Print Page Options
Previous Prev Day Next DayNext

Chronological

Read the Bible in the chronological order in which its stories and events occurred.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 3-4

ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ.
    ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.

ಆದರೆ ಯೆಹೋವನೇ, ನೀನೇ ನನ್ನ ಗುರಾಣಿ.
    ನೀನೇ ನನ್ನ ಗೌರವಕ್ಕೆ ಆಧಾರ.
    ನನ್ನನ್ನು ಜಯವೀರನನ್ನಾಗಿ ಮಾಡು.

ನಾನು ಯೆಹೋವನಿಗೆ ಪ್ರಾರ್ಥಿಸಲು,
    ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.

ಯೆಹೋವನು ನನ್ನನ್ನು ಕಾಪಾಡುವುದರಿಂದ
    ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.
ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ
    ನನಗೆ ಭಯವಿಲ್ಲ.

ಯೆಹೋವನೇ, ಎದ್ದೇಳು!
    ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು!
ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ
    ಅವರ ಹಲ್ಲುಗಳು ಉದುರಿಹೋಗುತ್ತವೆ.

ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು.
    ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.

ರಚನೆಗಾರ: ದಾವೀದ.

ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು!
    ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು!
ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ
    ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ?
    ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?

ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ.
    ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.

ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ.
    ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ;
    ಯೆಹೋವನಲ್ಲಿಯೇ ಭರವಸೆಯಿಡಿರಿ!

“ನಮಗೆ ಒಳ್ಳೆಯದನ್ನು ಯಾರು ತೋರಿಸುವರು?
    ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು.
    ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.

ಕೀರ್ತನೆಗಳು 12-13

ರಚನೆಗಾರ: ದಾವೀದ.

12 ಯೆಹೋವನೇ, ನನ್ನನ್ನು ರಕ್ಷಿಸು!
    ಒಳ್ಳೆಯವರೆಲ್ಲಾ ಕೊನೆಗೊಂಡರು.
    ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು.
    ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ
    ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.
“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ.
    ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.

ಆದರೆ ಯೆಹೋವನು ಹೇಳುವುದೇನೆಂದರೆ:
    “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ.
ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ.
    ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”

ಯೆಹೋವನ ಮಾತುಗಳು
    ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.

ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು.
    ಅವರನ್ನು ಶಾಶ್ವತವಾಗಿ ಸಂರಕ್ಷಿಸು.
ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ
    ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.

ರಚನೆಗಾರ: ದಾವೀದ.

13 ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ?
    ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ?
    ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?
ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು?
    ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?

ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು.
    ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!
ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ
    ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.

ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ.
    ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.
ಯೆಹೋವನು ಮಹೋಪಕಾರಗಳನ್ನು ಮಾಡಿರುವುದರಿಂದ
    ಆತನಿಗೆ ಹರ್ಷಗೀತೆಗಳನ್ನು ಹಾಡುವೆನು.

ಕೀರ್ತನೆಗಳು 28

ರಚನೆಗಾರ: ದಾವೀದ.

28 ಯೆಹೋವನೇ, ನೀನೇ ನನ್ನ ಬಂಡೆ.
    ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ.
    ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ.
ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ
    ಜನರು ನನ್ನನ್ನು ಪರಿಗಣಿಸುವರು.
ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು.
    ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ.
    ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.[a]
ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು.
    ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು.
    ಅವರಿಗೆ ತಕ್ಕ ದಂಡನೆಯನ್ನು ಕೊಡು.
ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ
    ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಆತನು ಅವರನ್ನು ದಂಡಿಸಿ
    ನಿತ್ಯನಾಶಮಾಡುವನು.

ಯೆಹೋವನಿಗೆ ಸ್ತೋತ್ರವಾಗಲಿ!
    ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ.
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ.
    ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
    ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
ಯೆಹೋವನು ತನ್ನ ಜನರಿಗೆ ಬಲವೂ
    ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಯೆಹೋವನೇ, ನಿನ್ನ ಜನರನ್ನು ರಕ್ಷಿಸು,
    ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು!
    ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.

ಕೀರ್ತನೆಗಳು 55

ರಚನೆಗಾರ: ದಾವೀದ.

55 ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು.
    ನನ್ನ ವಿಜ್ಞಾಪನೆಗೆ ಕಿವಿಗೊಡು.
ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು.
    ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿಕೊಳ್ಳುವೆನು.
ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು.
    ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು.
    ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.
ನನ್ನ ಹೃದಯ ಬಡಿತವು ಮಿತಿಮೀರಿದೆ;
    ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ.
ನಾನು ಭಯದಿಂದ ನಡುಗುತ್ತಿದ್ದೇನೆ.
    ನಾನು ದಿಗಿಲುಗೊಂಡಿದ್ದೇನೆ.
ಆಹಾ, ನನಗೆ ಪಾರಿವಾಳದಂತೆ ರೆಕ್ಕೆಗಳಿದ್ದರೆ,
    ನಾನು ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
    ನಾನು ಅರಣ್ಯದಲ್ಲಿ ಬಹು ದೂರಕ್ಕೆ ಹಾರಿಹೋಗುತ್ತಿದ್ದೆನು.

ನಾನು ಓಡಿಹೋಗಿ
    ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು.
ನನ್ನ ಒಡೆಯನೇ, ಅವರ ಸುಳ್ಳುಗಳನ್ನು ನಿಲ್ಲಿಸು.
    ಈ ಪಟ್ಟಣದಲ್ಲಿ ಹಿಂಸೆಕಲಹಗಳು ಕಾಣುತ್ತಿವೆ.
10 ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ
    ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ.
11 ಬೀದಿಗಳಲ್ಲಿ ಅಪರಾಧಗಳು ಅತಿಯಾಗಿವೆ.
    ಜನರು ಎಲ್ಲೆಲ್ಲಿಯೂ ಸುಳ್ಳು ಹೇಳಿ ಮೋಸಮಾಡುತ್ತಿದ್ದಾರೆ.

12 ನನಗೆ ಅವಮಾನ ಮಾಡುವವನು
    ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು.
ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುವಾಗಿದ್ದಿದ್ದರೆ
    ಅಡಗಿಕೊಳ್ಳಬಹುದಿತ್ತು.
13 ಆದರೆ ನನಗೆ ಕೇಡುಮಾಡುತ್ತಿರುವವನು ನನ್ನ ಸಂಗಡಿಗನಾದ ನೀನೇ;
    ನನ್ನ ಸಹೋದ್ಯೋಗಿಯೂ ನನ್ನ ಸ್ನೇಹಿತನೂ ಆದ ನೀನೇ.
14 ನಾವು ಜನಸಮೂಹದ ನಡುವೆ ದೇವಾಲಯಕ್ಕೆ ಹೋಗುವಾಗ,
    ಗುಟ್ಟಾದ ವಿಷಯಗಳನ್ನು ಮಾತಾಡುತ್ತಿದ್ದೆವಲ್ಲಾ!

15 ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ!
    ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ!
    ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.

16 ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು.
    ಯೆಹೋವನು ನನಗೆ ಉತ್ತರ ಕೊಡುವನು.
17 ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು.
    ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!
18 ನಾನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದೇನೆ.
    ಆದರೆ ಪ್ರತಿಸಲವೂ ದೇವರು ನನ್ನನ್ನು ಪಾರುಮಾಡಿ, ಸುರಕ್ಷಿತವಾಗಿ ಬರಮಾಡಿದನು.
19 ದೇವರು ನನಗೆ ಕಿವಿಗೊಡುವನು.
    ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು.

ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ.
    ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.
20 ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು;
    ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.
21 ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು;
    ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು.
ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ
    ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.

22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು.
    ಆತನು ನಿನ್ನನ್ನು ಉದ್ಧಾರ ಮಾಡುವನು.
    ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.

23 ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ.
    ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು.
ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International