Print Page Options
Previous Prev Day Next DayNext

Chronological

Read the Bible in the chronological order in which its stories and events occurred.
Duration: 365 days
Kannada Holy Bible: Easy-to-Read Version (KERV)
Version
ಲೂಕ 23

ರಾಜ್ಯಪಾಲ ಪಿಲಾತನಿಂದ ಯೇಸುವಿನ ವಿಚಾರಣೆ

(ಮತ್ತಾಯ 27:1-2,11-14; ಮಾರ್ಕ 15:1-5; ಯೋಹಾನ 18:28-38)

23 ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು. ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.

ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.

ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.

ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.

ಹೆರೋದನ ಮುಂದೆ ಯೇಸು

ಪಿಲಾತನು ಇದನ್ನು ಕೇಳಿ, “ಇವನು ಗಲಿಲಾಯದವನೋ?” ಎಂದು ಕೇಳಿದನು. ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.

ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು. ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ. 10 ಮಹಾಯಾಜಕರು ಮತ್ತು ಧರ್ಮೋಪದೇಶಕರು ಅಲ್ಲಿ ನಿಂತುಕೊಂಡಿದ್ದರು. ಅವರು ಯೇಸುವಿಗೆ ವಿರುದ್ಧವಾಗಿ ಕೂಗುತ್ತಿದ್ದರು. 11 ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು. 12 ಮೊದಲು ಪಿಲಾತನು ಮತ್ತು ಹೆರೋದನು ವೈರಿಗಳಾಗಿದ್ದರು. ಆದರೆ ಅಂದು ಹೆರೋದನು ಮತ್ತು ಪಿಲಾತನು ಮತ್ತೆ ಸ್ನೇಹಿತರಾದರು.

ಯೇಸುವಿಗೆ ಮರಣದಂಡನೆ

(ಮತ್ತಾಯ 27:15-26; ಮಾರ್ಕ 15:6-15; ಯೋಹಾನ 18:39–19:16)

13 ಪಿಲಾತನು ಮಹಾಯಾಜಕರನ್ನೂ ಯೆಹೂದ್ಯನಾಯಕರನ್ನೂ ಇತರ ಜನರನ್ನೂ ಒಟ್ಟಾಗಿ ಕರೆಸಿ, 14 ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ. 15 ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು. 16 ಆದ್ದರಿಂದ ನಾನು ಇವನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು. 17 [a]

18 ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು. 19 (ಬರಬ್ಬನು ಪಟ್ಟಣದಲ್ಲಿ ದಂಗೆ ಎಬ್ಬಿಸಿದ್ದರಿಂದ ಸೆರೆಮನೆಯಲ್ಲಿದ್ದನು. ಅವನು ಕೆಲವು ಜನರನ್ನು ಕೊಂದಿದ್ದನು.)

20 ಪಿಲಾತನು ಯೇಸುವನ್ನು ಬಿಡಿಸಬೇಕೆಂದಿದ್ದನು. ಆದ್ದರಿಂದ ಯೇಸುವನ್ನು ಬಿಟ್ಟುಬಿಡೋಣ ಎಂದು ಪಿಲಾತನು ಮತ್ತೆ ಅವರಿಗೆ ಹೇಳಿದನು. 21 ಆದರೆ ಅವರು ಮತ್ತೆ, “ಅವನನ್ನು ಕೊಲ್ಲಿಸು! ಅವನನ್ನು ಶಿಲುಬೆಗೇರಿಸು!” ಎಂದು ಕೂಗಿದರು.

22 ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.

23 ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ, 24 ಪಿಲಾತನು ಅವರ ಬಯಕೆಯನ್ನು ಈಡೇರಿಸಲು ನಿರ್ಧರಿಸಿದನು. 25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.

ಯೇಸುವನ್ನು ಶಿಲುಬೆಗೇರಿಸಿದರು

(ಮತ್ತಾಯ 27:32-44; ಮಾರ್ಕ 15:21-32; ಯೋಹಾನ 19:17-19)

26 ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.

27 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು. 28 ಆದರೆ ಯೇಸು, ಆ ಸ್ತ್ರೀಯರಿಗೆ, “ಜೆರುಸಲೇಮಿನ ಸ್ತ್ರೀಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ! 29 ‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ. 30 ಆಗ ಜನರು ಬೆಟ್ಟಕ್ಕೆ, ‘ನಮ್ಮ ಮೇಲೆ ಬೀಳು!’ ಎಂತಲೂ ಗುಡ್ಡಗಳಿಗೆ, ‘ನಮ್ಮನ್ನು ಮುಚ್ಚಿಕೊಳ್ಳಿರಿ!’(A) ಎಂತಲೂ ಕೂಗಿಕೊಳ್ಳುವರು. 31 ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?”[b] ಎಂದು ಹೇಳಿದನು.

32 ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು. 33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.

34 ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು.

ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು. 35 ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.

36 ಸೈನಿಕರೂ ಯೇಸುವನ್ನು ಗೇಲಿಮಾಡಿದರು. ಅವರು ಯೇಸುವಿನ ಬಳಿಗೆ ಬಂದು, ಸ್ವಲ್ಪ ಹುಳಿದ್ರಾಕ್ಷಾರಸವನ್ನು ನೀಡಿ, 37 “ನೀನು ಯೆಹೂದ್ಯರ ಅರಸನಾಗಿದ್ದರೆ, ನಿನ್ನನ್ನು ರಕ್ಷಿಸಿಕೊ!” ಎಂದು ಹೇಳಿದರು. 38 (ಶಿಲುಬೆಯ ಮೇಲ್ಭಾಗದಲ್ಲಿ, “ಈತನು ಯೆಹೂದ್ಯರ ಅರಸನು” ಎಂದು ಬರೆಯಲಾಗಿತ್ತು.)

39 ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.

40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು! 41 ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು. 42 ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.

43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.

ಯೇಸುವಿನ ಮರಣ

(ಮತ್ತಾಯ 27:45-56; ಮಾರ್ಕ 15:33-41; ಯೋಹಾನ 19:28-30)

44 ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು. 45 ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು. 46 ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ”[c] ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

47 ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.

48 ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು. 49 ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.

ಅರಿಮಥಾಯದ ಯೋಸೇಫನು

(ಮತ್ತಾಯ 27:57-61; ಮಾರ್ಕ 15:42-47; ಯೋಹಾನ 19:38-42)

50-51 ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ. 52 ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಯೋಸೇಫನು ಪಿಲಾತನನ್ನು ಕೇಳಿಕೊಂಡನು. 53 ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ. 54 ಅದು ಸಿದ್ಧತೆಯ ದಿನದ[d] ಸಾಯಂಕಾಲವಾಗಿತ್ತು. ಸೂರ್ಯನು ಮುಳುಗಿದಾಗ, ಸಬ್ಬತ್‌ದಿನ ಪ್ರಾರಂಭವಾಗಲಿಕ್ಕಿತ್ತು.

55 ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು. 56 ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು.

ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.

ಯೋಹಾನ 18-19

ಯೇಸುವಿನ ಬಂಧನ

(ಮತ್ತಾಯ 26:47-56; ಮಾರ್ಕ 14:43-50; ಲೂಕ 22:47-53)

18 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.

ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು. ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.

ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.

ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು.

ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.) ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.

ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.

ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.

ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು. “ನೀನು ನನಗೆ ಕೊಟ್ಟ ಜನರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ” ಎಂದು ಯೇಸು ಮೊದಲು ಹೇಳಿದ್ದ ಮಾತು ಹೀಗೆ ನಿಜವಾಯಿತು.

10 ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.) 11 ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.

ಅನ್ನನ ಮುಂದೆ ಯೇಸು

(ಮತ್ತಾಯ 26:57-58; ಮಾರ್ಕ 14:53-54; ಲೂಕ 22:54)

12 ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು. 13 ಅನ್ನನು ಕಾಯಫನ ಮಾವ. ಆ ವರ್ಷ ಕಾಯಫನು ಪ್ರಧಾನಯಾಜಕನಾಗಿದ್ದನು. 14 ಎಲ್ಲಾ ಜನರಿಗಾಗಿ ಒಬ್ಬನು ಸಾಯುವುದೇ ಮೇಲು ಎಂಬ ಸಲಹೆಯನ್ನು ಕೊಟ್ಟಿದ್ದವನು ಇವನೇ.

ಪೇತ್ರನ ವಿಶ್ವಾಸದ್ರೋಹ

(ಮತ್ತಾಯ 26:69-70; ಮಾರ್ಕ 14:66-68; ಲೂಕ 22:55-57)

15 ಸೀಮೋನ್ ಪೇತ್ರ ಮತ್ತು ಯೇಸುವಿನ ಶಿಷ್ಯರಲ್ಲಿ ಮತ್ತೊಬ್ಬನು ಯೇಸುವಿನೊಂದಿಗೆ ಹೋದರು. ಆ ಮತ್ತೊಬ್ಬ ಶಿಷ್ಯನಿಗೆ ಪ್ರಧಾನಯಾಜಕನ ಪರಿಚಯವಿತ್ತು. ಆದ್ದರಿಂದ ಅವನು ಪ್ರಧಾನ ಯಾಜಕನ ಮನೆಯ ಅಂಗಳದೊಳಗೆ ಹೋದನು. 16 ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು. 17 ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು.

ಪೇತ್ರನು, “ಇಲ್ಲ, ನಾನಲ್ಲ!” ಎಂದು ಉತ್ತರಕೊಟ್ಟನು.

18 ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.

ಪ್ರಧಾನಯಾಜಕನು ಮಾಡಿದ ವಿಚಾರಣೆ

(ಮತ್ತಾಯ 26:59-66; ಮಾರ್ಕ 14:55-64; ಲೂಕ 22:66-71)

19 ಪ್ರಧಾನಯಾಜಕನು ಯೇಸುವಿಗೆ ಆತನ ಶಿಷ್ಯರ ಬಗ್ಗೆಯೂ ಆತನು ಉಪದೇಶಿಸಿದ ಸಂಗತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದನು. 20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ. 21 ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.

22 ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.

23 ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.

24 ಆಗ ಅನ್ನನು ಯೇಸುವನ್ನು ಮತ್ತೆ ಕಟ್ಟಿಸಿ, ಪ್ರಧಾನಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

ಮತ್ತೊಮ್ಮೆ ಪೇತ್ರನ ವಿಶ್ವಾಸದ್ರೋಹ

(ಮತ್ತಾಯ 26:71-75; ಮಾರ್ಕ 14:69-72; ಲೂಕ 22:58-62)

25 ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು.

ಆದರೆ ಪೇತ್ರನು, “ಇಲ್ಲ, ನಾನಲ್ಲ!” ಎಂದು ಹೇಳಿದನು.

26 ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಆ ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.

27 ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.

ಪಿಲಾತನ ಮುಂದೆ ಯೇಸು

(ಮತ್ತಾಯ 27:1-2,11-31; ಮಾರ್ಕ 15:1-20; ಲೂಕ 23:1-25)

28 ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ. 29 ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು.

30 ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.

31 ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು.

ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು. 32 (ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)

33 ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

34 ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು.

35 ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.

36 ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.

37 ಪಿಲಾತನು, “ಹಾಗಾದರೆ ನೀನು ರಾಜ!” ಎಂದನು.

ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.

38 ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ. 39 ಆದರೆ ಪಸ್ಕಹಬ್ಬದ ಕಾಲದಲ್ಲಿ ನಾನು ನಿಮಗೋಸ್ಕರ ಕೈದಿಗಳಲ್ಲಿ ಒಬ್ಬನನ್ನು ಬಿಡುಗಡೆ ಮಾಡುವುದು ನಿಮ್ಮ ಪದ್ಧತಿಯಾಗಿದೆ. ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ನೀವು ಬಯಸುತ್ತೀರಾ?” ಎಂದು ಕೇಳಿದನು.

40 ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)

19 ಬಳಿಕ, ಯೇಸುವನ್ನು ಕರೆದುಕೊಂಡು ಹೋಗಿ, ಕೊರಡೆಯಿಂದ ಹೊಡೆಯಬೇಕೆಂದು ಪಿಲಾತನು ಆಜ್ಞಾಪಿಸಿದನು. ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು. ಸೈನಿಕರು ಪದೇಪದೇ ಯೇಸುವಿನ ಬಳಿಗೆ ಬಂದು, “ಯೆಹೂದ್ಯರ ರಾಜನೇ, ನಿನಗೆ ನಮಸ್ಕಾರ!” ಎಂದು ಹೇಳುತ್ತಾ ಆತನ ಕೆನ್ನೆಗೆ ಹೊಡೆದರು.

ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು. ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.

ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು.

ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.

ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.

ಪಿಲಾತನು ಇದನ್ನು ಕೇಳಿ ಬಹು ಭಯಗೊಂಡು, ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು. 10 ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.

11 ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.

12 ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.

13 ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ[a] ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು. 14 ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.

15 ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು.

ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು.

ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.

16 ಆಗ ಪಿಲಾತನು, ಯೇಸುವನ್ನು ಶಿಲುಬೆಗೇರಿಸಲು ಅವರಿಗೆ ಒಪ್ಪಿಸಿಕೊಟ್ಟನು.

ಯೇಸುವನ್ನು ಶಿಲುಬೆಗೇರಿಸಿದರು

(ಮತ್ತಾಯ 27:32-44; ಮಾರ್ಕ 15:21-32; ಲೂಕ 23:26-39)

ಸೈನಿಕರು ಯೇಸುವನ್ನು ಕರೆದೊಯ್ದರು. 17 ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”) 18 ಅವರು ಗೊಲ್ಗೊಥಾದಲ್ಲಿ ಯೇಸವನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೇರಿಸಿದರು. ಅವರಿಬ್ಬರನ್ನು ಯೇಸುವಿನ ಎರಡು ಕಡೆಗಳಲ್ಲಿ ಹಾಕಿ, ಯೇಸುವನ್ನು ಅವರ ಮಧ್ಯದಲ್ಲಿ ಹಾಕಿದರು.

19 ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು. 20 ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.

21 ಯೆಹೂದ್ಯ ಮಹಾಯಾಜಕರು ಪಿಲಾತನಿಗೆ, “‘ಯೆಹೂದ್ಯರ ರಾಜನು’ ಎಂದು ಬರೆಯಬೇಡ. ಆದರೆ, ‘ಇವನು ತನ್ನನ್ನು ಯೆಹೂದ್ಯರ ರಾಜ ಎಂದು ಹೇಳಿಕೊಂಡನು’ ಎಂಬುದಾಗಿ ಬರೆ” ಎಂದರು.

22 ಪಿಲಾತನು, “ನಾನು ಬರೆದಿರುವುದನ್ನು ಬದಲಾಯಿಸಲಾಗುವುದಿಲ್ಲ” ಎಂದು ಉತ್ತರಕೊಟ್ಟನು.

23 ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. 24 ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು.

“ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು;
    ನನ್ನ ಅಂಗಿಗಾಗಿ ಚೀಟಿ ಹಾಕಿದರು”(A)

ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು.

25 ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿಯಾದ ಮರಿಯಳು ಮತ್ತು ಮಗ್ದಲದ ಮರಿಯಳು ಶಿಲುಬೆಯ ಬಳಿಯಲ್ಲಿ ನಿಂತುಕೊಂಡಿದ್ದರು. 26 ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು. 27 ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು.

ಯೇಸುವಿನ ಮರಣ

(ಮತ್ತಾಯ 27:45-56; ಮಾರ್ಕ 15:33-41; ಲೂಕ 23:44-49)

28 ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ”[b] ಎಂದು ಹೇಳಿದನು. 29 ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು. 30 ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.

31 ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು. 32 ಆದ್ದರಿಂದ ಸೈನಿಕರು ಬಂದು ಯೇಸುವಿನೊಂದಿಗೆ ಶಿಲುಬೆಗೇರಿಸಲ್ಪಟ್ಟಿದ್ದ ಇಬ್ಬರ ಕಾಲುಗಳನ್ನು ಮುರಿದುಹಾಕಿದರು. 33 ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.

34 ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು. 35 (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.) 36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ”(B) ಎಂಬ ಮಾತು ಹೀಗೆ ನೆರವೇರಿತು. 37 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ, “ಜನರು ತಾವು ಈಟಿಯಿಂದ ಇರಿದವನನ್ನೇ ದಿಟ್ಟಿಸಿ ನೋಡುವರು”(C) ಎಂತಲೂ ಬರೆದಿದೆ.

ಯೇಸುವಿನ ಶವಸಂಸ್ಕಾರ

(ಮತ್ತಾಯ 27:57-61; ಮಾರ್ಕ 15:42-47; ಲೂಕ 23:50-56)

38 ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.

39 ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಆ ಸುಗಂಧದ್ರವ್ಯವು ರಕ್ತ ಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು. 40 ಈ ಇಬ್ಬರು ಯೇಸುವಿನ ದೇಹವನ್ನು ತೆಗೆದುಕೊಂಡು ಅದಕ್ಕೆ ಸುಗಂಧದ್ರವ್ಯವನ್ನು ಹಾಕಿ ನಾರುಬಟ್ಟೆಗಳಿಂದ ಸುತ್ತಿದರು. (ಯೆಹೂದ್ಯರು ಸತ್ತವರನ್ನು ಇದೇರೀತಿ ಸಮಾಧಿ ಮಾಡುತ್ತಾರೆ.) 41 ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ. 42 ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International