Print Page Options
Previous Prev Day Next DayNext

Chronological

Read the Bible in the chronological order in which its stories and events occurred.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 14

ಯೇಸುವಿನ ಕುರಿತು ಹೆರೋದನ ಅಭಿಪ್ರಾಯ

(ಮಾರ್ಕ 6:14-29; ಲೂಕ 9:7-9)

14 ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು. ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.

ಸ್ನಾನಿಕ ಯೋಹಾನನು ಕೊಲ್ಲಲ್ಪಟ್ಟ ರೀತಿ

ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ. ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ. ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.

ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು. ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು. ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.

ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು. 10 ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು. 11 ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು. 12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.

ಐದು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ

(ಮಾರ್ಕ 6:30-44; ಲೂಕ 9:10-17; ಯೋಹಾನ 6:1-14)

13 ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು. 14 ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.

15 ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.

16 ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು.

17 ಆಗ ಶಿಷ್ಯರು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ” ಎಂದು ಉತ್ತರಕೊಟ್ಟರು.

18 ಯೇಸು, “ಆ ರೊಟ್ಟಿ ಮತ್ತು ಮೀನುಗಳನ್ನು ನನ್ನ ಬಳಿಗೆ ತನ್ನಿರಿ” ಅಂದನು. 19 ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು. 20 ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು. 21 ಊಟ ಮಾಡಿದವರಲ್ಲಿ ಹೆಂಗಸರು ಮತ್ತು ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದುಸಾವಿರ ಇದ್ದರು.

ಸರೋವರದ ಮೇಲೆ ಯೇಸುವಿನ ಕಾಲುನಡಿಗೆ

(ಮಾರ್ಕ 6:45-52; ಯೋಹಾನ 6:15-21)

22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು. 23 ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು. 24 ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.

25 ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು. 26 ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು.

27 ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.

28 ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.

29 ಯೇಸು, “ಪೇತ್ರನೇ, ಬಾ” ಅಂದನು.

ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು. 30 ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.

31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.

32 ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು. 33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.

ಅನೇಕ ರೋಗಿಗಳಿಗೆ ಯೇಸುವಿನಿಂದ ಸ್ವಸ್ಥತೆ

(ಮಾರ್ಕ 6:53-56)

34 ಅವರು ಸರೋವರವನ್ನು ದಾಟಿ ಗೆನೆಸರೇತ್ ದಡಕ್ಕೆ ಬಂದರು. 35 ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು. 36 ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.

ಮಾರ್ಕ 6

ಸ್ವಂತ ಊರಿಗೆ ಯೇಸುವಿನ ಪ್ರಯಾಣ

(ಮತ್ತಾಯ 13:53-58; ಲೂಕ 4:16-30)

ಯೇಸು ಅಲ್ಲಿಂದ ಹೊರಟು, ತನ್ನ ಸ್ವಂತ ಊರಿಗೆ ಹೋದನು. ಆತನ ಶಿಷ್ಯರು ಆತನೊಂದಿಗೆ ಹೋದರು. ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು? ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.

ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು. ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ. ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.

ಯೇಸು ತನ್ನ ಅಪೊಸ್ತಲರನ್ನು ಸೇವೆಗೆ ಕಳುಹಿಸಿದ್ದು

(ಮತ್ತಾಯ 10:1,5-15; ಲೂಕ 9:1-6)

ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ. ಪಾದರಕ್ಷೆಗಳನ್ನು ತೊಟ್ಟುಕೊಳ್ಳಿರಿ. ನೀವು ಧರಿಸಿಕೊಂಡಿರುವ ಉಡುಪೇ ಸಾಕು. 10 ನೀವು ಒಂದು ಮನೆಯಲ್ಲಿ ಇಳಿದುಕೊಂಡ ಮೇಲೆ ಆ ಊರನ್ನು ಬಿಡುವವರೆಗೆ ಆ ಮನೆಯಲ್ಲಿರಿ. 11 ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”

12 ಶಿಷ್ಯರು ಅಲ್ಲಿಂದ ಹೊರಟು, ಇತರ ಸ್ಥಳಗಳಿಗೆ ಹೋಗಿ ಜನರಿಗೆ, “ನಿಮ್ಮಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಉಪದೇಶಿಸಿದರು. 13 ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಶಿಷ್ಯರು ಬಿಡುಗಡೆ ಮಾಡಿದರು ಮತ್ತು ಕಾಯಿಲೆಯ ಜನರಿಗೆ ಎಣ್ಣೆಯನ್ನು ಹಚ್ಚಿ ಗುಣಪಡಿಸಿದರು.

ಯೇಸುವಿನ ಕುರಿತು ಹೆರೋದನ ಅಭಿಪ್ರಾಯ

(ಮತ್ತಾಯ 14:1-12; ಲೂಕ 9:7-9)

14 ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.

15 ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು.

ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು” ಎಂದು ಹೇಳಿದರು.

16 ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.

ಸ್ನಾನಿಕ ಯೋಹಾನನು ಕೊಲ್ಲಲ್ಪಟ್ಟದ್ದರ ಬಗ್ಗೆ

17 ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ. 18 ಯೋಹಾನನು ಹೆರೋದನಿಗೆ, “ನೀನು ನಿನ್ನ ಅಣ್ಣನ ಪತ್ನಿಯನ್ನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದನು. 19 ಆದ್ದರಿಂದ ಹೆರೋದ್ಯಳು ಯೋಹಾನನನ್ನು ದ್ವೇಷಿಸಲಾರಂಭಿಸಿ ಅವನನ್ನು ಕೊಲ್ಲಿಸಬೇಕೆಂದಿದ್ದಳು. 20 ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.

21 ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು. 22 ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು.

ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ. 23 ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.

24 ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು.

ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.

25 ಆ ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು.

26 ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ. 27 ಆದ್ದರಿಂದ ರಾಜನು ಯೋಹಾನನ ತಲೆಯನ್ನು ಕತ್ತರಿಸಿ ತರಲು ಒಬ್ಬ ಸೈನಿಕನನ್ನು ಕಳುಹಿಸಿದನು. ಸೈನಿಕನು ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿ, 28 ಅದನ್ನು ಒಂದು ತಟ್ಟೆಯ ಮೇಲಿಟ್ಟು ತಂದು ಆ ಹುಡುಗಿಗೆ ಕೊಟ್ಟನು. ಅವಳು ಆ ತಲೆಯನ್ನು ತನ್ನ ತಾಯಿಗೆ ಕೊಟ್ಟಳು. 29 ನಡೆದ ಈ ಸಂಗತಿಯು ಯೋಹಾನನ ಶಿಷ್ಯರಿಗೆ ತಿಳಿಯಿತು. ಅವರು ಬಂದು, ಯೋಹಾನನ ದೇಹವನ್ನು ತೆಗೆದುಕೊಂಡು ಹೋಗಿ ಒಂದು ಸಮಾಧಿಯಲ್ಲಿಟ್ಟರು.

ಐದು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ

(ಮತ್ತಾಯ 14:13-21; ಲೂಕ 9:10-17; ಯೋಹಾನ 6:1-14)

30 ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು. 31 ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.

32 ಆದ್ದರಿಂದ ಯೇಸು ಮತ್ತು ಆತನ ಶಿಷ್ಯರು ಜನರಿಲ್ಲದ ಸ್ಥಳಕ್ಕೆ ದೋಣಿಯಲ್ಲಿ ಪ್ರತ್ಯೇಕವಾಗಿ ಹೊರಟರು. 33 ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು. 34 ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.

35 ಅಂದು ಬಹಳ ಹೊತ್ತಾಯಿತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸಿಸುತ್ತಿಲ್ಲ. ಈಗಾಗಲೇ ಬಹಳ ಹೊತ್ತಾಗಿದೆ. 36 ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ತೋಟಗಳಿಗೂ ಪಟ್ಟಣಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ” ಎಂದು ಹೇಳಿದರು.

37 ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು.

ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ! ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ[a] ಗಳಾದರೂ ಬೇಕು!” ಎಂದು ಹೇಳಿದರು.

38 ಯೇಸು ಶಿಷ್ಯರಿಗೆ, “ಈಗ ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಎಂದು ಹೇಳಿದನು.

ಶಿಷ್ಯರು ಹೋಗಿ ರೊಟ್ಟಿಗಳನ್ನು ಎಣಿಸಿ ಬಂದು, “ನಮ್ಮ ಬಳಿ ಐದು ರೊಟ್ಟಿಗಳಿವೆ ಮತ್ತು ಎರಡು ಮೀನುಗಳಿವೆ” ಎಂದು ಹೇಳಿದರು.

39 ಆಗ ಯೇಸು ಶಿಷ್ಯರಿಗೆ, “ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳಲು ಜನರಿಗೆ ತಿಳಿಸಿ” ಎಂದು ಹೇಳಿದನು. 40 ಅಂತೆಯೇ ಜನರೆಲ್ಲರೂ ಸಾಲುಸಾಲಾಗಿ ಕುಳಿತುಕೊಂಡರು. ಪ್ರತಿಯೊಂದು ಸಾಲಿನಲ್ಲಿಯೂ ಐವತ್ತರಿಂದ ನೂರು ಜನರಿದ್ದರು.

41 ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.

42 ಜನರೆಲ್ಲರೂ ಊಟಮಾಡಿ ತೃಪ್ತರಾದರು. 43 ಬಳಿಕ ಜನರು ತಿನ್ನಲಾರದೆ ಉಳಿಸಿದ ರೊಟ್ಟಿ ಮತ್ತು ಮೀನುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು. 44 ಅಂದು ಸುಮಾರು ಐದು ಸಾವಿರ ಜನ ಊಟಮಾಡಿದರು.

ನೀರಿನ ಮೇಲೆ ಕಾಲ್ನಡಿಗೆ

(ಮತ್ತಾಯ 14:22-33; ಯೋಹಾನ 6:15-21)

45 ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು. 46 ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.

47 ಅಂದು ರಾತ್ರಿ ದೋಣಿಯು ಸರೋವರದ ಮಧ್ಯದಲ್ಲಿಯೇ ಇದ್ದಿತು. ಯೇಸು ಒಬ್ಬನೇ ದಡದ ಮೇಲಿದ್ದನು. 48 ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು. 49 ಆದರೆ ನೀರಿನ ಮೇಲೆ ನಡೆಯುತ್ತಿದ್ದ ಆತನನ್ನು ಕಂಡ ಶಿಷ್ಯರು ಆತನನ್ನು ಭೂತವೆಂದು ಭ್ರಮಿಸಿಕೊಂಡು ಭಯದಿಂದ ಕಿರುಚಿದರು. 50 ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು. 51 ನಂತರ ಯೇಸು ತನ್ನ ಶಿಷ್ಯರಿದ್ದ ದೋಣಿಯೊಳಕ್ಕೆ ಹತ್ತಿದನು. ಆಗ ಗಾಳಿಯು ನಿಂತುಹೋಯಿತು. ಶಿಷ್ಯರಿಗೆ ಬಹಳ ಆಶ್ಚರ್ಯವಾಯಿತು. 52 ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ.

ಅನೇಕ ರೋಗಿಗಳಿಗೆ ಯೇಸುವಿನಿಂದ ಸ್ವಸ್ಥತೆ

(ಮತ್ತಾಯ 14:34-36)

53 ಯೇಸುವಿನ ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿಗೆ ಬಂದು ದೋಣಿಯನ್ನು ತೀರದಲ್ಲಿ ಕಟ್ಟಿದರು. 54 ಅವರು ದೋಣಿಯಿಂದ ಹೊರಕ್ಕೆ ಬಂದಾಗ ಜನರು ಯೇಸುವನ್ನು ಗುರುತು ಹಿಡಿದರು. 55 ಯೇಸು ಬಂದಿರುವ ಸುದ್ದಿಯನ್ನು ಆ ಪ್ರದೇಶದಲ್ಲಿರುವ ಜನರಿಗೆಲ್ಲಾ ತಿಳಿಸುವುದಕ್ಕಾಗಿ ಅವರು ಓಡಿಹೋದರು. ಯೇಸು ಹೋದ ಸ್ಥಳಗಳಿಗೆಲ್ಲ ಜನರು ಕಾಯಿಲೆಯ ಜನರನ್ನು ಹಾಸಿಗೆಗಳ ಮೇಲೆ ತಂದರು. 56 ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.

ಲೂಕ 9:1-17

ಯೇಸು ತನ್ನ ಅಪೊಸ್ತಲರನ್ನು ಸೇವೆಗೆ ಕಳುಹಿಸಿದ್ದು

(ಮತ್ತಾಯ 10:5-15; ಮಾರ್ಕ 6:7-13)

ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು. ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು. ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ. ನೀವು ಒಂದು ಮನೆಯಲ್ಲಿ ಇಳಿದುಕೊಂಡಾಗ, ಆ ಊರನ್ನು ಬಿಟ್ಟುಹೋಗುವ ಸಮಯದವರೆಗೂ ಅಲ್ಲೇ ತಂಗಿರಿ. ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”

ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು.

ಯೇಸುವಿನ ಬಗ್ಗೆ ಹೆರೋದನಿಗಾದ ಗಲಿಬಿಲಿ

(ಮತ್ತಾಯ 14:1-12; ಮಾರ್ಕ 6:14-29)

ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು. ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು. ಹೆರೋದನು, “ನಾನು ಯೋಹಾನನ ತಲೆಯನ್ನು ಕತ್ತರಿಸಿದೆನು. ಆದರೆ ಈ ಸಂಗತಿಗಳನ್ನು ಮಾಡುತ್ತಿರುವ ಈ ಮನುಷ್ಯನು ಯಾರು?” ಎಂದು ಆಲೋಚಿಸುತ್ತಾ ಯೇಸುವನ್ನು ನೋಡಲು ಪ್ರಯತ್ನಿಸಿದನು.

ಐದು ಸಾವಿರಕ್ಕಿಂತಲೂ ಹೆಚ್ಚು ಜನರಿಗೆ ಊಟ

(ಮತ್ತಾಯ 14:13-21; ಮಾರ್ಕ 6:30-44; ಯೋಹಾನ 6:1-14)

10 ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. 11 ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.

12 ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.

13 ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು.

ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು. 14 (ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.)

ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು.

15 ಅಂತೆಯೇ ಶಿಷ್ಯರು ಮಾಡಿದರು. ಜನರೆಲ್ಲರೂ ನೆಲದ ಮೇಲೆ ಕುಳಿತುಕೊಂಡರು. 16 ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು. 17 ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International