M’Cheyne Bible Reading Plan
ಪವಿತ್ರ ವಸ್ತುಗಳಿಗಾಗಿ ಕಾಣಿಕೆಗಳು
25 ಯೆಹೋವನು ಮೋಶೆಗೆ, 2 “ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು. 3 ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ, 4 ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ, 5 ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು,[a] ಜಾಲೀಮರ, 6 ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು, 7 ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.
ಪವಿತ್ರ ಗುಡಾರ
8 ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು. 9 ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.
ಒಡಂಬಡಿಕೆಯ ಪೆಟ್ಟಿಗೆ
10 “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. 11 ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. 12 ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು. 13 ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. 14 ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು. 15 ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.
16 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು. 17 ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು. 18 ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು. 19 ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು. 20 ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
21 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು. 22 ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.
ಮೇಜು
23 “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. 24 ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. 25 ಬಳಿಕ ಮೇಜಿನ ಸುತ್ತಲೂ ಮೂರು ಇಂಚು[b] ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು. 26 ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು. 27 ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. 28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು. 29 ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು. 30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.
ದೀಪಸ್ತಂಭ
31 “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.
32 “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು. 33 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು. 34 ದೀಪಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು. 35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು. 36 ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು. 37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು. 38 ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು. 39 ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು[c] 40 ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.
ಯೇಸು ಮತ್ತು ಸಮಾರ್ಯ ಸ್ತ್ರೀಯ ಸಂಭಾಷಣೆ
4 ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು. 2 (ವಾಸ್ತವವಾಗಿ ಜನರಿಗೆ ದೀಕ್ಷಾಸ್ನಾನ ಕೊಟ್ಟದ್ದು ಯೇಸುವಲ್ಲ. ಆತನ ಶಿಷ್ಯರೇ ಜನರಿಗೆ ದೀಕ್ಷಾಸ್ನಾನ ಮಾಡಿಸಿದರು.) 3 ಆಗ, ಆತನು ಜುದೇಯವನ್ನು ಬಿಟ್ಟು ಮತ್ತೆ ಗಲಿಲಾಯಕ್ಕೆ ಹೋದನು. 4 ಸಮಾರ್ಯ ಪ್ರಾಂತ್ಯದ ಮೂಲಕವೇ ಗಲಿಲಾಯಕ್ಕೆ ಹೋಗಬೇಕಿತ್ತು.
5 ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ. 6 ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು. 7 ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು. 8 (ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)
9 ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)
10 ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.
11 ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ. 12 ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.
13 ಯೇಸು, “ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೂ ಮತ್ತೆ ದಾಹವಾಗುವುದು. 14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
15 ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು.
16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.
17 ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು.
ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. 18 ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.
19 ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ. 20 ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.
21 ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ. 22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ. 23 ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ. 24 ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.
25 ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)
26 ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು.
27 ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.
28 ಬಳಿಕ ಆ ಸ್ತ್ರೀಯು, ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ಹಿಂತಿರುಗಿ ಹೋಗಿ ಜನರಿಗೆ, 29 “ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು. 30 ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು.
31 ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.
32 ಅದಕ್ಕೆ ಯೇಸು, “ನನ್ನಲ್ಲಿ ಆಹಾರವಿದೆ. ಆ ಆಹಾರದ ಬಗ್ಗೆ ನಿಮಗೇನೂ ಗೊತ್ತಿಲ್ಲ” ಎಂದನು.
33 ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.
34 ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ. 35 ‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ. 36 ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು. 37 ‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು. 38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.
39 ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು. 40 ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು. 41 ಆತನು ಹೇಳಿದ ಸಂಗತಿಗಳನ್ನು ಕೇಳಿ ಇನ್ನೂ ಅನೇಕ ಜನರು ನಂಬಿದರು.
42 ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.
ಗುಣಹೊಂದಿದ ಅಧಿಕಾರಿಯ ಮಗ
(ಮತ್ತಾಯ 8:5-13; ಲೂಕ 7:1-10)
43 ಎರಡು ದಿನಗಳಾದ ನಂತರ ಯೇಸು ಅಲ್ಲಿಂದ ಗಲಿಲಾಯಕ್ಕೆ ಹೋದನು. 44 (ಪ್ರವಾದಿಗೆ ಸ್ವಂತ ಊರಿನಲ್ಲಿ ಗೌರವವಿಲ್ಲವೆಂದು ಸ್ವತಃ ಯೇಸುವೇ ತಿಳಿಸಿದ್ದನು.) 45 ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.
46 ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು. 47 ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು. 48 ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.
49 ರಾಜನ ಅಧಿಕಾರಿ, “ಸ್ವಾಮೀ, ನನ್ನ ಮಗನು ಸಾಯುವ ಮೊದಲೇ ನೀನು ಬರಬೇಕು” ಎಂದು ಕೇಳಿಕೊಂಡನು.
50 ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು” ಎಂದು ಉತ್ತರಕೊಟ್ಟನು.
ಯೇಸುವಿನ ಮಾತನ್ನು ಅವನು ನಂಬಿ ಮನೆಗೆ ಹಿಂತಿರುಗಿದನು. 51 ಅವನು ಮನೆಗೆ ಹೋಗುತ್ತಿರುವಾಗ ಅವನ ಸೇವಕರುಗಳು ಬಂದು ಅವನನ್ನು ಭೇಟಿಯಾಗಿ, “ನಿನ್ನ ಮಗನು ಗುಣಹೊಂದಿದನು” ಎಂದು ತಿಳಿಸಿದರು.
52 ಅವನು, “ನನ್ನ ಮಗನಿಗೆ ಯಾವಾಗ ಗುಣವಾಯಿತು?” ಎಂದು ಕೇಳಿದನು.
ಸೇವಕರುಗಳು, “ನಿನ್ನೆ ಮಧ್ಯಾಹ್ನ ಸುಮಾರು ಒಂದು ಗಂಟೆಯಲ್ಲಿ ಅವನ ಜ್ವರವು ಬಿಟ್ಟಿತು” ಎಂದು ಉತ್ತರಕೊಟ್ಟರು.
53 “ನಿನ್ನ ಮಗನು ಬದುಕುವನು” ಎಂದು ಯೇಸು ಹೇಳಿದ್ದು ಇದೇ ಹೊತ್ತಿನಲ್ಲಿ ಎಂಬುದು ತಂದೆಗೆ ತಿಳಿದಿತ್ತು. ಆದ್ದರಿಂದ ಅವನು ಮತ್ತು ಅವನ ಮನೆಯವರೆಲ್ಲ ಯೇಸುವನ್ನು ನಂಬಿದರು.
54 ಯೇಸು ಜುದೇಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯವಿದು.
ಮುನ್ನುಡಿ
1 ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು. 2 ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ. 3 ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ. 4 ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ. 5 ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ. 6 ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.
7 ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.
ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ
8 ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ. 9 ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.
10 ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಷ್ಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು. 11 ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ 12 ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ. 13 ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ. 14 ಅವುಗಳಲ್ಲಿ ನಿನಗೆ ಸಮಪಾಲು ದೊರೆಯುವುದು, ಬಂದು ನಮ್ಮೊಂದಿಗೆ ಸೇರಿಕೊ” ಎಂದು ಆ ಪಾಪಿಗಳು ಹೇಳಬಹುದು.
15 ನನ್ನ ಮಗನೇ, ಅವರ ಜೀವಿತವನ್ನು ಅನುಸರಿಸಬೇಡ. ಅವರ ಜೀವಿತಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ. 16 ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.
17 ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ. 18 ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ. 19 ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.
ಜ್ಞಾನವೆಂಬಾಕೆ
20 ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ. 21 ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:
22 “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ? 23 ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.
24 “ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ. 25 ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ. 26 ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿ ಮಾಡುವೆನು. 27 ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.
28 “ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ. 29 ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ. 30 ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ. 31 ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.
32 “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು. 33 ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”
ಕಡೆಯ ಎಚ್ಚರಿಕೆಗಳು ಮತ್ತು ವಂದನೆಗಳು
13 ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು”(A) ಹೇಳಬೇಕು. 2 ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನೆಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. 3 ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ. 4 ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.
5 ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ. 6 ಆದರೆ ನಾವು ಅಯೋಗ್ಯರಲ್ಲವೆಂದು ನಿಮಗೆ ಖಚಿತವಾಗುವುದರಲ್ಲಿ ನಮಗೆ ಸಂದೇಹವಿಲ್ಲ. 7 ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ. 8 ಸತ್ಯಕ್ಕೆ ವಿರೋಧವಾದ ಸಂಗತಿಗಳನ್ನು ಮಾಡಲು ನಮಗೆ ಸಾಧ್ಯವಿಲ್ಲ. ಸತ್ಯದ ಪರವಾದ ಕಾರ್ಯಗಳನ್ನು ಮಾತ್ರ ಮಾಡಲು ನಮಗೆ ಸಾಧ್ಯ. 9 ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ. 10 ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.
11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.
12 ನೀವು ಒಬ್ಬರನ್ನೊಬ್ಬರು ವಂದಿಸುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ. ದೇವರ ಪವಿತ್ರ ಜನರೆಲ್ಲರೂ ನಿಮಗೆ ವಂದನೆ ತಿಳಿಸಿದ್ದಾರೆ.
13 ನಮ್ಮ ಪ್ರಭುವಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರೊಂದಿಗಿರಲಿ.
Kannada Holy Bible: Easy-to-Read Version. All rights reserved. © 1997 Bible League International