Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 26

ಪವಿತ್ರಗುಡಾರ

26 ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು. ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು. ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು. ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.

“ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು. ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು. 10 ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು. 11 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. 12 ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು. 13 ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು. 14 ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.

15 “ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು. 16 ಚೌಕಟ್ಟುಗಳು ಹತ್ತುಮೊಳ ಎತ್ತರವಾಗಿಯೂ ಒಂದೂವರೆ ಮೊಳ ಅಗಲವಾಗಿಯೂ ಇರಬೇಕು. 17 ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು. 18 ಪವಿತ್ರಗುಡಾರದ ದಕ್ಷಿಣ ಭಾಗಕ್ಕೆ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. 19 ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು. 20 ಪವಿತ್ರಗುಡಾರದ ಇನ್ನೊಂದು ಕಡೆಗೆ ಅಂದರೆ, ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. 21 ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳು ಇರುವಂತೆ ಪ್ರತಿಯೊಂದು ಕಡೆಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. 22 ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿಯೂ ಆರು ಚೌಕಟ್ಟುಗಳನ್ನು ಮಾಡಿಸಬೇಕು. 23 ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು. 24 ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು. 25 ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು.

26 “ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. 27 ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು. 28 ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು.

29 “ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು. 30 ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು.

ಪವಿತ್ರಗುಡಾರದ ಒಳಭಾಗ

31 “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು. 32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು. 33 ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು. 34 ಮಹಾಪವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಡಬೇಕು.

35 “ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು.

ಪವಿತ್ರಗುಡಾರದ ಬಾಗಿಲು

36 “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು. 37 ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.

ಯೋಹಾನ 5

ಕೊಳದ ಬಳಿ ಗುಣಹೊಂದಿದ ರೋಗಿ

ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು. ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ. ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.[a] [b] ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬನು ಅಲ್ಲಿ ಬಿದ್ದುಕೊಂಡಿದ್ದನು. ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.

ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.

ಆಗ ಯೇಸು, “ಎದ್ದುನಿಲ್ಲು! ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ” ಎಂದು ಹೇಳಿದನು. ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು.

ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ. 10 ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ[c] ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.

11 ಅದಕ್ಕೆ ಅವನು, “ನನ್ನನ್ನು ಗುಣಪಡಿಸಿದವನೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದನು” ಎಂಬುದಾಗಿ ಉತ್ತರಿಸಿದನು.

12 ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.

13 ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟುಹೋದನು.

14 ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.

15 ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.

16 ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು. 17 ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.

18 ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.

ಯೇಸುವಿಗೆ ದೇವರ ಅಧಿಕಾರವಿದೆ

19 ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ. 20 ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ. 21 ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.

22 “ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ. 23 ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.

24 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ. 25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು. 26 ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು, 27 ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.

28 “ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ. 29 ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.

30 “ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.

ಯೆಹೂದ್ಯ ನಾಯಕರಿಗೆ ಯೇಸು ಹೇಳಿದ ಅಧಿಕ ವಿಷಯಗಳು

31 “ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. 32 ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.

33 “ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು. 34 ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. 35 ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.

36 “ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ. 37 ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ. 38 ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ. 39 ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ! 40 ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.

41 “ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ. 42 ಆದರೆ ನಾನು ನಿಮ್ಮನ್ನು ಬಲ್ಲೆನು. ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನನಗೆ ಗೊತ್ತಿದೆ. 43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ. 44 ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ? 45 ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು. 46 ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ. 47 ಆದರೆ ಮೋಶೆ ಬರೆದದ್ದನ್ನು ನೀವು ನಂಬುವುದಿಲ್ಲ. ಹೀಗಿರಲು ನಾನು ಹೇಳುವ ಸಂಗತಿಗಳನ್ನು ನೀವು ಹೇಗೆ ನಂಬಬಲ್ಲಿರಿ?”

ಜ್ಞಾನೋಕ್ತಿಗಳು 2

ಜ್ಞಾನದ ಮೌಲ್ಯ

ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ. ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು. ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೊ! ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು. ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ.

ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ. ಆತನು ನೀತಿವಂತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು; ನಿರ್ದೋಷಿಗಳಿಗೆ ಗುರಾಣಿಯಂತಿರುವನು. ಆತನು ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರ ಜನರಿಗೆ ಕಾವಲಾಗಿರುತ್ತಾನೆ.

ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ. 10 ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು.

11 ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು; 12 ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ. 13 ಅವರಾದರೋ ನೀತಿಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ. 14 ಅವರಿಗೆ ಕೆಟ್ಟದ್ದನ್ನು ಮಾಡುವುದರಲ್ಲೇ ಸಂತೋಷ; ಕೆಡುಕರ ಕೆಟ್ಟಕಾರ್ಯಗಳಲ್ಲೇ ಆನಂದ. 15 ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ.

16 ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು. 17 ಯೌವನಪ್ರಾಯದಲ್ಲಿ ಮದುವೆಮಾಡಿಕೊಂಡ ಅವಳು ತನ್ನ ಗಂಡನನ್ನು ಬಿಟ್ಟುಬಿಟ್ಟಿದ್ದಾಳೆ; ಮದುವೆಯಲ್ಲಿ ದೇವರ ಮುಂದೆ ಮಾಡಿದ ವಾಗ್ದಾನಗಳನ್ನು ಮೀರಿದ್ದಾಳೆ. 18 ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀವು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು. 19 ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ.

20 ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು. 21 ಯಥಾರ್ಥವಂತರು ಸ್ವದೇಶದಲ್ಲಿ ವಾಸಿಸುವರು. ನಿರ್ದೋಷಿಗಳು ಸ್ವದೇಶದಲ್ಲಿ ನೆಲೆಸುವರು. 22 ದುಷ್ಟರಾದರೋ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು.

ಗಲಾತ್ಯದವರಿಗೆ 1

ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ. ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ.

ನಮ್ಮ ತಂದೆಯಾದ ದೇವರೂ ಪ್ರಭುವಾದ ಯೇಸು ಕ್ರಿಸ್ತನೂ ನಿಮಗೆ ಕೃಪೆ ತೋರಲಿ ಮತ್ತು ಶಾಂತಿಕೊಡಲಿ ಎಂದು ನಾವು ಪ್ರಾರ್ಥಿಸುತ್ತೇವೆ. ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು. ಎಂದೆಂದಿಗೂ ದೇವರಿಗೆ ಮಹಿಮೆಯಾಗಲಿ. ಆಮೆನ್.

ಸತ್ಯಸುವಾರ್ತೆ ಒಂದೇ ಒಂದು

ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ. ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ. ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.

10 ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.

ಪೌಲನ ಅಧಿಕಾರ ದೇವರಿಂದ ಬಂದದ್ದು

11 ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ. 12 ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.

13 ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು. 14 ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.

15 ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು. 16 ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ. 17 ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.

18 ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು. 19 ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ. 20 ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ. 21 ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

22 ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ. 23 “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು. 24 ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International