Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 4

ಮೋಶೆಗೆ ಸಾಕ್ಷಿ

ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.

ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು.

ಮೋಶೆ, “ಊರುಗೋಲು” ಎಂದು ಉತ್ತರಿಸಿದನು.

ಆಗ ಯೆಹೋವನು, “ನಿನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡು” ಅಂದನು.

ಮೋಶೆ, ತನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡಿದನು. ಆಗ ಕೋಲು ಹಾವಾಯಿತು. ಮೋಶೆ ಅದರ ಬಳಿಯಿಂದ ಓಡಿಹೋದನು. ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿದುಕೊ” ಎಂದು ಹೇಳಿದನು.

ಮೋಶೆಯು ಕೈಚಾಚಿ ಹಾವಿನ ಬಾಲವನ್ನು ಹಿಡಿದನು. ಆಗ ಹಾವು ಕೋಲಾಯಿತು. ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.

ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು.

ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.

ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.

ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು. ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.

10 ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

11 ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ. 12 ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.

13 ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು.

14 ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನು ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು. 15 ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು. 16 ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.[a] 17 ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.

ಮೋಶೆ ಈಜಿಪ್ಟಿಗೆ ಹಿಂತಿರುಗಿದ್ದು

18 ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು.

ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.

19 ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.

20 ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.[b]

21 ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ. 22 ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ಯೆಹೋವನಿಗೆ ಚೊಚ್ಚಲು ಮಗನಂತಿದೆ. 23 ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.

ಮೋಶೆಯ ಮಗನಿಗೆ ಸುನ್ನತಿಯಾದದ್ದು

24 ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.[c] 25 ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು. 26 ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದ್ದರಿಂದ ಯೆಹೋವನು ಅವನನ್ನು ಉಳಿಸಿದನು.

ಯೆಹೋವನ ಮುಂದೆ ಮೋಶೆ ಆರೋನರು

27 ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು. 28 ಯೆಹೋವನು ಹೇಳಿದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತಕಾರ್ಯಗಳನ್ನು ಮಾಡಬೇಕೆಂದೂ ಆರೋನನಿಗೆ ವಿವರಿಸಿದನು.

29 ಆದ್ದರಿಂದ ಮೋಶೆ ಆರೋನರು ಹೋಗಿ ಇಸ್ರೇಲ್ ಜನರ ಹಿರಿಯರೆಲ್ಲರನ್ನು ಒಟ್ಟುಗೂಡಿಸಿದರು. 30 ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಅದ್ಭುತಕಾರ್ಯಗಳನ್ನು ಮಾಡಿದನು. 31 ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.

ಲೂಕ 7

ಗುಣಹೊಂದಿದ ಸೇವಕ

(ಮತ್ತಾಯ 8:5-13; ಯೋಹಾನ 4:43-54)

ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು. ಅಲ್ಲಿ ಒಬ್ಬ ಸೇನಾಧಿಪತಿ[a] ಇದ್ದನು. ಅವನ ಪ್ರಿಯ ಸೇವಕನೊಬ್ಬನು ಕಾಯಿಲೆಯಿಂದ ಸಾಯುವ ಸ್ಥಿತಿಯಲ್ಲಿದ್ದನು. ಯೇಸುವಿನ ಸುದ್ದಿಯನ್ನು ಕೇಳಿದಾಗ, ಅವನು ಕೆಲವು ಹಿರಿಯ ಯೆಹೂದ್ಯನಾಯಕರನ್ನು ಆತನ ಬಳಿಗೆ ಕಳುಹಿಸಿ ತನ್ನ ಸೇವಕನ ಪ್ರಾಣವನ್ನು ಉಳಿಸಿಕೊಡಬೇಕೆಂದು ಬೇಡಿಕೊಂಡನು. ಆ ಜನರು ಯೇಸುವಿನ ಬಳಿಗೆ ಬಂದು, “ಈ ಸೇನಾಧಿಪತಿ ನಿನ್ನ ಸಹಾಯ ಹೊಂದುವುದಕ್ಕೆ ಯೋಗ್ಯನಾಗಿದ್ದಾನೆ. ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.

ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ. ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು. ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.

ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು.

10 ಆ ಅಧಿಕಾರಿಯು ಕಳುಹಿಸಿದ್ದ ಜನರು ಯೇಸುವಿನ ಬಳಿಯಿಂದ ಹಿಂತಿರುಗಿ ಹೋದಾಗ, ಆ ಸೇವಕನಿಗೆ ಆಗಲೇ ಗುಣವಾಗಿರುವುದನ್ನು ಕಂಡರು.

ಸತ್ತವನಿಗೆ ಜೀವದಾನ

11 ಮರುದಿನ ಯೇಸು ನಾಯಿನ್ ಎಂಬ ಊರಿಗೆ ಹೋದನು. ಯೇಸುವಿನೊಡನೆ ಆತನ ಶಿಷ್ಯರೂ ಹೋಗುತ್ತಿದ್ದರು. ಅವರೊಡನೆ ಅನೇಕ ಜನರು ದೊಡ್ಡ ಸಮೂಹವಾಗಿ ಹೋಗುತ್ತಿದ್ದರು. 12 ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು. 13 ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ 14 ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು. 15 ಆಗ ಅವನು ಎದ್ದು ಕುಳಿತುಕೊಂಡು ಮಾತಾಡತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.

16 ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.

17 ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.

ಯೋಹಾನನು ಯೇಸುವಿಗೆ ಕೇಳಿದ ಪ್ರಶ್ನೆ

(ಮತ್ತಾಯ 11:2-19)

18 ಯೋಹಾನನ ಶಿಷ್ಯರು ಈ ಸಂಗತಿಗಳನ್ನೆಲ್ಲಾ ಯೋಹಾನನಿಗೆ ತಿಳಿಸಿದರು. ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, 19 “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.

20 ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.

21 ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು. 22 ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ. 23 ಸಂಶಯಪಡದೆ ನನ್ನನ್ನು ಸ್ವೀಕರಿಸಿಕೊಳ್ಳುವವನೇ ಧನ್ಯನು!” ಎಂದು ಹೇಳಿ ಕಳುಹಿಸಿದನು.

24 ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 25 ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ. 26 ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ.

27 ‘ಇಗೋ! ನಾನು (ದೇವರು) ನನ್ನ ದೂತನನ್ನು[b] ನಿನ್ನ ಮುಂದೆ ಕಳುಹಿಸುತ್ತೇನೆ.
    ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’(A)

ಎಂದು ಯೋಹಾನನ ಕುರಿತು ಬರೆದಿದೆ. 28 ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.

29 ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು. 30 ಆದರೆ ಫರಿಸಾಯರು[c] ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.

31 “ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? 32 ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು,

‘ನಾವು ನಿಮಗೋಸ್ಕರ ವಾದ್ಯಬಾರಿಸಿದೆವು,
    ಆದರೆ ನೀವು ಕುಣಿಯಲಿಲ್ಲ;
ನಾವು ದುಃಖದ ಹಾಡನ್ನು ಹಾಡಿದೆವು,
    ಆದರೆ ನೀವು ಅಳಲಿಲ್ಲ’

ಎಂದು ಹೇಳುತ್ತಾರೆ. 33 ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ. 34 ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ. 35 ಆದರೆ ಜ್ಞಾನವು ತನ್ನ ಕಾರ್ಯಗಳಿಂದಲೇ ತನ್ನನ್ನು ಸಮರ್ಥಿಸಿಕೊಳ್ಳುವುದು” ಎಂದು ಹೇಳಿದನು.

ಫರಿಸಾಯನಾದ ಸಿಮೋನನು

36 ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು.

37 ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ[d] ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು. 38 ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.

39 ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.

40 ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು.

ಸಿಮೋನನು, “ಗುರುವೇ, ಹೇಳು!” ಎಂದನು.

41 ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು[e] ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು. 42 ಅವರಲ್ಲಿ ಹಣವಿರಲಿಲ್ಲ. ಆದ್ದರಿಂದ ಅವರು ಸಾಲ ತೀರಿಸಲು ಆಗಲಿಲ್ಲ. ಸಾಹುಕಾರನು ಅವರಿಗೆ, ‘ನೀವು ಸಾಲ ತೀರಿಸಬೇಕಾಗಿಲ್ಲ’ ಎಂದು ಹೇಳಿದನು. ಆ ಇಬ್ಬರಲ್ಲಿ ಯಾರು ಹೆಚ್ಚಾಗಿ ಸಾಹುಕಾರನನ್ನು ಪ್ರೀತಿಸುವರು?” ಎಂದು ಕೇಳಿದನು.

43 ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು.

ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು. 44 ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು. 45 ನೀನು ನನಗೆ ಮುದ್ದಿಡಲಿಲ್ಲ. ಈಕೆಯಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುದ್ದಿಡುತ್ತಿದ್ದಾಳೆ! 46 ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು. 47 ಈಕೆಯ ಅನೇಕ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ಈಕೆ ಅಧಿಕವಾದ ಪ್ರೀತಿಯನ್ನು ತೋರಿದಳು. ಆದರೆ ಸ್ವಲ್ಪ ಕ್ಷಮೆ ಹೊಂದುವವನು ಕೇವಲ ಸ್ವಲ್ಪ ಪ್ರೀತಿಯನ್ನೇ ತೋರುವನು” ಎಂದು ಹೇಳಿದನು.

48 ಬಳಿಕ ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

49 ಊಟಕ್ಕೆ ಕುಳಿತುಕೊಂಡಿದ್ದವರು, “ಇವನು (ಯೇಸು) ತನ್ನನ್ನು ಯಾರೆಂದುಕೊಂಡಿದ್ದಾನೆ? ಪಾಪಗಳನ್ನು ಕ್ಷಮಿಸಲು ಇವನಿಗೆ ಹೇಗೆ ಸಾಧ್ಯ?” ಎಂದು ತಮ್ಮೊಳಗೆ ಅಂದುಕೊಂಡರು.

50 ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.

ಯೋಬನು 21

ಯೋಬನ ಉತ್ತರ

21 ಬಳಿಕ ಯೋಬನು ಉತ್ತರಕೊಟ್ಟನು:

“ನಾನು ಹೇಳುವುದನ್ನು ಕೇಳಿ.
    ನಿಮ್ಮಿಂದ ನನಗಾಗಬೇಕಾದ ಆದರಣೆ ಇಷ್ಟೇ.
ನಾನು ಮಾತಾಡುವಾಗ ತಾಳ್ಮೆಯಿಂದಿರಿ.
    ನಾನು ಮಾತಾಡಿದ ಮೇಲೆ ನೀವು ನನ್ನನ್ನು ಗೇಲಿ ಮಾಡಿದರೂ ಮಾಡಿರಿ.

“ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ.
    ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.
ನನ್ನನ್ನು ನೋಡಿ ಬೆರಗಾಗಿ
    ನಿಮ್ಮ ಬಾಯಿಯ ಮೇಲೆ ಕೈಯಿಟ್ಟುಕೊಳ್ಳಿರಿ, ಗಾಬರಿಯಿಂದ ನನ್ನನ್ನೇ ದೃಷ್ಟಿಸಿ ನೋಡಿರಿ!
ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ
    ನನಗೆ ಭಯವಾಗುತ್ತದೆ; ನನ್ನ ದೇಹವು ನಡುಗುತ್ತದೆ.
ದುಷ್ಟರು ದೀರ್ಘಕಾಲ ಜೀವಿಸುವುದೇಕೆ?
    ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ?
ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು;
    ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು.
ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ.
    ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ.
10 ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ.
    ಅವರ ಹಸುಗಳು ಕರುಗಳನ್ನು ಈಯುತ್ತವೆ.
11 ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು.
    ಅವರ ಮಕ್ಕಳು ಸುತ್ತಮುತ್ತ ಕುಣಿದಾಡುವರು.
12 ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು.
13 ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು.
    ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು.
14 ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು!
    ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.
15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು?
    ನಾವು ಆತನ ಸೇವೆಮಾಡುವ ಅಗತ್ಯವಿಲ್ಲ!
    ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.

16 “ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ.
    ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.
17 ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು?
    ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು?
    ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?
18 ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ
    ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?
19 ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ.
    ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ.
    ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು
    ಅವನು ತಿಳಿದುಕೊಳ್ಳುವನು.
20 ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ;
    ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.
21 ದುಷ್ಟನ ಜೀವಿತವು ಮುಗಿದುಹೋದ ಮೇಲೆ,
    ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ.

22 “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು.
    ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.
23 ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು.
    ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.
24 ಅವನ ದೇಹವು ಚೆನ್ನಾಗಿ ಪೋಷಿಸಲ್ಪಟ್ಟಿತು,
    ಅವನ ಎಲುಬುಗಳು ಮಜ್ಜೆಯಿಂದ ಇನ್ನೂ ಸಾರವಾಗಿರುವುದು.
25 ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು.
    ಅವನು ಯಾವ ಸುಖವನ್ನೂ ಅನುಭವಿಸಲಿಲ್ಲ.
26 ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು.
    ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.

27 “ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ,
    ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ನಾನು ಬಲ್ಲೆ.
28 ‘ನೀತಿವಂತನ ಮನೆಯು ಎಲ್ಲಿದೆ?
    ದುಷ್ಟನು ವಾಸವಾಗಿರುವುದು ಎಲ್ಲಿ?’ ಎಂದು ನೀವು ಕೇಳಬಹುದು.

29 “ನೀವು ಖಂಡಿತವಾಗಿಯೂ ಪ್ರಯಾಣಿಕರನ್ನು ಕೇಳಿದ್ದೀರಿ.
    ನೀವು ಖಂಡಿತವಾಗಿಯೂ ಅವರ ವರದಿಯನ್ನು ಒಪ್ಪಿಕೊಳ್ಳುವಿರಿ.
30 ಅಪಾಯ ಬಂದಾಗ ದುಷ್ಟನು ಪಾರಾಗುವನು;
    ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.
31 ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ.
    ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.
32 ದುಷ್ಟನನ್ನು ಸಮಾಧಿಗೆ ಹೊತ್ತುಕೊಂಡು ಹೋದಾಗ
    ಅವನ ಸಮಾಧಿಯ ಸಮೀಪದಲ್ಲಿ ಕಾವಲುಗಾರರು ನಿಂತುಕೊಳ್ಳುವರು.
33 ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು.
    ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.

34 “ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ.
    ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”

1 ಕೊರಿಂಥದವರಿಗೆ 8

ವಿಗ್ರಹಗಳಿಗೆ ಅರ್ಪಿತವಾದ ಆಹಾರದ ಬಗ್ಗೆ ಚರ್ಚೆ

ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ. ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ. ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.

ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ. ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು “ದೇವರು”ಗಳೆಂತಲೂ “ಪ್ರಭು”ಗಳೆಂತಲೂ ಕರೆಯುತ್ತಾರೆ.) ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.

ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ. ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ತರಲಾರದು. ನಾವು ಮಾಂಸವನ್ನು ತಿನ್ನದಿದ್ದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಕಡಿಮೆಯೇನೂ ಆಗುವುದಿಲ್ಲ. ಅದೇ ರೀತಿ, ಮಾಂಸವನ್ನು ತಿಂದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಹೆಚ್ಚೇನೂ ಆಗುವುದಿಲ್ಲ.

ಆದರೆ ನಿಮ್ಮ ಸ್ವತಂತ್ರದ ಬಗ್ಗೆ ಎಚ್ಚರಿಕೆಯಿಂದಿರಿ. ನಂಬಿಕೆಯಲ್ಲಿ ಬಲಹೀನರಾಗಿರುವ ಜನರನ್ನು ನಿಮ್ಮ ಸ್ವಾತಂತ್ರ್ಯವು ಪಾಪಕ್ಕೆ ಬೀಳಿಸುವ ಸಾಧ್ಯತೆಯಿದೆ. 10 ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ. 11 ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ. 12 ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ. 13 ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International