ ಮಹಾದೇವಾಲಯ

(ಮಾರ್ಕ 13:1-31; ಲೂಕ 21:5-33)

24 ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು. ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.

ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.

ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು. ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು. ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ. ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.

“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು. 10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು. 11 ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು. 12 ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು. 13 ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ. 14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.

15 “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು[a] ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.) 16 ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. 17 ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ. 18 ಹೊಲದಲ್ಲಿರುವವನು ತನ್ನ ಮೇಲಂಗಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮನೆಗೆ ಹಿಂತಿರುಗದಿರಲಿ.

19 “ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ! 20 ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ. 21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.

22 “ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.

23 “ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ. 24 ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು. 25 ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.

26 “‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ. 27 ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು. 28 ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.

29 “ಆ ದಿನಗಳ ಸಂಕಟವು ತೀರಿದ ಕೂಡಲೇ,

‘ಸೂರ್ಯನು ಕತ್ತಲಾಗುವನು.
    ಚಂದ್ರನು ಕಾಂತಿಹೀನನಾಗುವನು.
ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು.
    ಆಕಾಶಮಂಡಲವು ಕಂಪಿಸುವುದು.’(A)

30 “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು. 31 ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.

32 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. 33 ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. 34 ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ! 35 ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!

ಆ ಸಮಯ ದೇವರೊಬ್ಬನಿಗೆ ಗೊತ್ತಿದೆ

(ಮಾರ್ಕ 13:32,35; ಲೂಕ 17:26-30,34-36)

36 “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.

37 “ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ. 38 ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು. 39 ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು.

“ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು. 40 ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. 41 ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.

42 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು. 43 ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ. 44 ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಒಳ್ಳೆಯ ಸೇವಕ ಮತ್ತು ದುಷ್ಟ ಸೇವಕ

(ಮಾರ್ಕ 13:33-37; ಲೂಕ 12:41-48)

45 “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ. 46 ತನಗೆ ಕೊಟ್ಟ ಕೆಲಸವನ್ನು ಮಾಡುತ್ತಿರುವಾಗ ಯಜಮಾನನು ಬಂದರೆ ಆ ಸೇವಕನಿಗೆ ಬಹಳ ಸಂತೋಷವಾಗುತ್ತದೆ. 47 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.

48 “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ? 49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು. 50 ಹೀಗೆ ಅವನಿನ್ನೂ ಸಿದ್ಧನಾಗಿಲ್ಲದಿರುವಾಗ ಯಜಮಾನನು ಅನಿರೀಕ್ಷಿತವಾಗಿ ಬಂದು 51 ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.

ಹತ್ತು ಮಂದಿ ಕನ್ನಿಕೆಯರನ್ನು ಕುರಿತ ಸಾಮ್ಯ

25 “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು. ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು. ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು. ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.

“ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.

“ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು. ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.

“ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.

10 “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.

11 “ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು.

12 “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.

13 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.

ಮೂವರು ಸೇವಕರನ್ನು ಕುರಿತ ಸಾಮ್ಯ

(ಲೂಕ 19:11-27)

14 “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು. 15 ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು[b] ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು. 16 ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು. 17 ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು. 18 ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು.

19 “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು. 20 ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.

21 “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.

22 “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.

23 “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.

24 “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು. 25 ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು.

26 “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ? 27 ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು.

28 “ಬಳಿಕ ಯಜಮಾನನು ತನ್ನ ಬೇರೆ ಸೇವಕರಿಗೆ, ‘ಅವನ ಒಂದು ತಲಾಂತನ್ನು ತೆಗೆದುಕೊಂಡು ಐದು ತಲಾಂತು ಹೊಂದಿರುವ ಸೇವಕನಿಗೆ ಕೊಡಿರಿ. 29 ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು. 30 ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು.

ಸರ್ವರಿಗೂ ಮನುಷ್ಯಕುಮಾರನು ನೀಡುವ ತೀರ್ಪು

31 “ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ. 32 ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು; 33 ಮನುಷ್ಯಕುಮಾರನು ಕುರಿಗಳನ್ನು ತನ್ನ ಬಲಗಡೆಯಲ್ಲಿಯೂ ಮತ್ತು ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.

34 “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ. 35 ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ. 36 ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.

37 “ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು? 38 ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು? 39 ನೀನು ಕಾಯಿಲೆ ಬಿದ್ದಿದ್ದನ್ನು ಅಥವಾ ಸೆರೆಯಲ್ಲಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ಆರೈಕೆ ಮಾಡಿದೆವು?’ ಎಂದು ಹೇಳುವರು.

40 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.

41 “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. 42 ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ. 43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.

44 “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.

45 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.

46 “ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International