Chronological
ಯೇಸುವಿನ ಪುನರುತ್ಥಾನ
(ಮಾರ್ಕ 16:1-8; ಲೂಕ 24:1-12; ಯೋಹಾನ 20:1-10)
28 ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು.
2 ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು. 3 ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು. 4 ಸಮಾಧಿಯನ್ನು ಕಾಯುತ್ತಿದ್ದ ಸೈನಿಕರು ದೇವದೂತನನ್ನು ಕಂಡು ಬಹಳವಾಗಿ ಹೆದರಿ ಭಯದಿಂದ ನಡುಗುತ್ತಾ ಸತ್ತಂತಾದರು.
5 ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ. 6 ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ. 7 ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.
8 ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು, 9 ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು. 10 ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.
ಯೆಹೂದ್ಯ ನಾಯಕರಿಗೆ ಬಂದ ವರದಿ
11 ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು. 12 ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು. 13 ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ. 14 ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು. 15 ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.
ಯೇಸು ತನ್ನ ಶಿಷ್ಯರಿಗೆ ಹೇಳಿದ ಕಡೆಯ ಮಾತುಗಳು
(ಮಾರ್ಕ 16:14-18; ಲೂಕ 24:36-49; ಯೋಹಾನ 20:19-23; ಅ.ಕಾ. 1:6-8)
16 ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು. 17 ಶಿಷ್ಯರು ಬೆಟ್ಟದ ಮೇಲೆ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು. ಆದರೆ ಕೆಲವು ಶಿಷ್ಯರು ಆತನೇ ನಿಜವಾದ ಯೇಸು ಎಂಬುದನ್ನು ನಂಬಲಿಲ್ಲ. 18 ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ. 19 ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ. 20 ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.
ಯೇಸುವಿನ ಪುನರುತ್ಥಾನ
(ಮತ್ತಾಯ 28:1-8; ಲೂಕ 24:1-12; ಯೋಹಾನ 20:1-10)
16 ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು. 2 ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು. 3 ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.
4 ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು. 5 ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.
6 ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ. 7 ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
8 ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.[a]
ಶಿಷ್ಯರಿಗೆ ಯೇಸುವಿನ ದರ್ಶನ
(ಮತ್ತಾಯ 28:9-10; ಯೋಹಾನ 20:11-18; ಲೂಕ 24:13-35)
9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು. 10 ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು. 11 ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ.
12 ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು. 13 ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ.
ಯೇಸು ಮತ್ತು ಅಪೊಸ್ತಲರ ಸಂಭಾಷಣೆ
(ಮತ್ತಾಯ 28:16-20; ಲೂಕ 24:36-49; ಯೋಹಾನ 20:19-23; ಅ.ಕಾ. 1:6-8)
14 ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.
15 ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ. 16 ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು. 17 ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು. 18 ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.
ಯೇಸುವಿನ ಪರಲೋಕಾರೋಹಣ
(ಲೂಕ 24:50-53; ಅ.ಕಾ. 1:9-11)
19 ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 20 ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.
Kannada Holy Bible: Easy-to-Read Version. All rights reserved. © 1997 Bible League International