Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
2 ಸಮುವೇಲನು 15

ಅಬ್ಷಾಲೋಮನಿಗೆ ಅನೇಕರು ಸ್ನೇಹಿತರಾದದ್ದು

15 ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು. ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ[a] ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು. ಆಗ ಅಬ್ಷಾಲೋಮನು ಆ ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು.

ಅಲ್ಲದೆ ಅಬ್ಷಾಲೋಮನು, “ಯಾರಾದರೂ ನನ್ನನ್ನು ಈ ದೇಶದಲ್ಲಿ ನ್ಯಾಯಾಧೀಶನನ್ನಾಗಿ ಮಾಡಿದ್ದರೆ ಒಳ್ಳೆಯದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು.

ಯಾವನಾದರೂ ಅಬ್ಷಾಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗನಮಸ್ಕಾರಮಾಡಲು ಬಾಗಿದಾಗ, ಅಬ್ಷಾಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು. ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.

ದಾವೀದನ ರಾಜ್ಯಾಧಿಕಾರವನ್ನು ಪಡೆದುಕೊಳ್ಳಲು ಅಬ್ಷಾಲೋಮನ ಆಲೋಚನೆ

ನಾಲ್ಕು ವರ್ಷಗಳ ಬಳಿಕ[b] ಅಬ್ಷಾಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಕೊಡು. ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.

“ಸಮಾಧಾನದಿಂದ ಹೋಗು” ಎಂದು ರಾಜನಾದ ದಾವೀದನು ಹೇಳಿದನು.

ಅಬ್ಷಾಲೋಮನು ಹೆಬ್ರೋನಿಗೆ ಹೋದನು. 10 ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.

11 ಅಬ್ಷಾಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಆ ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ. 12 ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.

ಅಬ್ಷಾಲೋಮನ ಯೋಜನೆಗಳ ಬಗ್ಗೆ ದಾವೀದನಿಗೆ ತಿಳಿದದ್ದು

13 ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.

14 ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.

15 ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು.

ದಾವೀದನು ಮತ್ತು ಅವನ ಜನರು ತಪ್ಪಿಸಿಕೊಂಡದ್ದು

16 ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು, 17 ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು. 18 ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತೀಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.

19 ರಾಜನು ಗತ್‌ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ. 20 ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.

21 ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.

22 ದಾವೀದನು ಇತ್ತೈಯನಿಗೆ, “ಬಾ, ಕಿದ್ರೋನ್ ಹಳ್ಳವನ್ನು ದಾಟೋಣ” ಎಂದನು.

ಗತ್‌ನ ಇತ್ತೈಯನೂ ಅವನ ಜನರೂ ಅವರ ಮಕ್ಕಳೆಲ್ಲರೂ ಕಿದ್ರೋನ್ ಹಳ್ಳವನ್ನು ದಾಟಿಹೋದರು. 23 ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು. 24 ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.

25 ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ. 26 ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.

27 ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು. 28 ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು.

29 ಆದ್ದರಿಂದ ಚಾದೋಕನು ಮತ್ತು ಎಬ್ಯಾತಾರನು ದೇವರ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ಹಿಂದಿರುಗಿ, ಅಲ್ಲಿಯೇ ಉಳಿದುಕೊಂಡರು.

ಅಹೀತೋಫೆಲನ ವಿರುದ್ಧವಾಗಿ ದಾವೀದನ ಪ್ರಾರ್ಥನೆ

30 ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.

31 ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು. 32 ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.

33 ದಾವೀದನು ಹೂಷೈಗೆ, “ನೀನು ನನ್ನೊಂದಿಗೆ ಬರುವುದಾದರೆ, ನೀನು ನನಗೆ ಭಾರವಾಗುವಿಯಷ್ಟೇ. 34 ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು. 35 ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರು ನಿನ್ನೊಂದಿಗೆ ಇರುತ್ತಾರೆ. ರಾಜನ ಮನೆಯಲ್ಲಿ ಕೇಳಿಸಿಕೊಂಡಿದ್ದನ್ನೆಲ್ಲ ಅವರಿಗೆ ನೀನು ತಿಳಿಸಲೇಬೇಕು. 36 ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.

37 ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಷಾಲೋಮನು ಜೆರುಸಲೇಮಿಗೆ ಬಂದನು.

2 ಕೊರಿಂಥದವರಿಗೆ 8

ಕ್ರೈಸ್ತರ ಕೊಡುವಿಕೆ

ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ. ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು. ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ. ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು. ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.

ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ. ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.

ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.

10 ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ. 11 ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ. 12 ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ. 13 ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ. 14 ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು. 15 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು,

“ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ,
ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.”(A)

ತೀತನು ಮತ್ತು ಅವನ ಸಂಗಡಿಗರು

16 ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ. 17 ನಾವು ಕೇಳಿಕೊಂಡ ಕಾರ್ಯಗಳನ್ನು ಮಾಡಲು ತೀತನು ಒಪ್ಪಿಕೊಂಡನು. ನಿಮ್ಮ ಬಳಿಗೆ ಬರಲು ಅವನು ಅತ್ಯಾಸಕ್ತನಾಗಿದ್ದನು. ಇದು ಅವನ ಸ್ವಂತ ಆಲೋಚನೆ. 18 ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ. 19 ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.

20 ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ. 21 ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.

22 ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತಷ್ಟು ಸಹಾಯ ಮಾಡಲು ಬಯಸುತ್ತಾನೆ.

23 ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ. 24 ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಈ ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು.

ಯೆಹೆಜ್ಕೇಲ 22

ಜೆರುಸಲೇಮಿನ ವಿರುದ್ಧವಾಗಿ ಯೆಹೆಜ್ಕೇಲನ ಮಾತುಗಳು

22 ಯೆಹೋವನ ಸಂದೇಶವು ನನಗೆ ಬಂತು. ಆತನು ಹೇಳಿದ್ದೇನೆಂದರೆ, “ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು. ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.

“‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು. ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ.

“‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ. ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು. ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ. ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ.

“‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ. 10 ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ. 11 ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೇ ಬಲವಂತದಿಂದ ಕೆಡಿಸಿರುತ್ತಾನೆ. 12 ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

13 ದೇವರು ಹೀಗೆ ಹೇಳಿದನು: “‘ನೋಡಿರಿ, ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು. 14 ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು. 15 ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು. 16 ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’”

ಇಸ್ರೇಲ್ ಉಪಯೋಗವಿಲ್ಲದ ಹೊಲಸು

17 ಯೆಹೋವನ ವಾಕ್ಯವು ನನಗೆ ಬಂತು. ಆತನು ಹೀಗೆಂದನು: 18 “ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ. 19 ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ. ‘ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟುಗೂಡಿಸುತ್ತೇನೆ. 20 ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ. 21 ನಾನು ನಿಮ್ಮನ್ನು ಆ ಬೆಂಕಿಯಲ್ಲಿ ಹಾಕುವೆನು. ನನ್ನ ರೌದ್ರವೆಂಬ ಬೆಂಕಿಯನ್ನು ಊದಿ ಶಾಖ ಹೆಚ್ಚಿಸುವೆನು. ಆಗ ನೀವು ಕರಗಲು ಪ್ರಾರಂಭಿಸುವಿರಿ. 22 ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”

ಜೆರುಸಲೇಮ್ ವಿರುದ್ಧ ಯೆಹೆಜ್ಕೇಲನ ಮಾತುಗಳು

23 ಯೆಹೋವನ ವಾಕ್ಯವು ನನಗೆ ಬಂದಿತು. ಆತನು, 24 “ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೇ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ. 25 ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.

26 “ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.

27 “ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.

28 “ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.

29 “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.

30 “ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ. 31 ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಕೀರ್ತನೆಗಳು 69

ರಚನೆಗಾರ: ದಾವೀದ.

69 ದೇವರೇ, ನನ್ನನ್ನು ರಕ್ಷಿಸು!
    ನನ್ನ ಕತ್ತಿನವರೆಗೂ ನೀರು ಏರಿಬಂದಿದೆ.
ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ;
    ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ.
ನಾನು ಆಳವಾದ ನೀರಿನಲ್ಲಿದ್ದೇನೆ.
    ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ.
ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ.
    ನನ್ನ ಗಂಟಲು ನೋಯುತ್ತಿದೆ.
ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಾ
    ನನ್ನ ಕಣ್ಣುಗಳು ನೋಯುತ್ತಿವೆ.
ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ.
    ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ;
    ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ.
ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು.
    ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ
    ನನ್ನಿಂದ ದಂಡ ವಸೂಲಿ ಮಾಡಿದರು.
ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ.
    ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು.
ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ.
    ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.
ನಾಚಿಕೆಯು ನನ್ನ ಮುಖವನ್ನು ಕವಿದಿದೆ.
    ನಿನಗೋಸ್ಕರವಾಗಿ ಈ ನಾಚಿಕೆಯನ್ನು ಹೊತ್ತುಕೊಂಡಿದ್ದೇನೆ.
ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ.
    ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ.
ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ.
    ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.
10 ನಾನು ಅಳುತ್ತಾ ಉಪವಾಸಮಾಡುವೆನು.
    ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು.
11 ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು
    ಗಾದೆಯ ಮಾತಾಯಿತು.
12 ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು.
    ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು.
13 ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ;
    ನಿನ್ನ ಕೃಪೆಗೆ ತಕ್ಕಕಾಲ ಇದೇ.
ದೇವರೇ, ನಿನ್ನ ಮಹಾಪ್ರೀತಿಯಿಂದಲೂ
    ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.
14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು;
    ಮುಳುಗಿಹೋಗಲು ಬಿಡಬೇಡ.
ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು.
    ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.
15 ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ.
    ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ.
    ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.
16 ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು.
    ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು.
    ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.
17 ನಿನ್ನ ಸೇವಕನಿಗೆ ವಿಮುಖನಾಗಬೇಡ.
    ನಾನು ಆಪತ್ತಿನಲ್ಲಿದ್ದೇನೆ! ಬೇಗನೆ ನನಗೆ ಸಹಾಯಮಾಡು!
18 ಬಂದು ನನ್ನ ಪ್ರಾಣವನ್ನು ರಕ್ಷಿಸು.
    ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು.
19 ನನ್ನ ನಾಚಿಕೆ ನಿನಗೆ ಗೊತ್ತಿದೆ.
    ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ.
    ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ.
20 ಅವಮಾನವು ನನ್ನನ್ನು ಜಜ್ಜಿಹಾಕಿದೆ!
    ನಾನು ನಾಚಿಕೆಯಿಂದ ಸಾಯುವಂತಿದ್ದೇನೆ.
ಕರುಣಾಳುಗಳನ್ನು ನಿರೀಕ್ಷಿಸಿದೆ,
    ಆದರೆ ಯಾರೂ ದೊರೆಯಲಿಲ್ಲ.
ಸಂತೈಸುವವರನ್ನು ಹಾರೈಸಿದೆ,
    ಆದರೆ ಯಾರೂ ಸಿಗಲಿಲ್ಲ.
21 ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ.
    ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.
22 ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ.
23 ಅವರು ಕುರುಡರಾಗಲಿ; ಅವರ ಬೆನ್ನುಗಳು ಗೂನಾಗಲಿ.
24 ನಿನ್ನ ಕೋಪವನ್ನೆಲ್ಲಾ ಅವರು ಅನುಭವಿಸಲಿ.
25 ಅವರ ಮನೆಗಳು ಬರಿದಾಗಲಿ;
    ಅವುಗಳಲ್ಲಿ ಯಾರೂ ವಾಸಿಸದಂತಾಗಲಿ.
26 ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು.
    ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು.
27 ಅವರ ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸು.
    ನಿನ್ನ ರಕ್ಷಣೆಯಲ್ಲಿ ಅವರಿಗೆ ಪಾಲುಕೊಡಬೇಡ.
28 ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು.
    ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.
29 ನಾನು ನೋವಿನಿಂದ ದುಃಖಗೊಂಡಿರುವೆ.
    ದೇವರೇ, ನನ್ನನ್ನು ಮೇಲೆತ್ತಿ ರಕ್ಷಿಸು!
30 ನಾನು ದೇವರ ಹೆಸರನ್ನು ಹಾಡಿಕೊಂಡಾಡುವೆನು;
    ಕೃತಜ್ಞತಾಗೀತೆಯೊಂದಿಗೆ ಆತನನ್ನು ಸ್ತುತಿಸುವೆನು.
31 ಇದು ಯೆಹೋವನಿಗೆ ಹೋರಿಗಳ ಸರ್ವಾಂಗಹೋಮಕ್ಕಿಂತಲೂ
    ಬಹು ಪ್ರಿಯವಾದದ್ದು.
32 ದೇವರನ್ನು ಆರಾಧಿಸಲು ಬಂದ ಬಡವರೇ,
    ಇದನ್ನು ಕೇಳಿ ಹರ್ಷಿಸಿರಿ.
33 ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ.
    ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.
34 ಭೂಮ್ಯಾಕಾಶಗಳೇ, ಸಮುದ್ರವೇ,
    ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ!
35 ಯೆಹೋವನು ಚೀಯೋನನ್ನು ರಕ್ಷಿಸುವನು!
    ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು.
ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!
36     ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು.
    ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International