Beginning
ಸ್ತೆಫನನ ಪ್ರಸಂಗ
7 ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು. 2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು. 3 ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’(A) ಎಂದು ಹೇಳಿದನು.
4 “ಆದ್ದರಿಂದ ಅಬ್ರಹಾಮನು ಖಾಲ್ದೆಯ[a] ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು. 5 ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)
6 “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು. 7 ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’(B) ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’(C) ಎಂದು ಹೇಳಿದನು.
8 “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
9 “ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು. 10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು. 11 ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.
12 “ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.) 13 ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು. 14 ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು. 15 ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು. 16 ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)
17 “ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.) 18 ಬಳಿಕ, ಬೇರೊಬ್ಬ ರಾಜನು ಈಜಿಪ್ಟನ್ನು ಆಳಲಾರಂಭಿಸಿದನು. ಅವನಿಗೆ ಯೋಸೇಫನ ಬಗ್ಗೆ ಏನೂ ತಿಳಿದಿರಲಿಲ್ಲ. 19 ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು.
20 “ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು. 21 ಅವರು ಮೋಶೆಯನ್ನು ಹೊರಗೆ ಹಾಕಿದಾಗ ಫರೋಹನ ಮಗಳು ಅವನನ್ನು ತೆಗೆದುಕೊಂಡಳು. ಆಕೆಯು ಅವನನ್ನು ತನ್ನ ಸ್ವಂತ ಮಗನಂತೆ ಬೆಳೆಸಿದಳು. 22 ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು.
23 “ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು. 24 ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು. 25 ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.
26 “ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು. 27 ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ! 28 ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲುವೆಯಾ?’(D) ಎಂದು ಹೇಳಿದನು. 29 ಇದನ್ನು ಕೇಳಿದ್ದೇ ಮೋಶೆಯು ಈಜಿಪ್ಟನ್ನು ಬಿಟ್ಟು ಮಿದ್ಯಾನ್ಯರ ನಾಡಿಗೆ ಹೋಗಿ ವಿದೇಶಿಯವನಂತೆ ವಾಸಿಸತೊಡಗಿದನು. ಅಲ್ಲಿ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.
30 “ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು. 31 ಮೋಶೆಯು ಆಶ್ಚರ್ಯದಿಂದ ನೋಡಲು ಸಮೀಪಕ್ಕೆ ಹೋದನು. ಆಗ ಮೋಶೆಗೆ ವಾಣಿಯೊಂದು ಕೇಳಿಸಿತು. ಅದು ಪ್ರಭುವಿನ ವಾಣಿಯಾಗಿತ್ತು. 32 ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’(E) ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.
33 “ಪ್ರಭುವು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು, ಈಗ ನೀನು ನಿಂತುಕೊಂಡಿರುವ ಸ್ಥಳ ಪರಿಶುದ್ಧವಾದದ್ದು. 34 ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’(F) ಎಂದು ಹೇಳಿದನು.
35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ. 36 ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
37 “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’(G) ಎಂದು ಹೇಳಿದನು. 38 ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
39 “ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು. 40 ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’(H) ಎಂದರು. 41 ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು! 42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ,
‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ
ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.
43 ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು
ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ.
ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು.
ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’(I)
44 “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು[b] ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು. 45 ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು. 46 ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು. 47 ಆದರೆ ದೇವಾಲಯವನ್ನು ಕಟ್ಟಿದ್ದು (ದಾವೀದನ ಮಗನಾದ) ಸೊಲೊಮೋನನೇ.
48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:
49 ‘ಪ್ರಭುವು ಹೀಗೆನ್ನುತ್ತಾನೆ,
ಪರಲೋಕವು ನನ್ನ ಸಿಂಹಾಸನ.
ಭೂಮಿಯು ನನ್ನ ಪಾದಪೀಠ.
ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ?
ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
50 ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’(J)”
51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ! 52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ. 53 ದೇವರು ತನ್ನ ದೂತರ ಮೂಲಕ ಕೊಟ್ಟ ಮೋಶೆಯ ಧರ್ಮಶಾಸ್ತ್ರವನ್ನು ಪಡೆದುಕೊಂಡ ನೀವೇ ಅದಕ್ಕೆ ವಿಧೇಯರಾಗುವುದಿಲ್ಲ!”
ಸ್ತೆಫನನು ಕೊಲ್ಲಲ್ಪಟ್ಟನು
54 ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು. 55 ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು, 56 “ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.
57 ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು, 58 ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು, 59 ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು. 60 ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.
8 1-3 ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
ವಿಶ್ವಾಸಿಗಳಿಗೆ ಹಿಂಸೆ
ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು. 4 ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.
ಸಮಾರ್ಯದಲ್ಲಿ ಫಿಲಿಪ್ಪನ ಉಪದೇಶ
5 ಫಿಲಿಪ್ಪನು ಸಮಾರ್ಯ ಪಟ್ಟಣಕ್ಕೆ ಹೋಗಿ ಕ್ರಿಸ್ತನ ಬಗ್ಗೆ ಉಪದೇಶಿಸಿದನು. 6 ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು. 7 ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು. 8 ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು.
9 ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು. 10 ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು. 11 ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು. 12 ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. 13 ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.
14 ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು. 15 ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು. 16 ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು. 17 ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು.
18 ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ, 19 “ನಾನು ಯಾರ ಮೇಲೆ ಕೈಯಿಟ್ಟರೂ ಅವರಿಗೆ ಪವಿತ್ರಾತ್ಮನು ದೊರೆಯುವಂಥ ಶಕ್ತಿಯನ್ನು ನನಗೆ ಕೊಡಿರಿ” ಎಂದು ಹೇಳಿದನು.
20 ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ. 21 ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ. 22 ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು. 23 ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು.
24 ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.
25 ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.
ಫಿಲಿಪ್ಪನು ಇಥಿಯೋಪಿಯದವನಿಗೆ ನೀಡಿದ ಉಪದೇಶ
26 ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.
27 ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು. 28 ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
29 ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು. 30 ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
31 ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು. 32 ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ:
“ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು.
ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು.
ಆತನು ಬಾಯಿ ತೆರೆಯಲಿಲ್ಲ.
33 ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ.
ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ!
ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?”(K)
34 ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು. 35 ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.
36 ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು. 37 [c] 38 ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದುಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. 39 ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು. 40 ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.
Kannada Holy Bible: Easy-to-Read Version. All rights reserved. © 1997 Bible League International