Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
2 ಪೂರ್ವಕಾಲವೃತ್ತಾಂತ 11-12

11 ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು. ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು, “ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಬಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.

ಯೆಹೂದವನ್ನು ರೆಹಬ್ಬಾಮನು ಬಲಗೊಳಿಸಿದ್ದು

ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು. ಬೆತ್ಲೆಹೇಮ್, ಏತಾಮ್, ತೆಕೋವ, ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್, ಮಾರೇಷ, ಜೀಫ್, ಅದೋರೈಮ್, ಲಾಕೀಷ್, ಅಜೇಕ. 10 ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು. 11 ರೆಹಬ್ಬಾಮನು ಈ ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮಾಗ್ರಿ, ಎಣ್ಣೆ, ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು. 12 ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು.

13 ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು. 14 ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.

15 ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು. 16 ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು. 17 ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರ್ಷವಿದ್ದರು. ಯಾಕೆಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು.

ರೆಹಬ್ಬಾಮನ ಕುಟುಂಬ

18 ರೆಹಬ್ಬಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು. 19 ರೆಹಬ್ಬಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶೆಮರ್ಯ ಮತ್ತು ಜಾಹಮ್. 20 ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು. 21 ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.

22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು. 23 ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.

ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ಮೇಲೆ ಧಾಳಿಮಾಡಿದ್ದು

12 ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.

ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ. ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತುಸಾವಿರ ರಾಹುತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ಆ ದೊಡ್ಡ ಸೈನ್ಯದಲ್ಲಿ ಲಿಬ್ಯ, ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿಪಾಯಿಗಳಿದ್ದರು. ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.

ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.

ಆಗ ಯೆಹೂದ ಪ್ರಾಂತ್ಯದ ನಾಯಕರುಗಳೂ ರೆಹಬ್ಬಾಮನೂ ತಾವು ಮಾಡಿದ ತಪ್ಪಿಗೆ ಪಶ್ಚಾತ್ತಾಪಪಟ್ಟು ತಮ್ಮನ್ನು ದೇವರ ಮುಂದೆ ತಗ್ಗಿಸಿಕೊಂಡರು. “ಯೆಹೋವನು ನೀತಿವಂತನೇ ಸರಿ” ಎಂದರು.

ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ. ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”

ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು. 10 ರೆಹಬ್ಬಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು. 11 ರಾಜನು ದೇವಾಲಯವನ್ನು ಪ್ರವೇಶಿಸುವಾಗ, ಕಾವಲುಗಾರರು ಆ ಗುರಾಣಿಗಳನ್ನು ಹೊರತರುವರು. ತರುವಾಯ ಅವುಗಳನ್ನು ಮೊದಲಿದ್ದ ಸ್ಥಳದಲ್ಲಿಯೇ ಇಡುವರು.

12 ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.[a]

13 ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು. 14 ರೆಹಬ್ಬಾಮನು ಯೆಹೋವನನ್ನು ಅನುಸರಿಸದೆ ಅವಿಧೇಯನಾಗಿ ಕೆಟ್ಟಕಾರ್ಯಗಳನ್ನು ಮಾಡಿದನು.

15 ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು. 16 ರೆಹಬ್ಬಾಮನು ತೀರಿಕೊಂಡಾಗ ಅವನ ದೇಹವನ್ನು ದಾವೀದನಗರದಲ್ಲಿ ಹೂಳಿಟ್ಟರು. ಅವನ ನಂತರ ಅವನ ಮಗನಾದ ಅಬೀಯನು ಹೊಸ ರಾಜನಾಗಿ ಆಳಲು ಪ್ರಾರಂಭಿಸಿದನು.

ಪ್ರಕಟನೆ 2

ಎಫೆಸದಲ್ಲಿರುವ ಸಭೆಗೆ ಯೇಸುವಿನ ಪತ್ರ

“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ:

“ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.

“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ. ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.

“ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ. ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ. ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು[a] ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.

“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.

ಸ್ಮುರ್ನದಲ್ಲಿರುವ ಸಭೆಗೆ ಯೇಸುವಿನ ಪತ್ರ

“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ:

“ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.

“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ. 10 ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.

11 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.

ಪೆರ್ಗಮದಲ್ಲಿರುವ ಸಭೆಗೆ ಯೇಸುವಿನ ಪತ್ರ

12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ:

“ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.

13 “ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.

14 “ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು. 15 ನಿನ್ನ ಸಭೆಯಲ್ಲಿಯೂ ಇದೇ ರೀತಿ ನಡೆಯುತ್ತಿದೆ. ನಿಕೊಲಾಯಿತರ ಬೋಧನೆಗಳನ್ನು ಅನುಸರಿಸುವ ಜನರು ನಿನ್ನಲ್ಲಿದ್ದಾರೆ. 16 ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.

17 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.

“ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು[b] ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.

ಥುವತೈರದಲ್ಲಿರುವ ಸಭೆಗೆ ಯೇಸುವಿನ ಪತ್ರ

18 “ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ:

“ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.

19 “ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು. 20 ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.[c] 21 ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.

22 “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ. 23 ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.

24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ. 25 ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.

26 “ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ: 27 ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’[d] 28 ನಾನು ನನ್ನ ತಂದೆಯಿಂದ ಪಡೆದುಕೊಂಡ ಶಕ್ತಿ ಇದೇ. ನಾನು ಅವನಿಗೆ ಉದಯಸೂಚಕ ನಕ್ಷತ್ರವನ್ನು ನೀಡುತ್ತೇನೆ. 29 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.

ಚೆಫನ್ಯ 3

ಜೆರುಸಲೇಮಿನ ಭವಿಷ್ಯ

ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು. ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ. ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ. ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ. ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.

ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ. ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.

ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು. ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು. 10 ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.

11 “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ. 12 ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು. 13 ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”

ಸಂತಸದ ಹಾಡು

14 ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು.
    ಇಸ್ರೇಲೇ, ಸಂತೋಷದಿಂದ ಆರ್ಭಟಿಸು.
    ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.
15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ.
    ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ.
ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ.
    ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.
16 ಆ ಸಮಯದಲ್ಲಿ ಜೆರುಸಲೇಮಿಗೆ ಹೀಗೆ ಹೇಳಲಾಗುವುದು:
    “ಬಲವಾಗಿರು! ಭಯಪಡದಿರು!
17 ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ.
    ಆತನು ರಣಶೂರನು.
ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು.
    ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು.
ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.
18     ನಿನ್ನ ನಾಚಿಕೆಯನ್ನು ತೆಗೆದುಬಿಡುವನು.
ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು.
19 ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು.
    ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು.
ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು.
    ನಾನು ಅವರನ್ನು ಪ್ರಸಿದ್ಧಿಪಡಿಸುವೆನು.
    ಎಲ್ಲಾ ಜನರು ಅವರನ್ನು ಹೊಗಳುವರು.
20 ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು.
    ನಿನ್ನನ್ನು ಪ್ರಸಿದ್ಧಿಪಡಿಸುವೆನು.
ಎಲ್ಲಾ ಜನರು ನಿನ್ನನ್ನು ಹೊಗಳುವರು.
    ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು”
ಇದು ಯೆಹೋವನ ನುಡಿ.

ಯೋಹಾನ 1

ಜಗತ್ತಿಗೆ ಕ್ರಿಸ್ತನ ಆಗಮನ

ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ[a] ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು. ಆರಂಭದಲ್ಲಿ ಆತನು ದೇವರೊಂದಿಗೆ ಇದ್ದನು. ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ. ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. ಬೆಳಕು ಕತ್ತಲೆಯಲ್ಲಿ ಪ್ರಕಾಶಿಸುತ್ತದೆ. ಆದರೆ ಕತ್ತಲೆಯು ಬೆಳಕನ್ನು ಮುಸುಕಲಿಲ್ಲ.

ಯೋಹಾನ[b] ಎಂಬ ಒಬ್ಬ ಮನುಷ್ಯನನ್ನು ದೇವರು ಕಳುಹಿಸಿದನು. ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು. ಯೋಹಾನನೇ ಆ ಬೆಳಕಾಗಿರಲಿಲ್ಲ. ಆದರೆ ಯೋಹಾನನು ಬೆಳಕಿನ ಬಗ್ಗೆ ಜನರಿಗೆ ಸಾಕ್ಷಿ ನೀಡಲು ಬಂದನು. ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.

10 ವಾಕ್ಯ ಎಂಬಾತನು ಆಗಲೇ ಈ ಲೋಕದಲ್ಲಿದ್ದನು. ಈ ಲೋಕವು ವಾಕ್ಯ ಎಂಬಾತನ ಮೂಲಕ ನಿರ್ಮಾಣಗೊಂಡಿತು. ಆದರೆ ಈ ಲೋಕದವರು ಆತನನ್ನು ತಿಳಿದಿರಲಿಲ್ಲ. 11 ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. 12 ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು. 13 ಇವರು ರಕ್ತದಿಂದಾಗಲಿ ಕಾಮದಿಂದಾಗಲಿ ಪುರುಷನ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ. ಇವರು ದೇವರಿಂದಲೇ ಹುಟ್ಟಿದವರು.

14 ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. 15 ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

16 ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17 ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು. 18 ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.

ಯೇಸುವಿನ ಕುರಿತು ಯೋಹಾನನ ಸಂದೇಶ

(ಮತ್ತಾಯ 3:1-12; ಮಾರ್ಕ 1:2-8; ಲೂಕ 3:15-17)

19 “ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು. 20 ಯೋಹಾನನು ಮರೆಮಾಚದೆ, “ನಾನು ಕ್ರಿಸ್ತನಲ್ಲ” ಎಂದು ಹೇಳಿದನು.

21 ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?”[c] ಎಂದು ಕೇಳಿದರು.

ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು.

ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು.

ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.

22 ಆಗ ಯೆಹೂದ್ಯರು, “ನಮಗೆ ಹೇಳು. ನಮ್ಮನ್ನು ಕಳುಹಿಸಿದವರಿಗೆ ನಾವು ತಿಳಿಸಬೇಕಾಗಿದೆ. ನಿನ್ನ ಬಗ್ಗೆ ನೀನು ಏನು ಹೇಳುವೆ?” ಎಂದು ಕೇಳಿದರು.

23 ಅದಕ್ಕೆ ಯೋಹಾನನು,

“‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’
    ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು”(A)

ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.

24 ಕಳುಹಿಸಲ್ಪಟ್ಟಿದ್ದವರಲ್ಲಿ ಕೆಲವು ಮಂದಿ ಫರಿಸಾಯರೂ[d] ಇದ್ದರು. 25 ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.

26 ಯೋಹಾನನು, “ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನಿಮಗೆ ಗೊತ್ತಿಲ್ಲದ ಒಬ್ಬನು ಇಲ್ಲಿದ್ದಾನೆ. 27 ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.

28 ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿ ಎಂಬ ಊರಲ್ಲಿ ಈ ಸಂಗತಿಗಳೆಲ್ಲಾ ನಡೆದವು. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದದ್ದು ಇಲ್ಲಿಯೇ.

ಯೇಸು—ದೇವರ ಕುರಿಮರಿ

29 ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು. 30 ‘ನನ್ನ ನಂತರ ಒಬ್ಬ ವ್ಯಕ್ತಿಯು ಬರುವನು. ಆತನು ನನಗಿಂತಲೂ ದೊಡ್ಡವನು. ಏಕೆಂದರೆ ಆತನು ನನಗಿಂತಲೂ ಮೊದಲೇ ಇದ್ದವನು ಮತ್ತು ಯಾವಾಗಲೂ ಇದ್ದವನು’ ಎಂದು ನಾನು ಹೇಳುತ್ತಿದ್ದುದು ಈತನ ವಿಷಯವಾಗಿಯೇ. 31 ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು.

32-33 ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು. 34 ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.

ಯೇಸುವಿನ ಪ್ರಥಮ ಶಿಷ್ಯರು

35 ಮರುದಿನ ಯೋಹಾನನು ತನ್ನ ಇಬ್ಬರು ಶಿಷ್ಯರೊಂದಿಗೆ ಇದ್ದಾಗ, 36 ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.

37 ಯೋಹಾನನ ಈ ಮಾತನ್ನು ಕೇಳಿದ ಆ ಇಬ್ಬರು ಶಿಷ್ಯರು ಯೇಸುವನ್ನು ಹಿಂಬಾಲಿಸಿದರು. 38 ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು.

ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)

39 ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಆ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ಆ ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.

40 ಈ ಇಬ್ಬರು ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಇವರಲ್ಲಿ ಒಬ್ಬನಾಗಿದ್ದನು. 41 ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)

42 ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 44 ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು. 45 ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.

46 ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು.

ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.

47 ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.

48 ನತಾನಿಯೇಲನು, “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಕೇಳಿದನು.

ಯೇಸು, “ಫಿಲಿಪ್ಪನು ನನ್ನ ಬಗ್ಗೆ ನಿನಗೆ ತಿಳಿಸುವುದಕ್ಕಿಂತ ಮೊದಲೇ ನೀನು ಅಂಜೂರದ ಮರದ ಕೆಳಗಿದ್ದಾಗ ನಾನು ನಿನ್ನನ್ನು ನೋಡಿದೆನು” ಎಂದು ಹೇಳಿದನು.

49 ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.

50 ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು. 51 ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International