Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
ಯಾಜಕಕಾಂಡ 22

22 ದೇವರಾದ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು! ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!

“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ, ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ. ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.[a] ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.

“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!

“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ. 10 ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. 11 ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು. 12 ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು. 13 ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.

14 “ಒಬ್ಬನು ತಿಳಿಯದೆ ನೈವೇದ್ಯ ಪದಾರ್ಥವನ್ನು ತಿಂದರೆ ಅವನು ಆ ಪದಾರ್ಥವನ್ನೂ ಪದಾರ್ಥದ ಬೆಲೆಯ ಐದನೆಯ ಒಂದಂಶವನ್ನೂ ಅದಕ್ಕೆ ಸೇರಿಸಿ ಯಾಜಕನಿಗೆ ಕೊಡಬೇಕು.

15 “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು. 16 ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”

17 ಯೆಹೋವನು ಮೋಶೆಗೆ ಹೀಗೆಂದನು: 18 “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ, 19-20 ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.

21 “ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು. 22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.

23 “ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.

24 “ಗಾಯಗೊಂಡ, ಜಜ್ಜಿದ ಅಥವಾ ಒಡೆದ ಬೀಜವುಳ್ಳ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತ ನಾಡಿನಲ್ಲಿ ಮಾಡಬಾರದು.

25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”

26 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 27 “ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ. 28 ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.

29 “ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು. 30 ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು!

31 “ನನ್ನ ಆಜ್ಞೆಗಳನ್ನು ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು! 32 ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. 33 ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”

ಕೀರ್ತನೆಗಳು 28-29

ರಚನೆಗಾರ: ದಾವೀದ.

28 ಯೆಹೋವನೇ, ನೀನೇ ನನ್ನ ಬಂಡೆ.
    ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ.
    ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ.
ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ
    ಜನರು ನನ್ನನ್ನು ಪರಿಗಣಿಸುವರು.
ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು.
    ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ.
    ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.[a]
ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು.
    ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು.
    ಅವರಿಗೆ ತಕ್ಕ ದಂಡನೆಯನ್ನು ಕೊಡು.
ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ
    ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಆತನು ಅವರನ್ನು ದಂಡಿಸಿ
    ನಿತ್ಯನಾಶಮಾಡುವನು.

ಯೆಹೋವನಿಗೆ ಸ್ತೋತ್ರವಾಗಲಿ!
    ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ.
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ.
    ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
    ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
ಯೆಹೋವನು ತನ್ನ ಜನರಿಗೆ ಬಲವೂ
    ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಯೆಹೋವನೇ, ನಿನ್ನ ಜನರನ್ನು ರಕ್ಷಿಸು,
    ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು!
    ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.

ರಚನೆಗಾರ: ದಾವೀದ.

29 ದೇವಪುತ್ರರೇ,[b] ಯೆಹೋವನನ್ನು ಸ್ತುತಿಸಿರಿ!
    ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ.
    ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.[c]
ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು.
    ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
ಯೆಹೋವನ ಸ್ವರವು
    ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ.
    ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ;
    ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು.
    ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ;
    ಕಾಡಿನ ಮರಗಳು ಬರಿದಾಗುತ್ತವೆ;
    ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.

10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು.
    ಯೆಹೋವನು ಸದಾಕಾಲ ರಾಜನಾಗಿರುವನು.
11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ.
    ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.

ಪ್ರಸಂಗಿ 5

ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ

ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ. ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:

“ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ
    ಮೂಢನು ಅನೇಕ ಮಾತುಗಳನ್ನಾಡುವನು.”

ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ. ಹರಕೆ ಮಾಡಿ ಸಲ್ಲಿಸದಿರುವುದಕ್ಕಿಂತ ಹರಕೆ ಮಾಡದಿರುವುದೇ ಉತ್ತಮ. ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು. ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲಿ ಜಂಬದ ಮಾತುಗಳಾಗಲಿ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.

ಯಾವನೂ ಸರ್ವಾಧಿಪತಿಯಲ್ಲ

ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು. ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.

ಐಶ್ವರ್ಯವು ಸಂತೋಷವನ್ನು ಖರೀದಿ ಮಾಡಲಾರದು

10 ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.

11 ಐಶ್ವರ್ಯ ಹೆಚ್ಚಿದಂತೆಲ್ಲಾ “ಅನುಭವಿಸುವವರ” ಸಂಖ್ಯೆಯೂ ಹೆಚ್ಚುವುದು. ಐಶ್ವರ್ಯವಂತನು ಅದನ್ನು ಕಣ್ಣಿಂದ ನೋಡಬಹುದಷ್ಟೇ ಹೊರತು ಬೇರೆ ಯಾವ ಲಾಭವೂ ಅವನಿಗಿಲ್ಲ.

12 ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೋ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.

13 ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ. 14 ಬಳಿಕ ಅವನು ಯಾವುದೋ ಕೇಡಿಗೆ ಗುರಿಯಾಗಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು; ಕೊನೆಯಲ್ಲಿ ತನ್ನ ಮಗನಿಗೆ ಕೊಡಲು ಅವನಲ್ಲಿ ಏನೂ ಉಳಿದಿರುವುದಿಲ್ಲ.

15 ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು. 16 ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು? 17 ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ.

ನಿನ್ನ ಜೀವನದ ಕೆಲಸದಲ್ಲಿ ಆನಂದಿಸು

18 ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.

19 ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ. 20 ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪುಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.

2 ತಿಮೊಥೆಯನಿಗೆ 1

ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.

ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ.

ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.

ಕೃತಜ್ಞತಾಸ್ತುತಿ ಮತ್ತು ಪ್ರೋತ್ಸಾಹ

ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ. ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು. ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ. ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ. ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.

ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.

ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು. 10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.

11 ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು. 12 ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.

13 ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ. 14 ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ.

15 ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ. 16 ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ. 17 ಅವನು ರೋಮಿಗೆ ಬಂದಾಗ, ಬಹಳ ಹುಡುಕಾಡಿ ನನ್ನನ್ನು ಸಂಧಿಸಿದನು. 18 ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International