Chronological
ಯೇಸುವನ್ನು ಕೊಲ್ಲಲು ಯೆಹೂದ್ಯನಾಯಕರ ಸಂಚು
(ಮತ್ತಾಯ 26:1-5,14-16; ಮಾರ್ಕ 14:1-2,10-11; ಯೋಹಾನ 11:45-53)
22 ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು. 2 ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.
ಯೇಸುವಿನ ವಿರುದ್ಧ ಯೂದನು ಮಾಡಿದ ಸಂಚು
3 ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು. 4 ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು. 5 ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು. 6 ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
ಪಸ್ಕದ ಊಟಕ್ಕೆ ಸಿದ್ಧತೆ
(ಮತ್ತಾಯ 26:17-25; ಮಾರ್ಕ 14:12-21; ಯೋಹಾನ 13:21-30)
7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು. 8 ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.
9 ಪೇತ್ರ ಮತ್ತು ಯೋಹಾನರು, “ಊಟವನ್ನು ಎಲ್ಲಿ ಸಿದ್ಧಮಾಡಬೇಕು?” ಎಂದು ಯೇಸುವಿಗೆ ಕೇಳಿದರು.
10 ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ. 11 ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ. 12 ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು.
13 ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು.
ಪ್ರಭುವಿನ ರಾತ್ರಿ ಭೋಜನ
(ಮತ್ತಾಯ 26:26-30; ಮಾರ್ಕ 14:22-26; 1 ಕೊರಿಂಥ. 11:23-25)
14 ಪಸ್ಕದ ಊಟಮಾಡುವ ಸಮಯ ಬಂತು. ಯೇಸು ಮತ್ತು ಅಪೊಸ್ತಲರು ಮೇಜಿನ ಸುತ್ತಲೂ ಊಟಕ್ಕೆ ಕುಳಿತುಕೊಂಡರು. 15 ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ. 16 ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.
17 ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ. 18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.
19 ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು. 20 ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.
ಯೇಸುವಿಗೆ ಯಾರು ವಿರೋಧಿಗಳಾಗುವರು?
21 ಯೇಸು, “ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ. 22 ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.
23 ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.
ಸೇವಕರಂತಿರಿ
24 ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು. 25 ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ. 26 ಆದರೆ ನೀವು ಹಾಗಾಗಬಾರದು. ಅತ್ಯಂತ ದೊಡ್ಡ ವ್ಯಕ್ತಿಯು ಅತ್ಯಂತ ಚಿಕ್ಕ ವ್ಯಕ್ತಿಯಾಗಬೇಕು. ನಾಯಕರು ಸೇವಕರಂತಿರಬೇಕು. 27 ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
28 “ನೀವು ನನ್ನ ಅನೇಕ ಕಷ್ಟಗಳಲ್ಲಿ ನನ್ನ ಸಂಗಡ ಇದ್ದವರು. 29 ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ. 30 ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
ನಿಮ್ಮ ನಂಬಿಕೆಯನ್ನು ಕಳೆದುಕೊಳ್ಳಬೇಡಿರಿ!
(ಮತ್ತಾಯ 26:31-35; ಮಾರ್ಕ 14:27-31; ಯೋಹಾನ 13:36-38)
31 “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ) 32 ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.
33 ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.
34 ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
ಕಷ್ಟವನ್ನು ಎದುರಿಸಲು ಸಿದ್ಧರಾಗಿರಿ
35 ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು.
ಅಪೊಸ್ತಲರು, “ಇಲ್ಲ” ಅಂದರು.
36 ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
37 ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’(A)
ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.
38 ಶಿಷ್ಯರು, “ಪ್ರಭುವೇ, ಇಲ್ಲಿ ನೋಡು, ಎರಡು ಖಡ್ಗಗಳಿವೆ” ಎಂದು ಹೇಳಿದರು.
ಯೇಸು “ಅಷ್ಟು ಸಾಕು” ಅಂದನು.
ಅಪೊಸ್ತಲರ ಪ್ರಾರ್ಥನೆಯ ಅಗತ್ಯತೆ
(ಮತ್ತಾಯ 26:36-46; ಮಾರ್ಕ 14:32-42)
39 ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು. 40 ಆತನ ಶಿಷ್ಯರೂ ಆತನೊಡನೆ ಹೋದರು. (ಯೇಸು ಆಗಾಗ್ಗೆ ಅಲ್ಲಿಗೆ ಹೋಗುತ್ತಿದ್ದನು.) ಯೇಸು ತನ್ನ ಶಿಷ್ಯರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
41 ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ, 42 “ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು. 43 ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು. 44 ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು. 45 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.) 46 ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
ಯೇಸುವಿನ ಬಂಧನ
(ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11)
47 ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.
48 ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುವಿಯೋ?” ಎಂದು ಕೇಳಿದನು. 49 ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು. 50 ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.
51 ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.
52 ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ? 53 ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.
ಪೇತ್ರನ ವಿಶ್ವಾಸದ್ರೋಹ
(ಮತ್ತಾಯ 26:57-58,69-75; ಮಾರ್ಕ 14:53-54,66-72; ಯೋಹಾನ 18:12-18,25-27)
54 ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ. 55 ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು. 56 ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.
57 ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು. 58 ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು.
ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
59 ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು.
60 ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು.
ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು. 61 ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು. 62 ಬಳಿಕ ಪೇತ್ರನು ಹೊರಗೆ ಹೋಗಿ ಬಹು ದುಃಖದಿಂದ ಅತ್ತನು.
ಯೇಸುವಿಗೆ ಜನರು ಮಾಡಿದ ಅಪಹಾಸ್ಯ
(ಮತ್ತಾಯ 26:67-68; ಮಾರ್ಕ 14:65)
63-64 ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು. 65 ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.
ಯೆಹೂದ್ಯನಾಯಕರ ಮುಂದೆ ಯೇಸು
(ಮತ್ತಾಯ 26:59-66; ಮಾರ್ಕ 14:55-64; ಯೋಹಾನ 18:19-24)
66 ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು, 67 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು.
ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ. 68 ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರಕೊಡುವುದಿಲ್ಲ. 69 ಆದರೆ ಇಂದಿನಿಂದ ಮನುಷ್ಯಕುಮಾರನು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
70 ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.
71 ಆಗ ಅವರು, “ಇನ್ನೇನು ಸಾಕ್ಷಿಬೇಕು? ಆತನು ಹೀಗೆ ಹೇಳುವುದನ್ನು ನಾವೇ ಕೇಳಿದೆವಲ್ಲಾ!” ಅಂದರು.
ಯೇಸು ತನ್ನ ಶಿಷ್ಯರ ಪಾದಗಳನ್ನು ತೊಳೆಯುವನು
13 ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
2 ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.) 3 ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು. 4 ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು. 5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
6 ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.
7 ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
8 ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು.
ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.
9 ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.
10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು. 11 ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
12 ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಹೀಗೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ? 13 ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು. 14 ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು. 15 ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು. 16 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. 17 ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.
18 “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’[a] ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು. 19 ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ. 20 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
ಯೇಸುವಿನ ಶಿಷ್ಯನ ದ್ರೋಹ
(ಮತ್ತಾಯ 26:20-25; ಮಾರ್ಕ 14:17-21; ಲೂಕ 22:21-23)
21 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
22 ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ. 23 ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು. 24 ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.
25 ಆ ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು.
26 ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು. 27 ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು. 28 ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ. 29 ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
30 ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು.
ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ
31 ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು. 32 ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.
33 ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
34 “ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. 35 ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವೂ ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
ಪೇತ್ರನ ವಿಶ್ವಾಸದ್ರೋಹದ ಮುನ್ಸೂಚನೆ
(ಮತ್ತಾಯ 26:31-35; ಮಾರ್ಕ 14:27-31; ಲೂಕ 22:31-34)
36 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.
ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
37 ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.
38 ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.
Kannada Holy Bible: Easy-to-Read Version. All rights reserved. © 1997 Bible League International