Chronological
ಯೇಸುವಿನ ರೂಪಾಂತರ
(ಮಾರ್ಕ 9:2-13; ಲೂಕ 9:28-36)
17 ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ. 2 ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು. 3 ಅಲ್ಲದೆ ಆತನೊಂದಿಗೆ ಇಬ್ಬರು ಪುರುಷರು ಮಾತಾಡುತ್ತಾ ನಿಂತಿದ್ದರು. ಅವರೇ ಮೋಶೆ ಮತ್ತು ಎಲೀಯ.
4 ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.
5 ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.
6 ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು. 7 ಆಗ ಆತನು ಶಿಷ್ಯರ ಬಳಿಗೆ ಬಂದು ಅವರನ್ನು ಮುಟ್ಟಿ, “ಏಳಿ, ಹೆದರಬೇಡಿ” ಎಂದನು. 8 ಅವರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.
9 ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.
10 ಶಿಷ್ಯರು ಯೇಸುವಿಗೆ, “ಕ್ರಿಸ್ತನು ಬರುವುದಕ್ಕಿಂತ ಮುಂಚೆ ಎಲೀಯನು ಬರಬೇಕಾಗಿದೆ ಎಂದು ಧರ್ಮೋಪದೇಶಕರು ಹೇಳುವುದೇಕೆ?” ಎಂದು ಕೇಳಿದರು.
11 ಅದಕ್ಕೆ ಯೇಸು, “ಎಲೀಯನು ಬರುತ್ತಾನೆಂದು ಅವರು ಹೇಳುವುದು ಸರಿ. ನಿಜವಾಗಿಯೂ ಎಲೀಯನು ಬಂದು ಎಲ್ಲಾ ವಿಷಯಗಳನ್ನು ಸರಿಪಡಿಸುವನು. 12 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು. 13 ಯೇಸು ಹೇಳುತ್ತಿರುವುದು ಸ್ನಾನಿಕನಾದ ಯೋಹಾನನನ್ನೇ ಕುರಿತು ಎಂದು ಶಿಷ್ಯರು ಗ್ರಹಿಸಿಕೊಂಡರು.
ಯೇಸುವಿನಿಂದ ಕಾಯಿಲೆಯ ಬಾಲಕನಿಗೆ ಸ್ವಸ್ಥತೆ
(ಮಾರ್ಕ 9:14-29; ಲೂಕ 9:37-43)
14 ಯೇಸು ಮತ್ತು ಆತನ ಶಿಷ್ಯರು ಜನರ ಬಳಿಗೆ ಹಿಂತಿರುಗಿ ಹೋದರು. ಒಬ್ಬನು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, 15 “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ. 16 ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
17 ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು. 18 ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.
19 ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು.
20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು. 21 [a]
ತನ್ನ ಮರಣವನ್ನು ಕುರಿತು ಯೇಸುವಿನ ಎರಡನೆ ಪ್ರಕಟನೆ
(ಮಾರ್ಕ 9:30-32; ಲೂಕ 9:43-45)
22 ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. 23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.
ತೆರಿಗೆಯ ಕುರಿತು ಯೇಸುವಿನ ಉಪದೇಶ
24 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.
25 ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು.
ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
26 ಪೇತ್ರನು, “ಬೇರೆ ಜನರು ತೆರಿಗೆಗಳನ್ನು ಸಲ್ಲಿಸುತ್ತಾರೆ” ಎಂದು ಉತ್ತರಕೊಟ್ಟನು.
ಯೇಸು ಪೇತ್ರನಿಗೆ, “ಹಾಗಾದರೆ ರಾಜನ ಮಕ್ಕಳು ತೆರಿಗೆ ಕೊಡಬೇಕಿಲ್ಲ. 27 ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.
9 ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.
ಮೋಶೆ ಮತ್ತು ಎಲೀಯರೊಡನೆ ಯೇಸು
(ಮತ್ತಾಯ 17:1-13; ಲೂಕ 9:28-36)
2 ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು. 3 ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ. 4 ಆಗ ಮೋಶೆ ಮತ್ತು ಎಲೀಯ ಅಲ್ಲಿ ಪ್ರತ್ಯಕ್ಷರಾಗಿ ಯೇಸುವಿನೊಂದಿಗೆ ಮಾತಾಡುತ್ತಿದ್ದರು.
5 ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು. 6 ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.
7 ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.
8 ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.
9 ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.
10 ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು. 11 ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.
12 ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ? 13 ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.
ಯೇಸುವಿನಿಂದ ಕಾಯಿಲೆ ಹುಡುಗನಿಗೆ ಸ್ವಸ್ಥತೆ
(ಮತ್ತಾಯ 17:14-20; ಲೂಕ 9:37-43)
14 ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು. 15 ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು.
16 ಯೇಸು, “ನೀವು ಯಾವುದರ ಬಗ್ಗೆ ವಾದಿಸುತ್ತಿದ್ದೀರಿ?” ಎಂದು ಕೇಳಿದನು.
17 ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ. 18 ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.
19 ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.
20 ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.
21 ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು.
ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ. 22 ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.
23 ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
24 ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.
25 ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.
26 ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು. 27 ಆದರೆ ಯೇಸು ಆ ಹುಡುಗನ ಕೈ ಹಿಡಿದೆತ್ತಿ, ಎದ್ದುನಿಲ್ಲಲು ಅವನಿಗೆ ಸಹಾಯಮಾಡಿದನು.
28 ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.
29 ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ
(ಮತ್ತಾಯ 17:22-23; ಲೂಕ 9:43-45)
30 ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು. 31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. 32 ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.
ಯಾರು ಅತ್ಯಂತ ದೊಡ್ಡವರು?
(ಮತ್ತಾಯ 18:1-5; ಲೂಕ 9:46-48)
33 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು. 34 ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು.
35 ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.
36 ನಂತರ ಯೇಸು ಒಂದು ಚಿಕ್ಕ ಮಗುವನ್ನು ಕರೆದು, ಆ ಮಗುವನ್ನು ಶಿಷ್ಯರ ಮುಂದೆ ನಿಲ್ಲಿಸಿ, ಅದನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ಅವರಿಗೆ, 37 “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.
ನಮ್ಮ ವೈರಿಯಲ್ಲದವನು ನಮ್ಮ ಮಿತ್ರನೇ
(ಲೂಕ 9:49-50)
38 ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.
39 ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ. 40 ನಮ್ಮ ವೈರಿಯಲ್ಲದವನು ನಮ್ಮ ಮಿತ್ರನೇ ಸರಿ. 41 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
ಇತರರನ್ನು ಪಾಪಕ್ಕೆ ನಡೆಸುವುದರ ಬಗ್ಗೆ ಯೇಸುವಿನ ಎಚ್ಚರಿಕೆ
(ಮತ್ತಾಯ 18:6-9; ಲೂಕ 17:1-2)
42 “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು. 43 ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ. 44 [a] 45 ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು. 46 [b] 47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು. 48 ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ.
49 “ಪ್ರತಿಯೊಬ್ಬನನ್ನೂ ಬೆಂಕಿಯಿಂದ ಶಿಕ್ಷಿಸಲಾಗುತ್ತದೆ.
50 “ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ[c] ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.
ಮೋಶೆ, ಎಲೀಯ ಮತ್ತು ಯೇಸು
(ಮತ್ತಾಯ 17:1-8; ಮಾರ್ಕ 9:2-8)
28 ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು. 29 ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು. 30 ಆಗ ಇಬ್ಬರು ಪ್ರವಾದಿಗಳು ಯೇಸುವಿನೊಡನೆ ಮಾತನಾಡುತ್ತಿದ್ದರು. ಅವರು ಮೋಶೆ ಮತ್ತು ಎಲೀಯ. 31 ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು. 32 ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು. 33 ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)
34 ಪೇತ್ರನು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಮೋಡವು ಬಂದು ಅವರ ಸುತ್ತಲೂ ಆವರಿಸಿತು. ಆಗ ಪೇತ್ರ, ಯಾಕೋಬ ಮತ್ತು ಯೋಹಾನನಿಗೆ ಭಯವಾಯಿತು. 35 ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.
36 ಆ ವಾಣಿ ಆದಮೇಲೆ ಅವರು ಯೇಸುವನ್ನು ಮಾತ್ರ ಕಂಡರು. ಪೇತ್ರ, ಯಾಕೋಬ, ಯೋಹಾನರು ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಮೌನವಾಗಿದ್ದರು.
ದೆವ್ವದಿಂದ ಪೀಡಿತನಾಗಿದ್ದ ಬಾಲಕನಿಗೆ ಬಿಡುಗಡೆ
(ಮತ್ತಾಯ 17:14-18; ಮಾರ್ಕ 9:14-27)
37 ಮರುದಿನ, ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಬೆಟ್ಟದಿಂದಿಳಿದು ಬಂದರು. ಜನರ ಬಹು ದೊಡ್ಡ ಗುಂಪೊಂದು ಯೇಸುವನ್ನು ಎದುರುಗೊಂಡಿತು. 38 ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು. 39 ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ. 40 ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು.
41 ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
42 ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು. 43 ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು.
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟಣೆ
(ಮತ್ತಾಯ 17:22-23; ಮಾರ್ಕ 9:30-32)
ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ, 44 “ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು. 45 ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.
ಅತ್ಯಂತ ದೊಡ್ಡ ವ್ಯಕ್ತಿ
(ಮತ್ತಾಯ 18:1-5; ಮಾರ್ಕ 9:33-37)
46 ತಮ್ಮಲ್ಲಿ ಯಾವನು ಅತ್ಯಂತ ಪ್ರಮುಖನು ಎಂಬುದರ ಬಗ್ಗೆ ಯೇಸುವಿನ ಶಿಷ್ಯರು ವಾದಮಾಡತೊಡಗಿದರು. 47 ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಒಂದು ಚಿಕ್ಕ ಮಗುವನ್ನು ಕರೆದು ತನ್ನ ಬಳಿಯಲ್ಲಿ ನಿಲ್ಲಿಸಿದನು. 48 ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.
ನಿಮಗೆ ವಿರೋಧವಾಗಿಲ್ಲದ ವ್ಯಕ್ತಿ ನಿಮ್ಮವನೇ
(ಮಾರ್ಕ 9:38-40)
49 ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.
50 ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿ. ಏಕೆಂದರೆ, ನಿಮಗೆ ವಿರೋಧವಾಗಿಲ್ಲದವನು ನಿಮ್ಮವನೇ” ಎಂದನು.
ಸಮಾರ್ಯ ಪಟ್ಟಣ
51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು. 52 ಯೇಸು ಕೆಲವರನ್ನು ತನ್ನ ಮುಂದಾಗಿ ಕಳುಹಿಸಿದನು. ಯೇಸುವಿಗಾಗಿ ಪ್ರತಿಯೊಂದನ್ನು ಸಿದ್ಧಪಡಿಸಲು ಅವರು ಸಮಾರ್ಯ ಪಟ್ಟಣಕ್ಕೆ ಹೋದರು. 53 ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ. 54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!”[a] ಎಂದು ಕೇಳಿದರು.
55 ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು.[b] 56 ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.
ಯೇಸುವನ್ನು ಹಿಂಬಾಲಿಸಿ
(ಮತ್ತಾಯ 8:19-22)
57 ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.
58 ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.
59 ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.
ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.
60 ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.
61 ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.
62 ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.
Kannada Holy Bible: Easy-to-Read Version. All rights reserved. © 1997 Bible League International