Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 3

ಉರಿಯುವ ಪೊದೆ

ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು. ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು.

ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು. ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು.

ಮೋಶೆಯು ಪೊದೆಯನ್ನು ನೋಡಲು ಬರುತ್ತಿರುವುದನ್ನು ಯೆಹೋವನು ನೋಡಿದನು. ದೇವರು ಆ ಪೊದೆಯೊಳಗಿಂದ, “ಮೋಶೆ, ಮೋಶೆ!” ಎಂದು ಕರೆದನು.

ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.

ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ. ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು.

ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.

ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು. ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ.[a] ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ. ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ. 10 ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.

11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

12 ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.

13 ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.

14 ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು. 15 ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.

16 ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ. 17 ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.

18 “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.

19 “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ. 20 ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು. 21 ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.

22 “ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.

ಲೂಕ 6

ಯೇಸು ಸಬ್ಬತ್‌ದಿನಕ್ಕೆ ಒಡೆಯನು

(ಮತ್ತಾಯ 12:1-8; ಮಾರ್ಕ 2:23-28)

ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು. ಕೆಲವು ಫರಿಸಾಯರು, “ನೀವು ಸಬ್ಬತ್‌ದಿನದಲ್ಲಿ ಹೀಗೆ ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಿದ್ದೀರಿ. ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ, “ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಹೇಳಿದನು.

ಸಬ್ಬತ್‌ದಿನದಲ್ಲಿ ಗುಣಹೊಂದಿದ ವ್ಯಕ್ತಿ

(ಮತ್ತಾಯ 12:9-14; ಮಾರ್ಕ 3:1-6)

ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ” ಎಂದು ಹೇಳಿದನು. ಅವನು ಎದ್ದುಬಂದು ನಿಂತನು. ಆಗ ಯೇಸು ಅವರಿಗೆ, “ಸಬ್ಬತ್‌ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೋ ಅಥವಾ ಕೆಟ್ಟಕಾರ್ಯವನ್ನೋ? ಜೀವವನ್ನು ಉಳಿಸುವುದೋ? ಅಥವಾ ನಾಶಮಾಡುವುದೋ?” ಎಂದು ಕೇಳಿದನು.

10 ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಆ ಕೂಡಲೇ ಅವನ ಕೈ ವಾಸಿಯಾಯಿತು. 11 ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.

ಯೇಸುವಿನ ಹನ್ನೆರಡು ಮಂದಿ ಅಪೊಸ್ತಲರು

(ಮತ್ತಾಯ 10:1-4; ಮಾರ್ಕ 3:13-19)

12 ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು. 13 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:

14 ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.)

ಮತ್ತು ಪೇತ್ರನ ಸಹೋದರನಾದ ಅಂದ್ರೆಯ,

ಯಾಕೋಬ

ಮತ್ತು ಯೋಹಾನ,

ಫಿಲಿಪ್ಪ

ಮತ್ತು ಬಾರ್ತೊಲೊಮಾಯ,

15 ಮತ್ತಾಯ,

ತೋಮ,

ಯಾಕೋಬ (ಅಲ್ಫಾಯನ ಮಗ)

ಮತ್ತು ದೇಶಾಭಿಮಾನಿ[a] ಎನಿಸಿಕೊಂಡಿದ್ದ ಸಿಮೋನ,

16 ಯೂದ (ಯಾಕೋಬನ ಮಗ)

ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.)

ಯೇಸುವಿನ ಉಪದೇಶ ಮತ್ತು ಜನರಿಗೆ ಆರೋಗ್ಯದಾನ

(ಮತ್ತಾಯ 4:23-25; 5:1-12)

17 ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು. 18 ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು. 19 ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!

20 ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ,

“ಬಡವರಾದ ನೀವು ಧನ್ಯರು;
    ದೇವರ ರಾಜ್ಯವು ನಿಮ್ಮದೇ.
21 ಹಸಿವೆಗೊಂಡಿರುವ ನೀವು ಧನ್ಯರು;
    ನಿಮಗೆ ತೃಪ್ತಿಯಾಗುವುದು.
ಅಳುತ್ತಿರುವ ನೀವು ಧನ್ಯರು;
    ಆನಂದದಿಂದ ನೀವು ನಗುವಿರಿ.

22 “ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು. 23 ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು.

24 “ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ!
    ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ.
25 ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ!
    ನೀವು ಹಸಿಯುವಿರಿ.
ನಗುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ!
    ನೀವು ದುಃಖಪಡುವಿರಿ ಮತ್ತು ಅಳುವಿರಿ.

26 “ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.

ನಿಮ್ಮ ವೈರಿಗಳನ್ನು ಪ್ರೀತಿಸಿರಿ

(ಮತ್ತಾಯ 5:38-48; 7:12)

27 “ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ. 28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ. 29 ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ. 30 ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ. 31 ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.

32 “ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ! 33 ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ! 34 ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!

35 “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ. 36 ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ.

ನಿನ್ನನ್ನು ಪರೀಕ್ಷಿಸಿಕೊ

(ಮತ್ತಾಯ 7:1-5)

37 “ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು. 38 ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”

39 ಯೇಸು ಅವರಿಗೆ ಈ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು. 40 ಶಿಷ್ಯನು ಗುರುವಿಗಿಂತ ಮೇಲಲ್ಲ. ಆದರೆ, ಶಿಷ್ಯನು ಪೂರ್ಣ ಕಲಿತಾಗ ಗುರುವಿನಂತೆ ಆಗುವನು.

41 “ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? 42 ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ.[b] ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.

ಎರಡು ವಿಧವಾದ ಫಲ

(ಮತ್ತಾಯ 7:17-20; 12:34-35)

43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44 ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನಾಗಲಿ ಪಡೆಯುವುದಿಲ್ಲ! 45 ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.

ಎರಡು ವಿಧವಾದ ಜನರು

(ಮತ್ತಾಯ 7:24-27)

46 “ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ? 47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು. 48 ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.

49 “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”

ಯೋಬನು 20

ಚೋಫರನ ಉತ್ತರ

20 ಬಳಿಕ ನಾಮಾಥ ದೇಶದ ಚೋಫರನು ಉತ್ತರಕೊಟ್ಟನು:

“ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು.
    ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು.
ನಿನ್ನ ಉತ್ತರಗಳಿಂದ ನೀನು ನನಗೆ ಅವಮಾನ ಮಾಡಿರುವೆ!
    ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ.

4-5 “ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ.
    ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ.
    ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು.
ದುಷ್ಟನ ಅಹಂಕಾರವು ಆಕಾಶವನ್ನು ತಲುಪಬಹುದು;
    ಅವನ ತಲೆಯು ಮೋಡಗಳಿಗೆ ತಗುಲಬಹುದು.
ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು.
    ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.
ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ,
    ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.
ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ,
    ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ.
10 ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು.
    ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.
11 ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು;
    ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳುಪಾಲಾಗುತ್ತವೆ.

12 “ದುಷ್ಟನ ಬಾಯಿಗೆ ಕೆಟ್ಟತನವು ಸಿಹಿಯಾಗಿರುವುದು.
    ಅವನು ಅದನ್ನು ತನ್ನ ನಾಲಿಗೆಯ ಕೆಳಗೆ ಅಡಗಿಸಿಕೊಳ್ಳುವನು.
13 ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು.
    ಅದನ್ನು ತನ್ನ ಬಾಯಿಯಲ್ಲಿ ಸಿಹಿತಿನಿಸಿನಂತೆ ಇಟ್ಟುಕೊಂಡಿರುವನು.
14 ಆದರೆ ಅದು ಅವನ ಹೊಟ್ಟೆಯಲ್ಲಿ
    ಹಾವಿನ ವಿಷದ ಹಾಗೆ ಕಹಿಯಾದ ವಿಷವಾಗುವುದು.
15 ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು.
    ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.
16 ದುಷ್ಟನ ಪಾನೀಯವು ಹಾವಿನ ವಿಷದಂತಿದೆ.
    ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು.
17 ಆ ದುಷ್ಟನು ಹಾಲೂಜೇನೂ ಹರಿಯುವ ನದಿಗಳನ್ನು
    ನೋಡುವುದೇ ಇಲ್ಲ.
18 ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು.
    ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.
19 ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ;
    ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.

20 “ಅವನಿಗೆ ತೃಪ್ತಿಯೇ ಇಲ್ಲ.
    ಅವನ ಐಶ್ವರ್ಯವು ಅವನನ್ನು ರಕ್ಷಿಸಲಾರದು.
21 ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ.
    ಅವನ ಅಭಿವೃದ್ಧಿಯು ನಿಂತುಹೋಗುವುದು.
22 ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು;
    ಅವನ ಕಷ್ಟಗಳು ಅವನ ಮೇಲೆ ಬೀಳುವವು!
23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ
    ದೇವರು ತನ್ನ ದಹಿಸುವ ಕೋಪವನ್ನು ತೋರಿ
    ಅವನ ಮೇಲೆ ದಂಡನೆಯ ಮಳೆ ಸುರಿಸುವನು.
24 ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು;
    ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು.
25 ಅವನು ಅದನ್ನು ಕೀಳಲು
    ಅದು ಬೆನ್ನಿನಿಂದ ಬರುವುದು;
ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು.
    ಅವನು ಅಪಾಯದಿಂದ ದಿಗ್ಭ್ರಾಂತನಾಗುವನು.
26 ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ.
    ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು.
    ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶಮಾಡುವುದು.
27 ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ.
    ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತದೆ.
28 ಅವನ ಮನೆಯಲ್ಲಿರುವ ಪ್ರತಿಯೊಂದನ್ನು
    ದೇವರ ಕೋಪದ ಪ್ರವಾಹವು ಕೊಚ್ಚಿಕೊಂಡುಹೋಗುವುದು.
29 ದುಷ್ಟರಿಗೆ ದೇವರು ಮಾಡುವುದು ಇದನ್ನೇ.
    ಅವರಿಗೆ ದೇವರು ಕೊಡುವುದೂ ಇದನ್ನೇ.”

1 ಕೊರಿಂಥದವರಿಗೆ 7

ಮದುವೆ ಕುರಿತು ಬೋಧನೆ

ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ. ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು. ಗಂಡನು ತನ್ನ ಹೆಂಡತಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಮತ್ತು ಹೆಂಡತಿಯು ತನ್ನ ಗಂಡನಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ. ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು. ಸ್ವಲ್ಪಕಾಲ ಅಗಲಿ ದೂರವಿರುವುದಕ್ಕೆ ಅನುಮತಿ ಕೊಡಲು ನಾನು ಇದನ್ನು ಹೇಳುತ್ತಿದ್ದೇನೆ. ಇದು ಆಜ್ಞೆಯಲ್ಲ. ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.

ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು. ಆದರೆ ಅವರು ತಮ್ಮ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾಗದಿದ್ದರೆ, ಅವರು ಮದುವೆಯಾಗಬೇಕು. ಲೈಂಗಿಕ ಆಸೆಯಿಂದ ಬೆಂದು ಹೋಗುವುದಕ್ಕಿಂತಲೂ ಮದುವೆ ಮಾಡಿಕೊಳ್ಳುವುದೇ ಉತ್ತಮವಾಗಿದೆ.

10 ಮದುವೆಯಾಗಿರುವವರಿಗೆ ನಾನು ಈ ಆಜ್ಞೆಯನ್ನು ಕೊಡುತ್ತೇನೆ. (ಈ ಆಜ್ಞೆಯು ನನ್ನದಲ್ಲ. ಪ್ರಭುವಿನದು.) ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಡಬಾರದು. 11 ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.

12 ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು. 13 ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು. 14 ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.

15 ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು. 16 ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.

ದೇವರ ಕರೆಗೆ ತಕ್ಕಂತೆ ಜೀವಿಸಿರಿ

17 ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ. 18 ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು. 19 ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು. 20 ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಇರಬೇಕು. 21 ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು. 22 ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ. 23 ನಿಮ್ಮನ್ನು ಕ್ರಯಕ್ಕೆ ಕೊಂಡುಕೊಳ್ಳಲಾಗಿದೆ. ಆದ್ದರಿಂದ ನೀವು ಮನುಷ್ಯರ ಗುಲಾಮರಾಗಬೇಡಿ. 24 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು.

ಮದುವೆ ಮಾಡಿಕೊಳ್ಳುವುದರ ಬಗ್ಗೆ ಪ್ರಶ್ನೆಗಳು

25 ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ. 26 ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ. 27 ನಿನಗೆ ಹೆಂಡತಿಯಿದ್ದರೆ, ಆಕೆಯಿಂದ ಬಿಡುಗಡೆ ಹೊಂದಲು ಪ್ರಯತ್ನಿಸಬೇಡ. ನಿನಗೆ ಮದುವೆಯಾಗಿಲ್ಲದಿದ್ದರೆ, ಹೆಂಡತಿಯನ್ನು ಹುಡುಕಲು ಪ್ರಯತ್ನಿಸಬೇಡ. 28 ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

29 ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು. 30 ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು. 31 ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.

32 ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ. 33 ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ. 34 ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ. 35 ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

36 ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ. 37 ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ. 38 ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ.[a]

39 ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು. 40 ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International