M’Cheyne Bible Reading Plan
ಗೊಲ್ಯಾತನು ಇಸ್ರೇಲರ ಮೇಲೆ ಸ್ಪರ್ಧಿಸಿದ್ದು
17 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.
2 ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು. 3 ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಆ ಎರಡು ಗುಡ್ಡಗಳ ಮಧ್ಯೆ ಇದ್ದಿತು.
4 ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು. 5 ಅವನು ತಾಮ್ರದ ಶಿರಸ್ತ್ರಾಣವನ್ನು ಧರಿಸಿದ್ದನು. ಮೀನಿನ ಮೇಲಿರುವ ಚಿಪ್ಪುಗಳಂತಿದ್ದ ತಾಮ್ರದ ಕವಚವನ್ನು ಅವನು ತೊಟ್ಟಿದ್ದನು. ಅದು ನೂರಿಪ್ಪತ್ತೈದು ಪೌಂಡ್ಗಳಷ್ಟು ಭಾರವಾಗಿತ್ತು. 6 ಗೊಲ್ಯಾತನು ಕಾಲುಗಳಿಗೂ ತಾಮ್ರದ ಕವಚವನ್ನು ತೊಟ್ಟಿದ್ದನು. ಅವನು ಹೆಗಲಿನಲ್ಲಿ ತಾಮ್ರದ ಈಟಿಯನ್ನು ಕಟ್ಟಿಕೊಂಡಿದ್ದನು. 7 ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯ ಗಾತ್ರದಷ್ಟಿತ್ತು. ಆ ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.
8 ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ. 9 ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು.
10 ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.
11 ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು.
ದಾವೀದನು ಯುದ್ಧರಂಗದ ಮುಂಭಾಗಕ್ಕೆ ಬರುವನು
12 ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು. 13 ಇಷಯನ ಮೂವರು ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದರು. ಎಲೀಯಾಬನು ಮೊದಲನೆಯ ಮಗ. ಅಬೀನಾದಾಬನು ಎರಡನೆಯ ಮಗ. ಶಮ್ಮನು ಮೂರನೆಯ ಮಗ. 14 ದಾವೀದನು ಎಲ್ಲರಿಗಿಂತ ಕಿರಿಯ ಮಗ. ಅವನಿಗಿಂತ ಹಿರಿಯರಾದ ಮೂವರು ಮಕ್ಕಳು ಸೌಲನ ಸೈನ್ಯದಲ್ಲಿದ್ದರು. 15 ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.
16 ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಗೊಲ್ಯಾತನು ಹೊರಬಂದು ಇಸ್ರೇಲ್ ಸೈನ್ಯಕ್ಕೆ ಎದುರಾಗಿ ನಿಲ್ಲುತ್ತಿದ್ದನು. ಈ ರೀತಿ ಗೊಲ್ಯಾತನು ಇಸ್ರೇಲರನ್ನು ನಲವತ್ತು ದಿನಗಳ ಕಾಲ ಹೀಯಾಳಿಸಿದನು.
17 ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಬೇಯಿಸಿದ ಮೂವತ್ತು ಸೇರು ಕಾಳುಗಳನ್ನು ಮತ್ತು ಹತ್ತು ರೊಟ್ಟಿಗಳನ್ನು ಸೈನ್ಯದಲ್ಲಿರುವ ನಿನ್ನ ಸಹೋದರರಿಗಾಗಿ ತೆಗೆದುಕೊಂಡು ಹೋಗು. 18 ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ. 19 ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು.
20 ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು. 21 ಇಸ್ರೇಲರು ಮತ್ತು ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾಗಲು ಸಾಲುಸಾಲಾಗಿ ನಿಲ್ಲುತ್ತಿದ್ದರು.
22 ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು. 23 ಬಳಿಕ ತನ್ನ ಸಹೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು. ಆ ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಆ ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು.
24 ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು. 25 ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.
26 ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
27 ಗೊಲ್ಯಾತನನ್ನು ಕೊಲ್ಲುವದರಿಂದ ಸಿಗುವ ಬಹುಮಾನವನ್ನು ಇಸ್ರೇಲರು ದಾವೀದನಿಗೆ ತಿಳಿಸಿದರು. 28 ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
29 ಅದಕ್ಕೆ ದಾವೀದನು, “ನಾನೇನು ಮಾಡಿದೆ? ನಾನು ಯಾವ ತಪ್ಪನ್ನೂ ಮಾಡಲಿಲ್ಲ. ನಾನು ಕೇವಲ ಮಾತನಾಡುತ್ತಿದ್ದೆ” ಎಂದು ಹೇಳಿದನು. 30 ದಾವೀದನು ಬೇರೆ ಜನರ ಕಡೆಗೆ ತಿರುಗಿ, ಅವರಿಗೂ ಅದೇ ಪ್ರಶ್ನೆಗಳನ್ನು ಕೇಳಿದನು. ಅವರು ಸಹ ಅದೇ ಉತ್ತರಗಳನ್ನು ದಾವೀದನಿಗೆ ಕೊಟ್ಟರು.
31 ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು. 32 ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.
33 ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.
34 ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲಿ ಕರಡಿಯಾಗಲಿ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ, 35 ಆದನ್ನು ನಾನು ಅಟ್ಟಿಸಿಕೊಂಡು ಹೋಗುತ್ತಿದ್ದೆ. ನಾನು ಆ ಕ್ರೂರ ಮೃಗದ ಮೇಲೆ ಆಕ್ರಮಣ ಮಾಡಿ, ಅದರ ಬಾಯಿಂದ ಕುರಿಯನ್ನು ಬಿಡಿಸುತ್ತಿದ್ದೆನು. ಅದು ನನ್ನ ಮೇಲೆ ಆಕ್ರಮಣ ಮಾಡಿದರೆ, ನಾನು ಅದರ ಗಡ್ಡ ಹಿಡಿದು ಹೋರಾಡಿ ಅದನ್ನು ಕೊಲ್ಲುತ್ತಿದ್ದೆನು. 36 ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು. 37 ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು.
ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.
38 ಸೌಲನು ತನ್ನ ಯುದ್ಧವಸ್ತ್ರಗಳನ್ನು ದಾವೀದನಿಗೆ ತೊಡಿಸಿದನು. ಸೌಲನು ತಾಮ್ರದ ಶಿರಸ್ತ್ರಾಣವನ್ನು ದಾವೀದನ ತಲೆಯ ಮೇಲಿಟ್ಟನು ಮತ್ತು ಲೋಹದ ಕವಚವನ್ನು ದಾವೀದನ ಮೈಗೆ ತೊಡಿಸಿದನು. 39 ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ.
ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದು ಹಾಕಿದನು. 40 ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.
ದಾವೀದನು ಗೊಲ್ಯಾತನನ್ನು ಕೊಂದದ್ದು
41 ಫಿಲಿಷ್ಟಿಯನು (ಗೊಲ್ಯಾತನು) ದಾವೀದನ ಬಳಿಗೆ ನಿಧಾನವಾಗಿ ನಡೆಯುತ್ತಾ ಬಂದನು. ಗೊಲ್ಯಾತನ ಮುಂದೆ ಅವನ ಸಹಾಯಕನು ಗುರಾಣಿಯನ್ನು ಹೊತ್ತುಕೊಂಡು ನಡೆಯುತ್ತಾ ಹೋದನು. 42 ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು. 43 ಗೊಲ್ಯಾತನು ದಾವೀದನಿಗೆ, “ಈ ಕೋಲು ಏನಕ್ಕೆ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು. 44 ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.
45 ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ. 46 ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು! 47 ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.
48 ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು.
49 ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.
50 ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ. 51 ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು.
ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು. 52 ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್ಗಳವರೆಗೆ ಬಿದ್ದಿದ್ದವು. 53 ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿಕೊಂಡರು.
54 ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು.
ಸೌಲನು ದಾವೀದನ ಬಗ್ಗೆ ಹೆದರಲಾರಂಭಿಸಿದನು
55 ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು.
ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.
56 ಅದಕ್ಕೆ ಅರಸನು, “ಆ ಯುವಕನ ತಂದೆ ಯಾರೆಂಬುದನ್ನು ಪತ್ತೆಹಚ್ಚು” ಎಂದು ಹೇಳಿದನು.
57 ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ನೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು.
58 ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು.
ದಾವೀದನು, “ನಾನು ನಿಮ್ಮ ಸೇವಕನಾದ ಬೆತ್ಲೆಹೇಮಿನ ಇಷಯನ ಮಗ” ಎಂದು ಉತ್ತರಿಸಿದನು.
15 ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು. 2 ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು. 3 ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು”(A) ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. 4 ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ. 5 ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ. 6 ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ. 7 ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ. 8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ 9 ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ:
“ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು:
ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”(B)
10 ಇದಲ್ಲದೆ ಪವಿತ್ರ ಗ್ರಂಥವು ಹೀಗೆನ್ನುತ್ತದೆ:
“ಯೆಹೂದ್ಯರಲ್ಲದ ನೀವು ದೇವರ ಸ್ವಂತ ಜನರೊಂದಿಗೆ ಸೇರಿ ಸಂತೋಷದಿಂದಿರಬೇಕು.”(C)
11 ಮತ್ತೊಂದು ಕಡೆ ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ:
“ಯೆಹೂದ್ಯರಲ್ಲದ ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ.
ಎಲ್ಲಾ ಜನರು ಪ್ರಭುವಿಗೆ ಸ್ತೋತ್ರ ಮಾಡಲಿ.”(D)
12 ಯೆಶಾಯನು ಹೀಗೆ ಹೇಳಿದ್ದಾನೆ:
“ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು.
ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು.
ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.”(E)
13 ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.
ತನ್ನ ಸೇವೆಯ ಬಗ್ಗೆ ಪೌಲನ ವಿವರಣೆ
14 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ. 15 ನೀವು ಜ್ಞಾಪಕದಲ್ಲಿ ಇಟ್ಟುಕೊಳ್ಳಬೇಕೆಂದು ನಾನು ಅಪೇಕ್ಷಿಸಿದ ಕೆಲವು ಸಂಗತಿಗಳನ್ನು ನಾನು ನಿಮಗೆ ಧೈರ್ಯವಾಗಿ ಬರೆದಿರುವೆ. ಕ್ರಿಸ್ತ ಯೇಸುವಿನ ಸೇವಕ ಎಂಬ ವಿಶೇಷವಾದ ವರವನ್ನು ದೇವರು ನನಗೆ ಕೊಟ್ಟಿರುವುದರಿಂದ ನಾನು ಹೀಗೆ ಬರೆದಿದ್ದೇನೆ. 16 ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
17 ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಾನು ದೇವರಿಗೋಸ್ಕರ ಮಾಡುವ ಕಾರ್ಯಗಳ ಬಗ್ಗೆ ಹೆಮ್ಮೆಪಡುತ್ತೇನೆ. 18 ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ. 19 ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ. 20 ಕ್ರಿಸ್ತನ ಬಗ್ಗೆ ಜನರು ಎಂದೂ ಕೇಳಿಲ್ಲದ ಸ್ಥಳಗಳಲ್ಲಿ ಸುವಾರ್ತೆಯನ್ನು ಬೋಧಿಸಲು ನಾನು ಯಾವಾಗಲೂ ಅಪೇಕ್ಷಿಸುತ್ತೇನೆ; ಏಕೆಂದರೆ ಮತ್ತೊಬ್ಬನು ಆಗಲೇ ಆರಂಭಿಸಿರುವ ಕೆಲಸದ ಮೇಲೆ ಕಟ್ಟಲು ನನಗೆ ಇಷ್ಟವಿಲ್ಲ. 21 ಆದರೆ ಇದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ:
“ಆತನ ಬಗ್ಗೆ ತಿಳಿಯದ ಜನರು ಆತನನ್ನು (ಕ್ರಿಸ್ತನನ್ನು) ನೋಡುವರು.
ಆತನ ಬಗ್ಗೆ ಕೇಳಿಲ್ಲದ ಜನರು ಆತನನ್ನು ಅರ್ಥಮಾಡಿಕೊಳ್ಳುವರು.”(F)
ರೋಮಿಗೆ ಹೋಗಲು ಪೌಲನ ಯೋಜನೆ
22 ಈ ಕಾರಣದಿಂದಲೇ, ನಿಮ್ಮ ಬಳಿಗೆ ಬಾರದಂತೆ ನನಗೆ ಅನೇಕ ಸಲ ಅಡಚಣೆ ಆಯಿತು.
23 ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮಾಡಿ ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಾನು ನಿಮ್ಮ ಬಳಿಗೆ ಬರಬೇಕೆಂದಿದ್ದೆ. 24 ಆದ್ದರಿಂದ ನಾನು ಸ್ಪೇನಿಗೆ ಹೋಗುವಾಗ ನಿಮ್ಮನ್ನು ಸಂದರ್ಶಿಸುತ್ತೇನೆ. ಹೌದು, ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ ನಿಮ್ಮನ್ನು ಸಂದರ್ಶಿಸಿ, ಸ್ವಲ್ಪಕಾಲ ನಿಮ್ಮೊಂದಿಗೆ ಸಂತೋಷವಾಗಿ ತಂಗಿರುತ್ತೇನೆಂಬ ನಿರೀಕ್ಷೆ ನನಗಿದೆ. ಬಳಿಕ ನೀವು ನನ್ನ ಪ್ರಯಾಣಕ್ಕೆ ಸಹಾಯ ಮಾಡಬಹದು.
25 ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ. 26 ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ. 27 ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ. 28 ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು.
ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು. 29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂದು ಬಲ್ಲೆನು.
30 ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ. 31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ. 32 ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ. 33 ಶಾಂತಿಯನ್ನು ಕೊಡುವ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
ಯೆಹೋವನು ಜೆರುಸಲೇಮನ್ನು ನಾಶಮಾಡಿದನು
2 ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ[a] ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ.
ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ.
ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.
2 ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು.
ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು.
ತನ್ನ ಕೋಪದಲ್ಲಿ ಆತನು ಯೆಹೂದದ
ಮಗಳ[b] ಕೋಟೆಗಳನ್ನು ನಾಶಪಡಿಸಿದನು.
ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು.
ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.
3 ನನ್ನ ಕೋಪದ ಭರದಲ್ಲಿ ಯೆಹೋವನು
ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು.
ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು.
ಶತ್ರು ಬಂದಾಗ ಆತನು ಹೀಗೆ ಮಾಡಿದನು.
ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು.
ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.
4 ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು.
ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು:
ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು.
ಆತನು ಶತ್ರುವಿನಂತೆ ಅವರನ್ನು ಕೊಂದನು.
ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು.
ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.
5 ಆತನು ಒಬ್ಬ ಶತ್ರುವಿನಂತಾಗಿದ್ದಾನೆ.
ಆತನು ಇಸ್ರೇಲನ್ನು ನಾಶಮಾಡಿದನು.
ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು.
ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು.
ಯೆಹೂದ ಜನಾಂಗದಲ್ಲಿ
ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.
6 ಯೆಹೋವನು ತನ್ನ ಸ್ವಂತ ಗುಡಾರವನ್ನು
ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ.
ಜನರು ಆತನನ್ನು ಆರಾಧಿಸಲು
ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ.
ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು
ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ.
ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ.
ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.
7 ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ.
ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ.
ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು
ಶತ್ರುಗಳ ವಶಮಾಡಿದ್ದಾನೆ.
ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು.
ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.
8 ಯೆಹೋವನು ಚೀಯೋನ್ ಕುಮಾರಿಯ
ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ.
ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ.
ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ.
ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ.
ಅವೆರಡೂ ಕುಸಿದುಹೋಗಿವೆ.
9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ.
ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ.
ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ.
ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ.
ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.
10 ಚೀಯೋನಿನ ಹಿರಿಯರು ನೆಲದ ಮೇಲೆ
ಮೌನವಾಗಿ ಕುಳಿತುಕೊಂಡಿದ್ದಾರೆ.
ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು
ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ.
ಜೆರುಸಲೇಮಿನ ತರುಣಿಯರು
ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.
11 ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ.
ನನ್ನ ಕರುಳು ತಳಮಳಗೊಂಡಿದೆ.
ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ.
ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ.
ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ.
ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.
12 ಆ ಮಕ್ಕಳು ತಮ್ಮ ತಾಯಂದಿರನ್ನು,
“ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ.
ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ.
ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣಬಿಡುತ್ತಿದ್ದಾರೆ.
13 ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ?
ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ?
ನೀನು ಎಂಥವಳೆಂದು ಹೇಳಲಿ?
ನನ್ನ ಚೀಯೋನೇ,
ನಾನು ನಿನ್ನನ್ನು ಹೇಗೆ ಸಂತೈಸಲಿ.
ನಿನ್ನ ವಿನಾಶವು ಸಾಗರದಷ್ಟು ಅಪಾರ.
ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.
14 ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು.
ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ.
ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ.
ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ.
ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು.
ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.
15 ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು
ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ.
ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ
ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ.
“ಜನರಿಂದ ‘ಪರಿಪೂರ್ಣ ಸುಂದರ ನಗರ’
‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು
ಇದೇ ನಗರವೇ?” ಎಂದು ಅವರು ಕೇಳುತ್ತಾರೆ.
16 ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ
ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ.
“ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು!
ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು.
ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು”
ಎಂದು ಅವರು ಅನ್ನುತ್ತಾರೆ.
17 ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು.
ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ.
ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ.
ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ.
ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ.
ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.
18 ಜೆರುಸಲೇಮ್ ನಗರದ ಗೋಡೆಯೇ,
ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು.
ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ.
ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.
19 ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ.
ನಿಮ್ಮ ಹೃದಯವು ನೀರಿನಂತೆ ಹರಿಯಲಿ.
ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ.
ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ.
ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ.
ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ.
ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.
20 ನನ್ನ ಕಡೆಗೆ ನೋಡು.
ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು.
ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ.
ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ?
ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ?
ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?
21 ಬೀದಿಗಳಲ್ಲಿ ತರುಣರು ಮತ್ತು ವೃದ್ಧರು
ನೆಲದ ಮೇಲೆ ಬಿದ್ದಿದ್ದಾರೆ.
ನನ್ನ ಯುವತಿಯರು ಮತ್ತು ಯುವಕರು
ಖಡ್ಗದಿಂದ ಹತರಾಗಿದ್ದಾರೆ.
ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ;
ಕರುಣೆ ತೋರದೆ ಅವರನ್ನು ಸಂಹರಿಸಿದೆ.
22 ಭೀತಿಯು ಸುತ್ತಮುತ್ತಲಿಂದ
ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ.
ಯೆಹೋವನ ಕೋಪದ ದಿನದಂದು
ಯಾರೂ ತಪ್ಪಿಸಿಕೊಳ್ಳಲಿಲ್ಲ.
ಯಾರೂ ಉಳಿಯಲಿಲ್ಲ.
ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.
33 ನೀತಿವಂತರೇ, ಯೆಹೋವನಲ್ಲಿ ಉಲ್ಲಾಸಪಡಿರಿ.
ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ.
2 ಲೈರ್[a] ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ!
ಹತ್ತುತಂತಿಗಳ ಹಾರ್ಪ್ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ.
3 ಆತನಿಗೆ ಹೊಸ ಹಾಡನ್ನು[b] ಹಾಡಿರಿ!
ಹಾರ್ಪ್ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ.
4 ಯೆಹೋವನ ವಾಕ್ಯವು ಸತ್ಯವಾದದ್ದು!
ಆತನ ಕಾರ್ಯಗಳೆಲ್ಲಾ ಭರವಸೆಗೆ ಯೋಗ್ಯವಾಗಿವೆ.
5 ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು.
ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ.
6 ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು!
ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.
7 ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು;
ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.[c]
8 ಭೂಲೋಕದವರೆಲ್ಲರೂ ಯೆಹೋವನಲ್ಲಿ ಭಯಭಕ್ತಿಯಿಂದಿರಲಿ.
ಭೂನಿವಾಸಿಗಳೆಲ್ಲರೂ ಆತನಿಗೆ ಭಯಪಡಲಿ.
9 ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು;
ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.
10 ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು;
ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.
11 ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ.
ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.
12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು.
ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.
13 ಯೆಹೋವನು ಪರಲೋಕದಿಂದ
ಮನುಷ್ಯರನ್ನು ದೃಷ್ಟಿಸಿ ನೋಡುವನು.
14 ಆತನು ತನ್ನ ಮಹಾಸಿಂಹಾಸನದಿಂದ
ಭೂನಿವಾಸಿಗಳೆಲ್ಲರನ್ನು ನೋಡುವನು.
15 ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ.
ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.
16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ.
ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.
17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ.
ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.
18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು.
ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.
19 ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ.
ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.
20 ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ.
ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ.
21 ದೇವರು ನನ್ನನ್ನು ಸಂತೋಷಗೊಳಿಸುವನು.
ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸವಿಟ್ಟಿದ್ದೇನೆ.
22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
ನಿನ್ನ ಶಾಶ್ವತವಾದ ಪ್ರೀತಿಯು ನಮ್ಮ ಮೇಲಿರಲಿ.
Kannada Holy Bible: Easy-to-Read Version. All rights reserved. © 1997 Bible League International