Print Page Options
Previous Prev Day Next DayNext

Chronological

Read the Bible in the chronological order in which its stories and events occurred.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 6

ರಚನೆಗಾರ: ದಾವೀದ.

ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
    ರೋಷದಿಂದ ನನ್ನನ್ನು ದಂಡಿಸಬೇಡ.
ಯೆಹೋವನೇ, ನನ್ನನ್ನು ಕನಿಕರಿಸು!
    ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ,
ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.
ನನ್ನ ಇಡೀ ದೇಹ ನಡುಗುತ್ತಿದೆ.
    ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು?
ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು!
    ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು.
ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ?
    ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ?
    ಆದ್ದರಿಂದ ನನ್ನನ್ನು ಗುಣಪಡಿಸು.

ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು.
    ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ.
ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ.
    ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.
ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ.
    ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.

ದುಷ್ಟರೇ, ತೊಲಗಿಹೋಗಿರಿ.
    ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ.
    ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.

10 ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು.
    ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.

ಕೀರ್ತನೆಗಳು 8-10

ರಚನೆಗಾರ: ದಾವೀದ.

ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು.
    ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.

ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ;
    ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ
    ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು?
    ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು?
ಮನುಷ್ಯರು ಎಷ್ಟರವರು?
    ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?

ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ.
    ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ.
    ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ.
    ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ
    ದೊರೆತನ ಮಾಡುವರು.
ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.

ರಚನೆಗಾರ: ದಾವೀದ.

ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು.
    ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು.
    ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.
ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು.
    ಆದರೆ ಅವರು ಬಿದ್ದು ನಾಶವಾದರು.

ನೀನು ನೀತಿವಂತನಾದ ನ್ಯಾಯಾಧಿಪತಿ.
    ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ.
    ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.
ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ.
    ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.
ವೈರಿಗಳು ಇಲ್ಲವಾದರು.
    ನೀನು ಅವರ ನಗರಗಳನ್ನು ನಾಶಮಾಡಿದೆ!
    ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.

ಯೆಹೋವನಾದರೋ ಶಾಶ್ವತವಾಗಿ ಆಳುವನು.
    ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ.
ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು.
    ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.
ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ
    ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.

10 ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು.
    ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.

11 ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ.
    ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
12 ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು
    ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.

13 “ಯೆಹೋವನೇ, ನನ್ನನ್ನು ಕನಿಕರಿಸು.
    ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ.
    ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”
14 ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು.
    ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.

15 ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು;
    ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.
16 ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ
    ಆತನ ನೀತಿಯು ಪ್ರಖ್ಯಾತವಾಯಿತು.

17 ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು.
    ಅವರು ಮರಣದ ಸ್ಥಳಕ್ಕೆ ಹೋಗುವರು.
18 ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ;
    ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ
    ದೇವರು ಅವರನ್ನು ಮರೆತುಬಿಡುವುದಿಲ್ಲ.

19 ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು.
    ಅವರು ಬಲಿಷ್ಠರಾಗಕೂಡದು.
20 ಯೆಹೋವನೇ, ಅವರಿಗೆ ಭಯಹುಟ್ಟಿಸು;
    ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.

10 ಯೆಹೋವನೇ, ನೀನು ಬಹುದೂರವಾಗಿರುವುದೇಕೆ?
    ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?
ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ,
    ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.
ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು.
    ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.
ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು;
    ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.
ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ.[a]
    ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.
ಅವರು, “ನಮ್ಮನ್ನು ಯಾವುದೂ ಕದಲಿಸದು;
    ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.
ಅವರು ಯಾವಾಗಲೂ ಶಪಿಸುತ್ತಾರೆ;
    ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ.
ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು
    ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು.
ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ.
    ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.
10 ಆ ದುಷ್ಟರು ಕುಗ್ಗಿಹೋದವರನ್ನು
    ಮತ್ತೆಮತ್ತೆ ಜಜ್ಜಿಹಾಕುವರು.
11 ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ!
    ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ!
    ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.

12 ಯೆಹೋವನೇ, ಎದ್ದೇಳು, ಕಾರ್ಯನಿರತನಾಗು!
    ದೇವರೇ, ಆ ದುಷ್ಟರನ್ನು ದಂಡಿಸು!
    ನಿಸ್ಸಹಾಯಕರನ್ನು ಮರೆತುಬಿಡಬೇಡ!

13 ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ?
    ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ?
14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ.
    ಅವುಗಳನ್ನು ನೋಡಿ ಕಾರ್ಯನಿರತನಾಗು.
ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು.
    ಅನಾಥರಿಗೆ ಸಹಾಯ ಮಾಡುವವನು ನೀನೇ.
    ಆದ್ದರಿಂದ ಅವರಿಗೆ ಸಹಾಯಮಾಡು!

15 ಕೆಡುಕರನ್ನು ನಾಶಮಾಡು.
    ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!
16 ಯೆಹೋವನು ಸದಾಕಾಲವೂ ರಾಜನಾಗಿರುವನು.
    ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.
17 ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ.
    ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.
18 ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು.
    ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.

ಕೀರ್ತನೆಗಳು 14

ರಚನೆಗಾರ: ದಾವೀದ.

14 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು.
    ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು.
    ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.

ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ
    ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ.
    ಎಲ್ಲರೂ ಕೆಟ್ಟುಹೋಗಿದ್ದಾರೆ.
ಒಳ್ಳೆಯದನ್ನು ಮಾಡುವವನು ಇಲ್ಲ;
    ಒಬ್ಬನಾದರೂ ಇಲ್ಲ.

ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ?
    ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ.
    ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5-6 ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ.
    ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ.
ಆದರೆ ದೇವರು ನೀತಿವಂತರೊಂದಿಗಿದ್ದಾನೆ.
    ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.

ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ?
    ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ.
ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು;
    ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.

ಕೀರ್ತನೆಗಳು 16

ರಚನೆಗಾರ: ದಾವೀದ.

16 ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು.
    ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.
ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು;
    ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.

ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ.
    ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ,
    ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ.
    ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
ನನ್ನ ಪಾಲು[a] ರಮಣೀಯವಾಗಿದೆ.
    ನನ್ನ ಸ್ವಾಸ್ತ್ಯವು[b] ಬಹು ಸುಂದರವಾಗಿದೆ.
ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು;
    ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.

ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ;
    ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ.
    ನನ್ನ ದೇಹವೂ ಸುರಕ್ಷಿತವಾಗಿರುವುದು.
10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ.
    ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ.
    ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು;
    ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.

ಕೀರ್ತನೆಗಳು 19

ರಚನೆಗಾರ: ದಾವೀದ.

19 ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು.
    ಗಗನವು ಆತನ ಕೈಕೆಲಸವನ್ನು ತಿಳಿಸುವುದು.
ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು.
    ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
ಅವುಗಳ ಮಾತಾಗಲಿ
    ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು.
ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ;
    ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ.

ಆಕಾಶವು ಸೂರ್ಯನಿಗೆ ಮನೆಯಂತಿದೆ.
    ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು.
ಕ್ರೀಡಾಪಟುವಿನಂತೆ
    ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ
    ಮತ್ತೊಂದು ಕೊನೆಗೆ ಓಡುತ್ತಾಹೋಗುವನು.
    ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.

ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ.
    ಅವು ದೇವಜನರಿಗೆ ಬಲವನ್ನು ಕೊಡುತ್ತವೆ.
ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ.
    ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ.
    ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ.
ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ.
    ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.

ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ;
    ಅದು ಶಾಶ್ವತವಾದದ್ದು.
ಯೆಹೋವನ ವಿಧಿಗಳು ಯಥಾರ್ಥವಾಗಿವೆ;
    ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.
10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮೂಲ್ಯವಾಗಿವೆ;
    ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.
11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ;
    ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.

12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ.
    ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ.
    ಆ ಪಾಪಗಳು ನನ್ನನ್ನು ಆಳದಿರಲಿ.
ನೀನು ಸಹಾಯಮಾಡಿದರೆ
    ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ.
    ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ.[a] ನನ್ನನ್ನು ರಕ್ಷಿಸುವಾತನು ನೀನೇ.

ಕೀರ್ತನೆಗಳು 21

ರಚನೆಗಾರ: ದಾವೀದ.

21 ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು.
    ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.
ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ
    ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.

ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ.
    ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.
ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ.
    ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.
ನೀನು ರಾಜನಿಗೆ ಜಯವನ್ನು ದೊರಕಿಸಿ
    ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.
ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ.
    ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.
ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;
    ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.
ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ.
    ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.
ಯೆಹೋವನೇ, ನೀನು ರಾಜನೊಂದಿರುವಾಗ
    ಅವನು ಉರಿಯುವ ಕುಲಿಮೆಯಂತಿರುವನು.
ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು;
    ಅವನು ಶತ್ರುಗಳನ್ನು ನಾಶಮಾಡುವನು.
10 ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ;
    ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.
11 ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು.
    ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.
12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ
    ಅವರು ಬೆನ್ನುಕೊಟ್ಟು ಓಡಿಹೋಗುವರು.

13 ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು.
    ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International