M’Cheyne Bible Reading Plan
ಯಾಕೋಬನ ಅಂತ್ಯಕ್ರಿಯೆ
50 ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು. 2 ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು. 3 ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.
4 ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ. 5 ‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು.
6 ಫರೋಹನು, “ನಿನ್ನ ಪ್ರಮಾಣವನ್ನು ಉಳಿಸಿಕೊ. ಹೋಗಿ ನಿನ್ನ ತಂದೆಯನ್ನು ಸಮಾಧಿಮಾಡು” ಎಂದು ಉತ್ತರಿಸಿದನು.
7 ಆದ್ದರಿಂದ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡಲು ಹೋದನು. ಫರೋಹನ ಎಲ್ಲಾ ಅಧಿಕಾರಿಗಳು ಯೋಸೇಫನೊಂದಿಗೆ ಹೋದರು. ಫರೋಹನ ನಾಯಕರು ಮತ್ತು ಈಜಿಪ್ಟಿನ ಎಲ್ಲಾ ಹಿರಿಯರು ಯೋಸೇಫನೊಂದಿಗೆ ಹೋದರು. 8 ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಹೆಂಡತಿ, ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಉಳಿದುಕೊಂಡರು.) 9 ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.
10 ಅವರು ಗೋರೆನ್ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು. 11 ಕಾನಾನಿನ ಜನರು ಗೋರೆನ್ಅಟಾದ್ನಲ್ಲಿ ಶೋಕಿಸುತ್ತಿರುವವರನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆ ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.
12 ಹೀಗೆ ಯಾಕೋಬನ ಗಂಡುಮಕ್ಕಳು ತಮ್ಮ ತಂದೆಯ ಆಜ್ಞೆಯಂತೆ ಮಾಡಿದರು. 13 ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು. 14 ತಂದೆಯನ್ನು ಸಮಾಧಿ ಮಾಡಿದನಂತರ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು.
ಸಹೋದರರು ಯೋಸೇಫನಿಗೆ ಭಯಪಟ್ಟರು
15 ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. 16 ಆದ್ದರಿಂದ ಸಹೋದರರು ಯೋಸೇಫನಿಗೆ ಈ ಸಂದೇಶವನ್ನು ಕಳುಹಿಸಿದರು: “ನಿನ್ನ ತಂದೆ ಸಾಯುವ ಮೊದಲು ನಮಗೆ ಆಜ್ಞಾಪಿಸಿದ್ದೇನೆಂದರೆ, 17 ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು.
ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು. 18 ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.
19 ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ. 20 ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ. 21 ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.
22 ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು. 23 ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.
24 ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.
25 ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.
26 ಯೋಸೇಫನು ತನ್ನ ನೂರಹತ್ತನೆ ವರ್ಷದಲ್ಲಿ ತೀರಿಕೊಂಡನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿಗೆ ಸಿದ್ಧಪಡಿಸಿ ಶವಪೆಟ್ಟಿಗೆಯಲ್ಲಿಟ್ಟರು.
ಯೋಹಾನನ ಬೋಧನೆ
(ಮತ್ತಾಯ 3:1-12; ಮಾರ್ಕ 1:1-8; ಯೋಹಾನ 1:19-28)
3 ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು.
ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ
ಹೆರೋದನು ಗಲಿಲಾಯಕ್ಕೂ
ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ
ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.
2 ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು.[a] ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು. 3 ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು. 4 ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ:
“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ.
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
5 ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು.
ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು.
ಡೊಂಕಾದ ದಾರಿಗಳು ನೀಟಾಗುವವು.
ಕೊರಕಲಾದ ದಾರಿಗಳು ಸಮವಾಗುವವು.
6 ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’
ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”(A)
7 ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? 8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ. 9 ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು.
10 ಆದ್ದರಿಂದ ಜನರು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.
11 ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.
12 ಸುಂಕವಸೂಲಿಗಾರರು[b] ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.
13 ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.
14 ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು.
ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
15 ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.
16 ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು. 17 ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ[c] ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. 18 ಯೋಹಾನನು ಜನರಿಗೆ ಇನ್ನೂ ಅನೇಕ ವಿಷಯಗಳನ್ನು ಹೇಳಿ ಪ್ರೋತ್ಸಾಹಿಸುತ್ತಾ ಸುವಾರ್ತೆಯನ್ನು ಬೋಧಿಸುತ್ತಿದ್ದನು.
ಯೋಹಾನನ ಸೇವೆಯ ಅಂತ್ಯ
19 ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು. 20 ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.
ಯೋಹಾನನಿಂದ ಯೇಸುವಿನ ದೀಕ್ಷಾಸ್ನಾನ
(ಮತ್ತಾಯ 3:13-17; ಮಾರ್ಕ 1:9-11)
21 ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು. 22 ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
ಯೋಸೇಫನ ಕುಟುಂಬ ಚರಿತ್ರೆ
(ಮತ್ತಾಯ 1:1-17)
23 ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು.
ಯೋಸೇಫನು ಹೇಲಿಯ ಮಗನು.
24 ಹೇಲಿಯು ಮತ್ತಾತನ ಮಗನು.
ಮತ್ತಾತನು ಲೇವಿಯ ಮಗನು.
ಲೇವಿಯು ಮೆಲ್ಕಿಯ ಮಗನು.
ಮೆಲ್ಕಿಯು ಯನ್ನಾಯನ ಮಗನು.
ಯನ್ನಾಯನು ಯೋಸೇಫನ ಮಗನು.
25 ಯೋಸೇಫನು ಮತ್ತಥೀಯನ ಮಗನು.
ಮತ್ತಥೀಯನು ಆಮೋಸನ ಮಗನು.
ಆಮೋಸನು ನಹೂಮನ ಮಗನು.
ನಹೂಮನು ಎಸ್ಲಿಯ ಮಗನು.
ಎಸ್ಲಿಯು ನಗ್ಗಾಯನ ಮಗನು.
26 ನಗ್ಗಾಯನು ಮಹಾಥತನ ಮಗನು.
ಮಹಾಥತನು ಮತ್ತಥೀಯನ ಮಗನು.
ಮತ್ತಥೀಯನು ಶಿಮೀಯನ ಮಗನು.
ಶಿಮೀಯನು ಯೋಸೇಖನ ಮಗನು.
ಯೋಸೇಖನು ಯೂದನ ಮಗನು.
27 ಯೂದನು ಯೋಹಾನನ ಮಗನು.
ಯೋಹಾನನು ರೇಸನ ಮಗನು.
ರೇಸನು ಜೆರುಬಾಬೆಲನ ಮಗನು.
ಜೆರುಬಾಬೆಲನು ಸಲಥಿಯೇಲನ ಮಗನು.
ಸಲಥಿಯೇಲನು ಸೇರಿಯ ಮಗನು.
28 ಸೇರಿಯು ಮೆಲ್ಕಿಯ ಮಗನು.
ಮೆಲ್ಕಿಯು ಅದ್ದಿಯ ಮಗನು.
ಅದ್ದಿಯು ಕೋಸಾಮನ ಮಗನು.
ಕೋಸಾಮನು ಎಲ್ಮದಾಮನ ಮಗನು.
ಎಲ್ಮದಾಮನು ಏರನ ಮಗನು.
29 ಏರನು ಯೆಹೋಷುವನ ಮಗನು.
ಯೆಹೋಷುವನು ಎಲಿಯೇಜರನ ಮಗನು.
ಎಲಿಯೇಜರನು ಯೋರೈವುನ ಮಗನು.
ಯೋರೈವುನು ಮತ್ತಾತನ ಮಗನು.
ಮತ್ತಾತನು ಲೇವಿಯ ಮಗನು.
30 ಲೇವಿಯು ಸಿಮೆಯೋನನ ಮಗನು.
ಸಿಮೆಯೋನನು ಯೂದನ ಮಗನು.
ಯೂದನು ಯೋಸೇಫನ ಮಗನು.
ಯೋಸೇಫನು ಯೊನಾವುನ ಮಗನು.
ಯೊನಾವುನು ಎಲಿಯಕೀಮನ ಮಗನು.
31 ಎಲಿಯಕೀಮನು ಮೆಲೆಯನ ಮಗನು.
ಮೆಲೆಯನು ಮೆನ್ನನ ಮಗನು.
ಮೆನ್ನನು ಮತ್ತಾಥನ ಮಗನು.
ಮತ್ತಾಥನು ನಾತಾನನ ಮಗನು.
ನಾತಾನನು ದಾವೀದನ ಮಗನು.
32 ದಾವೀದನು ಇಷಯನ ಮಗನು.
ಇಷಯನು ಓಬೇದನ ಮಗನು.
ಓಬೇದನು ಬೋವಜನ ಮಗನು.
ಬೋವಜನು ಸಲ್ಮೋನನ ಮಗನು.
ಸಲ್ಮೋನನು ನಹಸ್ಸೋನನ ಮಗನು.
33 ನಹಸ್ಸೋನನು ಅಮ್ಮಿನಾದ್ವಾನ ಮಗನು.
ಅಮ್ಮಿನಾದ್ವಾನು ಅದ್ಮಿನನ ಮಗನು.
ಅದ್ಮಿನನು ಅರ್ನೈಯನ ಮಗನು.
ಅರ್ನೈಯನು ಹೆಸ್ರೋನನ ಮಗನು.
ಹೆಸ್ರೋನನು ಪೆರೆಸನ ಮಗನು.
ಪೆರೆಸನು ಯೂದನ ಮಗನು.
34 ಯೂದನು ಯಾಕೋಬನ ಮಗನು.
ಯಾಕೋಬನು ಇಸಾಕನ ಮಗನು.
ಇಸಾಕನು ಅಬ್ರಹಾಮನ ಮಗನು.
ಅಬ್ರಹಾಮನು ತೇರಹನ ಮಗನು.
ತೇರಹನು ನಹೋರನ ಮಗನು.
35 ನಹೋರನು ಸೆರೂಗನ ಮಗನು.
ಸೆರೂಗನು ರೆಗೂವನ ಮಗನು.
ರೆಗೂವನು ಪೆಲೆಗನ ಮಗನು.
ಪೆಲೆಗನು ಎಬರನ ಮಗನು.
ಎಬರನು ಸಾಲನ ಮಗನು.
36 ಸಾಲನು ಕಯಿನನ ಮಗನು.
ಕಯಿನನು ಅರ್ಪಕ್ಷದನ ಮಗನು.
ಅರ್ಪಕ್ಷದನು ಶೇಮನ ಮಗನು.
ಶೇಮನು ನೋಹನ ಮಗನು.
ನೋಹನು ಲಾಮೆಕನ ಮಗನು.
37 ಲಾಮೆಕನು ಮೆತೂಷಲನ ಮಗನು.
ಮೆತೂಷಲನು ಹನೋಕನ ಮಗನು.
ಹನೋಕನು ಯೆರೆದನ ಮಗನು.
ಯೆರೆದನು ಮಹಲಲೇಲನ ಮಗನು.
ಮಹಲಲೇಲನು ಕಯಿನಾನನ ಮಗನು.
38 ಕಯಿನಾನನು ಎನೋಷನ ಮಗನು.
ಎನೋಷನು ಸೇಥನ ಮಗನು.
ಸೇಥನು ಆದಾಮನ ಮಗನು.
ಆದಾಮನು ದೇವರ ಮಗನು.
ಎಲೀಫಜನಿಗೆ ಯೋಬನ ಉತ್ತರ
16 ಆಗ ಯೋಬನು ಹೀಗೆ ಉತ್ತರಿಸಿದನು:
2 “ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ,
ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ.
3 ನಿಮ್ಮ ಒಣಮಾತುಗಳಿಗೆ ಕೊನೆಯಿಲ್ಲವೇ?
ನೀವು ವಾದ ಮಾಡುತ್ತಲೇ ಇರುವುದೇಕೆ?
4 ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ
ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು.
ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ
ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
5 ಆದರೆ ನಾನು ನಿಮ್ಮನ್ನು ನನ್ನ ಮಾತುಗಳಿಂದ ಪ್ರೋತ್ಸಾಹಿಸಿ
ನಿಮ್ಮಲ್ಲಿ ನಿರೀಕ್ಷೆಯನ್ನು ಹುಟ್ಟಿಸಬಹುದಾಗಿತ್ತು.
6 “ಆದರೆ ನನ್ನ ಯಾವ ಮಾತೂ ನನ್ನ ನೋವನ್ನು ನಿವಾರಣೆ ಮಾಡಲಾರದು;
ಮೌನವಾಗಿದ್ದರೂ ಅದರಿಂದ ಪ್ರಯೋಜನವೇನೂ ಇಲ್ಲ.
7 ದೇವರೇ, ನೀನು ನನ್ನನ್ನು ನಿಶ್ಯಕ್ತನನ್ನಾಗಿ ಮಾಡಿರುವೆ.
ನನ್ನ ಇಡೀ ಕುಟುಂಬವನ್ನು ನಾಶ ಮಾಡಿರುವೆ.
8 ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ, ನನ್ನ ದೇಹ ರೋಗಗ್ರಸ್ತವಾಗಿದೆ;
ನಾನು ವಿಕಾರವಾಗಿ ಕಾಣುತ್ತಿರುವೆ; ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.
9 “ದೇವರು ಕೋಪದಿಂದ
ನನ್ನ ದೇಹವನ್ನು ಸೀಳಿಹಾಕುತ್ತಿದ್ದಾನೆ.
ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ;
ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.
10 ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ;
ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ.
11 ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ.
ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.
12 ನಾನು ಸುಖದಿಂದಿದ್ದಾಗ
ದೇವರು ನನ್ನನ್ನು ಜಜ್ಜಿಹಾಕಿದನು;
ನನ್ನ ಕತ್ತು ಹಿಡಿದು
ನನ್ನನ್ನು ಚೂರುಚೂರು ಮಾಡಿದನು!
ದೇವರು ನನ್ನನ್ನು ತನ್ನ ಗುರಿ ಅಭ್ಯಾಸಕ್ಕಾಗಿ ಉಪಯೋಗಿಸುತ್ತಿದ್ದಾನೆ.
13 ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ.
ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ;
ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
14 ನನ್ನ ಮೇಲೆ ಎಡಬಿಡದೆ ಆಕ್ರಮಣ ಮಾಡಿ
ಯುದ್ಧ ವೀರನಂತೆ ನನ್ನ ಮೇಲೆ ಓಡಿಬರುವನು.
15 “ನಾನು ಬಹು ದುಃಖಿತನಾಗಿದ್ದೇನೆ;
ಗೋಣಿತಟ್ಟನ್ನು ಸುತ್ತಿಕೊಂಡಿದ್ದೇನೆ;
ಸೋತುಹೋದೆನೆಂದು ಧೂಳಿನಲ್ಲಿಯೂ
ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.
16 ಅತ್ತತ್ತು ನನ್ನ ಮುಖವು ಕೆಂಪಾಗಿದೆ,
ನನ್ನ ಕಣ್ಣುಗಳ ಸುತ್ತಲೂ ಸುಕ್ಕುಗಟ್ಟಿ ಕಡುಕಪ್ಪಾಗಿದೆ.
17 ನಾನು ಯಾರೊಡನೆಯೂ ಕ್ರೂರವಾಗಿ ವರ್ತಿಸಲಿಲ್ಲ.
ನನ್ನ ವಿಜ್ಞಾಪನೆಯು ನಿರ್ಮಲವಾಗಿತ್ತು.
18 “ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ.
ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶ ಕೊಡಬೇಡ.
19 ಈಗಲೂ ಸಹ, ನನಗೆ ಸಾಕ್ಷಿ ನೀಡುವಾತನು ಪರಲೋಕದಲ್ಲಿದ್ದಾನೆ.
ನನಗೆ ಬೆಂಬಲ ನೀಡುವಾತನು ಮೇಲೋಕದಲ್ಲಿದ್ದಾನೆ.
20 ನನ್ನ ಕಣ್ಣೀರೇ ನನ್ನ ಪ್ರತಿನಿಧಿಯಾಗಿದೆ.
ನನ್ನ ಕಣ್ಣು ದೇವರ ಉತ್ತರಕ್ಕಾಗಿ ಆಕಾಂಕ್ಷೆಯಿಂದ ಎದುರುನೋಡುತ್ತಿದೆ.
21 ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ
ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.
22 “ಯಾಕೆಂದರೆ ನಾನು ಮರಳಿ ಬರಲಾಗದ ಸ್ಥಳಕ್ಕೆ
ಇನ್ನು ಕೆಲವೇ ವರ್ಷಗಳಲ್ಲಿ ಹೊರಟುಹೋಗುವೆನು.
17 “ನನ್ನ ಆತ್ಮವು ಒಡೆದುಹೋಗಿದೆ;
ನನ್ನ ಜೀವಿತವು ಮುಗಿದುಹೋಗಿದೆ;
ಸಮಾಧಿಯು ನನಗೋಸ್ಕರ ಕಾಯುತ್ತಿದೆ.
2 ಜನರು ನನ್ನ ಸುತ್ತಲೂ ನಿಂತುಕೊಂಡು ನನ್ನನ್ನು ನೋಡಿ ನಗುತ್ತಿದ್ದಾರೆ.
ಅವರು ನನ್ನ ಕಣ್ಣೆದುರಿನಲ್ಲೇ ಗೇಲಿ ಮಾಡುತ್ತಾ ಅವಮಾನ ಮಾಡುತ್ತಿದ್ದಾರೆ.
3 “ದೇವರೇ, ಕೃಪೆ ತೋರಿ ನಾನು ನಿರಪರಾಧಿಯೆಂಬುದಕ್ಕೆ ನೀನೇ ನನಗೆ ಜಾಮೀನಾಗು.
ನಾನು ನಿರಪರಾಧಿ ಎಂಬುದಕ್ಕೆ ಜಾಮೀನಾಗಲು ಯಾರೂ ಒಪ್ಪುತ್ತಿಲ್ಲ.
4 ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿಬಿಟ್ಟಿರುವೆ;
ಅವರು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ.
ಅವರಿಗೆ ಜಯವಾಗದಂತೆ ನೋಡಿಕೊ.
5 ‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’[a]
ಎಂಬ ಗಾದೆಯಿದೆ.
ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.
6 ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ.
ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.
7 ನನ್ನ ಕಣ್ಣುಗಳು ಕುರುಡಾಗಿವೆ, ನಾನು ಬಹು ದುಃಖಿತನಾಗಿದ್ದೇನೆ.
ಅತ್ಯಧಿಕವಾದ ನೋವಿನಲ್ಲಿದ್ದೇನೆ; ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ.
8 ನೀತಿವಂತರು ಇದನ್ನು ಕಂಡು ಗಲಿಬಿಲಿಗೊಂಡಿದ್ದಾರೆ.
ನಿರಪರಾಧಿಗಳು ದೇವದೂಷಕರ ವಿಷಯದಲ್ಲಿ ಗಲಿಬಿಲಿಗೊಂಡಿದ್ದಾರೆ.
9 ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು.
ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.
10 “ಆದರೆ ನೀವೆಲ್ಲರೂ ಬನ್ನಿರಿ, ನನ್ನ ತಪ್ಪನ್ನು ತೋರಿಸಿರಿ.
ನಿಮ್ಮಲ್ಲಿ ಒಬ್ಬ ಜ್ಞಾನಿಯೂ ಇಲ್ಲ.
11 ನನ್ನ ಜೀವಿತವು ಮುಗಿದುಹೋಗುತ್ತಿದೆ, ನನ್ನ ಯೋಜನೆಗಳು ನಾಶವಾಗಿವೆ;
ನನ್ನ ನಿರೀಕ್ಷೆಯು ಇಲ್ಲವಾಗಿದೆ.
12 ರಾತ್ರಿಯನ್ನು ಹಗಲನ್ನಾಗಿ ಪರಿವರ್ತಿಸುವ,
ಬೆಳಕನ್ನು ಕತ್ತಲೆಯನ್ನಾಗಿ ಮಾಡುವ ನನ್ನ ನಿರೀಕ್ಷೆಗಳು ಇಲ್ಲವಾಗಿವೆ.
13 “ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ,
ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,
14 ನಾನು ಸಮಾಧಿಗೆ, ‘ನೀನೇ ನನ್ನ ತಂದೆ’ಯೆಂದು
ಹುಳವಿಗೆ, ‘ನೀನೇ ನನ್ನ ತಾಯಿ, ನೀನೇ ನನ್ನ ತಂಗಿ’ ಎಂದು ಹೇಳುವುದಾದರೆ,
15 ನನಗೆ ನಿರೀಕ್ಷೆಯೇ ಇಲ್ಲ.
ನನ್ನ ನಿರೀಕ್ಷೆಯನ್ನು ಯಾರೂ ನೋಡಲಾರರು.
16 ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ?
ನಾವು ಒಟ್ಟಾಗಿ ಧೂಳಿಗೆ ಇಳಿದುಹೋಗುತ್ತೇವೋ?”
ಕ್ರಿಸ್ತನ ಅಪೊಸ್ತಲರು
4 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು. 2 ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು. 3 ನೀವೇ ನನಗೆ ವಿಚಾರಣೆ ಮಾಡಿದರೂ ಯಾವುದೇ ಮಾನವ ನೇಮಿತ ನ್ಯಾಯಾಲಯದಲ್ಲಿ ನನಗೆ ವಿಚಾರಣೆಯಾದರೂ ನಾನು ಚಿಂತಿಸುವುದಿಲ್ಲ. ಅಲ್ಲದೆ ನನಗೆ ನಾನೇ ವಿಚಾರಣೆ ಮಾಡಿಕೊಳ್ಳುವುದಿಲ್ಲ. 4 ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ. 5 ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.
6 ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ. 7 ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?
8 ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು. 9 ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ. 10 ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ. 11 ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ. 12 ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ. 13 ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.
14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. 15 ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ. 16 ಆದ್ದರಿಂದ ನೀವು ನನ್ನಂತೆಯೇ ಇರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 17 ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.
18 ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ. 19 ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು. 20 ಏಕೆಂದರೆ ದೇವರ ರಾಜ್ಯವು ಕೇವಲ ಮಾತಲ್ಲ, ಅದು ಶಕ್ತಿಯಾಗಿದೆ. 21 ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?
Kannada Holy Bible: Easy-to-Read Version. All rights reserved. © 1997 Bible League International