Print Page Options
Previous Prev Day Next DayNext

Chronological

Read the Bible in the chronological order in which its stories and events occurred.
Duration: 365 days
Kannada Holy Bible: Easy-to-Read Version (KERV)
Version
ಮತ್ತಾಯ 27

ರಾಜ್ಯಪಾಲನ ಮುಂದೆ ಯೇಸು

(ಮಾರ್ಕ 15:1; ಲೂಕ 23:1-2; ಯೋಹಾನ 18:28-32)

27 ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು. ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.

ಯೂದನ ಆತ್ಮಹತ್ಯೆ

(ಅ.ಕಾ. 1:18-19)

ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ, “ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು.

ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.

ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.

ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು. ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು. ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ. ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ:

“ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು. 10 ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.”[a]

ರಾಜ್ಯಪಾಲ ಪಿಲಾತನಿಂದ ಯೇಸುವಿಗಾದ ವಿಚಾರಣೆ

(ಮಾರ್ಕ 15:2-5; ಲೂಕ 23:3-5; ಯೋಹಾನ 18:33-38)

11 ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು.

ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.

12 ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.

13 ಆದ್ದರಿಂದ ಪಿಲಾತನು ಯೇಸುವನ್ನು, “ಈ ಜನರು ನಿನ್ನ ಮೇಲೆ ಹೇಳುತ್ತಿರುವ ಈ ದೂರುಗಳನ್ನೆಲ್ಲ ನೀನು ಕೇಳುತ್ತಿದ್ದರೂ ಏಕೆ ಉತ್ತರ ಕೊಡುತ್ತಿಲ್ಲ?” ಎಂದು ಕೇಳಿದನು.

14 ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು.

ಯೇಸುವನ್ನು ಬಿಡಿಸಲು ಪಿಲಾತನ ವಿಫಲ ಯತ್ನ

(ಮಾರ್ಕ 15:6-15; ಲೂಕ 23:13-25; ಯೋಹಾನ 18:39–19:16)

15 ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು. 16 ಆ ಕಾಲದಲ್ಲಿ ಪ್ರಸಿದ್ಧನಾದ ಕೈದಿಯೊಬ್ಬನು ಸೆರೆಮನೆಯಲ್ಲಿದ್ದನು. ಅವನ ಹೆಸರು ಬರಬ್ಬ.[b]

17 ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು. 18 ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.

19 ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.

20 ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.

21 ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೋ? ಯೇಸುವನ್ನೋ?” ಎಂದು ಕೇಳಿದನು.

ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು.

22 ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು.

ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.

23 ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು.

ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.

24 ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.

25 ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.

26 ಆಗ ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊರಡೆಗಳಿಂದ ಹೊಡೆಯಿಸಿ ಶಿಲುಬೆಗೇರಿಸಲು ಸೈನಿಕರಿಗೆ ಒಪ್ಪಿಸಿಬಿಟ್ಟನು.

ಪಿಲಾತನ ಸೈನಿಕರು ಯೇಸುವಿಗೆ ಮಾಡಿದ ಅಪಹಾಸ್ಯ

(ಮಾರ್ಕ 15:16-20; ಯೋಹಾನ 19:2-3)

27 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು. 28 ಸೈನಿಕರು ಆತನ ಬಟ್ಟೆಗಳನ್ನು ತೆಗೆದುಹಾಕಿ ಆತನಿಗೆ ಒಂದು ಕೆಂಪು ನಿಲುವಂಗಿಯನ್ನು ತೊಡಿಸಿದರು. 29 ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು. 30 ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು. 31 ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.

ಶಿಲುಬೆಗೇರಿಸಲ್ಪಟ್ಟ ಯೇಸು

(ಮಾರ್ಕ 15:21-32; ಲೂಕ 23:26-43; ಯೋಹಾನ 19:17-27)

32 ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು. 33 ಅವರು ಗೊಲ್ಗೊಥಾ ಎಂಬ ಸ್ಥಳಕ್ಕೆ ಬಂದರು. (ಗೊಲ್ಗೊಥಾ ಎಂದರೆ “ಕಪಾಲ ಸ್ಥಳ” ಎಂದರ್ಥ.) 34 ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.

35 ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು. 36 ಸೈನಿಕರು ಯೇಸುವನ್ನು ಕಾಯುತ್ತಾ ಅಲ್ಲೇ ಕುಳಿತಿದ್ದರು. 37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ.

38 ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು. 39 ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, 40 “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.

41 ಮಹಾಯಾಜಕರೂ ಧರ್ಮೋಪದೇಶಕರೂ ಮತ್ತು ಹಿರಿಯ ಯೆಹೂದ್ಯ ನಾಯಕರೂ ಅಲ್ಲಿದ್ದರು. ಇವರು ಸಹ ಇತರ ಜನರಂತೆ ಯೇಸುವನ್ನು ಗೇಲಿ ಮಾಡಿದರು. 42 “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ. 43 ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು. 44 ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು.

ಯೇಸುವಿನ ಮರಣ

(ಮಾರ್ಕ 15:33-41; ಲೂಕ 23:44-49; ಯೋಹಾನ 19:28-30)

45 ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು. 46 ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?”(A) ಎಂದರ್ಥ.

47 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದು ಹೇಳಿದರು.

48 ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು. 49 ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೋ ನೋಡೋಣ” ಎಂದು ಹೇಳಿದರು.

50 ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು.

51 ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು. 52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು. 53 ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.

54 ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.

55 ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು. 56 ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು.

ಯೇಸುವಿನ ಸಮಾಧಿ

(ಮಾರ್ಕ 15:42-47; ಲೂಕ 23:50-56; ಯೋಹಾನ 19:38-42)

57 ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು. 58 ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಕೇಳಿದನು. ಯೇಸುವಿನ ದೇಹವನ್ನು ಯೋಸೇಫನಿಗೆ ಕೊಡುವಂತೆ ಪಿಲಾತನು ಸೈನಿಕರಿಗೆ ಅಪ್ಪಣೆ ಮಾಡಿದನು. 59 ಯೋಸೇಫನು ಆತನ ದೇಹವನ್ನು ತೆಗೆದುಕೊಂಡು, ಅದನ್ನು ಹೊಸ ನಾರುಮಡಿಯ ಬಟ್ಟೆಯಿಂದ ಸುತ್ತಿ 60 ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು. 61 ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು.

ಯೇಸುವಿನ ಸಮಾಧಿಗೆ ಕಾವಲು

62 ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ, 63 “ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ. 64 ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.

65 ಪಿಲಾತನು, “ಕೆಲವು ಸೈನಿಕರನ್ನು ಕರೆದುಕೊಂಡು ಹೋಗಿ, ನಿಮಗೆ ಬೇಕಾದ ರೀತಿಯಲ್ಲಿ ಸಮಾಧಿಯನ್ನು ಭದ್ರಪಡಿಸಿರಿ” ಎಂದು ಹೇಳಿದನು. 66 ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.

ಮಾರ್ಕ 15

ಪಿಲಾತನಿಂದ ಯೇಸುವಿನ ವಿಚಾರಣೆ

(ಮತ್ತಾಯ 27:1-2,11-14; ಲೂಕ 23:1-5; ಯೋಹಾನ 18:28-38)

15 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.

ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.

ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು. ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.

ಆದರೆ ಯೇಸು ಮೌನವಾಗಿದ್ದನು. ಪಿಲಾತನಿಗೆ ಇದರಿಂದ ಬಹಳ ಆಶ್ಚರ್ಯವಾಯಿತು.

ಯೇಸುವನ್ನು ಬಿಡಿಸಲು ಪಿಲಾತನು ಮಾಡಿದ ವಿಫಲ ಪ್ರಯತ್ನ

(ಮತ್ತಾಯ 27:15-31; ಲೂಕ 23:13-25; ಯೋಹಾನ 18:39–19:16)

ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು. ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.

ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು. ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು. 10 ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು. 11 ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.

12 ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.

13 ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಆರ್ಭಟಿಸಿದರು.

14 ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು.

ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.

15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.

16 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು. 17 ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. 18 ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು. 19 ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು. 20 ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.

ಶಿಲುಬೆಗೇರಿಸಲ್ಪಟ್ಟ ಯೇಸು

(ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27)

21 ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು. 22 ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”) 23 ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ. 24 ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.

25 ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26 ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು. 27 ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು. 28 [a]

29 ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ. 30 ಈಗ ಶಿಲುಬೆಯಿಂದ ಕೆಳಗಿಳಿದು ಬಂದು ನಿನ್ನನ್ನು ರಕ್ಷಿಸಿಕೊ!” ಎಂದು ಅಪಹಾಸ್ಯ ಮಾಡಿದರು.

31 ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32 ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.

ಯೇಸುವಿನ ಮರಣ

(ಮತ್ತಾಯ 27:45-56; ಲೂಕ 23:44-49; ಯೋಹಾನ 19:28-30)

33 ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು. 34 ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?”(A) ಎಂಬುದೇ ಇದರರ್ಥ.

35 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.

36 ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.

37 ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.

38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಎರಡು ಭಾಗಗಳಾಗಿ ಹರಿದುಹೋಯಿತು. 39 ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.

40 ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.) 41 ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.

ಯೇಸುವಿನ ಸಮಾಧಿ

(ಮತ್ತಾಯ 27:57-61; ಲೂಕ 23:50-56; ಯೋಹಾನ 19:38-42)

42 ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ), 43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.

44 ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು. 45 ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.

46 ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು. 47 ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International