Print Page Options
Previous Prev Day Next DayNext

M’Cheyne Bible Reading Plan

The classic M'Cheyne plan--read the Old Testament, New Testament, and Psalms or Gospels every day.
Duration: 365 days
Kannada Holy Bible: Easy-to-Read Version (KERV)
Version
2 ಸಮುವೇಲನು 23

ದಾವೀದನ ಕೊನೆಯ ಮಾತುಗಳು

23 ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು:

“ದಾವೀದನು ಈ ಹಾಡನ್ನು ಹಾಡಿದನು.
    ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು.
ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು.
    ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.
ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು.
    ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.
ಇಸ್ರೇಲಿನ ದೇವರು ಮಾತನಾಡಿದನು.
    ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು.
‘ದೇವರಲ್ಲಿ ಭಯಭಕ್ತಿಯನ್ನಿಟ್ಟು
    ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು
ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ
    ಮೋಡಗಳೇ ಇಲ್ಲದ ಮುಂಜಾನೆಯಂತೆಯೂ
ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ
    ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’

“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು.
    ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು.
ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು.
ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು.
    ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.

“ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ.
    ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ;
    ಅವರು ಅವುಗಳನ್ನು ಎಸೆದುಬಿಡುವರು.
ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ,
    ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ.
ಆ ಜನರು ಮುಳ್ಳುಗಳಂತಿದ್ದಾರೆ.
    ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”

ದಾವೀದನ ಶೂರ ಸೈನಿಕರು

ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ:

ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.

ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು. 10 ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.

11 ಮೂರನೆಯವನು, ಹರಾರ್ಯನಾದ ಆಗೇಯನ ಮಗನಾದ ಶಮ್ಮ. ಫಿಲಿಷ್ಟಿಯರು ದೊಡ್ಡಗುಂಪಾಗಿ ಬಂದು ಅಲಸಂದಿಯ ಹೊಲದಲ್ಲಿ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿಹೋದರು. 12 ಆದರೆ ಶಮ್ಮನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಆ ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು.

13 ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ[a] ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.

14 ಆ ಸಮಯದಲ್ಲಿ ದಾವೀದನು ಕೋಟೆಯಲ್ಲಿದ್ದನು. ಫಿಲಿಷ್ಟಿಯ ಸೈನಿಕರಲ್ಲಿ ಕೆಲವರು ಬೆತ್ಲೆಹೇಮಿನಲ್ಲಿದ್ದರು. 15 ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು, “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು. 16 ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು, 17 “ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.

18 ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು. 19 ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.

20 ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು. 21 ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು. 22 ಯೆಹೋಯಾದಾವನ ಮಗನಾದ ಬೆನಾಯನು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದನು. ಬೆನಾಯನು ಆ ಮೂವರು ಪರಾಕ್ರಮಿಗಳಷ್ಟೇ ಪ್ರಸಿದ್ಧನಾಗಿದ್ದನು. 23 ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.

ಮೂವತ್ತು ಮಂದಿ ಪರಾಕ್ರಮಿಗಳು

24 ಯೋವಾಬನ ಸೋದರನಾದ ಅಸಾಹೇಲನು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು. ಮೂವತ್ತು ಮಂದಿ ಪರಾಕ್ರಮಿಗಳ ಗುಂಪಿನಲ್ಲಿದ್ದ ಇತರ ಜನರೆಂದರೆ:

ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ,

25 ಹೆರೋದಿನವರಾದ ಶಮ್ಮ,

ಎಲೀಕ,

26 ಪೆಲೆಟಿನವನಾದ ಹೆಲೆಚ್,

ತೆಕೋವದ ಇಕ್ಕೇಷನ ಮಗನಾದ ಈರಾ,

27 ಅಣತೋತಿನವನಾದ ಅಬೀಯೆಜೆರ್,

ಹುಷಾ ಊರಿನವನಾದ ಮೆಬುನ್ನೈ,

28 ಅಹೋಹಿನವನಾದ ಚಲ್ಮೋನ್,

ನೆಟೋಫದವನಾದ ಮಹರೈ,

29 ನೆಟೋಫದವನಾದ ಬಾಣನ ಮಗ ಹೇಲೆದ್,

ಬೆನ್ಯಾಮೀನ್ ಕುಟುಂಬದ ಗಿಬೆಯದ ರೀಬೈ ಎಂಬವನ ಮಗನಾದ ಇತ್ತೈ,

30 ಪಿರಾತೋನ್ಯನಾದ ಬೆನಾಯ,

ನಹಲೇಗಾಷಿನವನಾದ ಹಿದ್ದೈ,

31 ಅರಾಬಾದ ಅಬೀಅಲ್ಬೋನ್,

ಬರ್ಹುಮ್ಯನಾದ ಅಜ್ಮಾವೇತ್,

32 ಶಾಲ್ಬೋನ್ಯನಾದ ಎಲೆಯಖ್ಬಾ,

ಯಾಷೇನನ ಗಂಡುಮಕ್ಕಳು,

ಯೋನಾತಾನ, 33 ಹರಾರ್ಯನಾದ ಶಮ್ಮ,

ಅರಾರ್ಯನಾದ ಶಾರಾರನ ಮಗ ಅಹೀಯಾಮ್,

34 ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್,

ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,

35 ಕರ್ಮೆಲ್ಯನಾದ ಹೆಚ್ರೋ,

ಅರ್ಬೀಯನಾದ ಪಾರೈ,

36 ಚೋಬದ ನಾತಾನನ ಮಗನಾದ ಇಗಾಲ್,

ಗಾದ್ಯನಾದ ಬಾನೀ,

37 ಅಮ್ಮೋನಿಯನಾದ ಚೆಲೆಕ್,

ಚೆರೂಯಳ ಮಗನಾದ ಯೋವಾಬನ ಸಹಾಯಕನೂ

ಬೇರೋತ್ಯನೂ ಆದ ನಹರೈ,

38 ಇತ್ರೀಯರಾದ ಈರಾ

ಮತ್ತು ಗಾರೇಬ,

39 ಹಿತ್ತಿಯನಾದ ಊರೀಯ.

ಹೀಗೆ ಒಟ್ಟು ಮೂವತ್ತೇಳು ಜನರಿದ್ದರು.

ಗಲಾತ್ಯದವರಿಗೆ 3

ನಂಬಿಕೆಯ ಮೂಲಕ ದೇವರಾಶೀರ್ವಾದ

ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ. ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ. ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ! ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ? ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.

ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.”(A) ಆದ್ದರಿಂದ ನಂಬಿಕೆಯನ್ನು ಹೊಂದಿರುವ ಜನರೇ ಅಬ್ರಹಾಮನ “ನಿಜಮಕ್ಕಳು” ಎಂಬುದು ನಿಮಗೆ ತಿಳಿದಿರಬೇಕು. ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ”(B) ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ. ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.

10 ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”(C) 11 ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”[a]

12 ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ. 13 ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”(D) 14 ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.

ಧರ್ಮಶಾಸ್ತ್ರ ಮತ್ತು ವಾಗ್ದಾನ

15 ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ. 16 ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ”[b] ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು. 17 ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.

18 ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು.

19 ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು. 20 ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.

ಮೋಶೆಯ ಧರ್ಮಶಾಸ್ತ್ರದ ಉದ್ದೇಶ

21 ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು. 22 ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.

23 ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ. 24 ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು. 25 ಈಗ ನಂಬಿಕೆಯ ಮಾರ್ಗವು ಬಂದಿದೆ. ಆದ್ದರಿಂದ ಈಗ ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸುವುದಿಲ್ಲ.

26-27 ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ. 28 ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ. 29 ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.

ಯೆಹೆಜ್ಕೇಲ 30

ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು

30 ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ’ ಎಂದು ಹೇಳು.

“‘ಅಳುತ್ತಾ,
    “ಭಯಂಕರ ದಿವಸಗಳು ಬರುತ್ತವೆ” ಎಂದು ಹೇಳು.
ಆ ದಿನವು ಹತ್ತಿರ ಬಂತು!
ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು.
    ಅದು ಮೋಡ ಕವಿದ ದಿನವಾಗಿರುವುದು.
    ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.
ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು!
    ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು.
ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು.
    ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು.

“‘ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು[a] ಇವರೆಲ್ಲರೂ ನಾಶವಾಗುವರು.

“‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು:
ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು.
    ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು.
ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್‌ನಿಂದ ಹಿಡಿದು ಅಸ್ವಾನ್ ತನಕ ಸಾಯುವರು.
ಇದು ನನ್ನ ಒಡೆಯನಾದ ಯೆಹೋವನ ನುಡಿ.
ನಾಶಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು.
    ಈಜಿಪ್ಟ್ ಬಂಜರು ದೇಶಗಳಲ್ಲೊಂದಾಗುವುದು.
ಬಾಬಿಲೋನಿನ ಸೈನ್ಯವು
    ಈಜಿಪ್ಟಿನ ಮೇಲೆ ಯುದ್ಧಮಾಡುವದು
ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಬೆಂಕಿಯು
    ಅದರ ಸಹಾಯಕರನ್ನು ದಹಿಸುವದು.
ಆಗ ನಾನು ಯೆಹೋವನೆಂದು ಅವರು ತಿಳಿಯುವರು.

“‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”

10 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ;
“ಈಜಿಪ್ಟಿನ ಜನರನ್ನು ನಾಶಮಾಡುವುದಕ್ಕಾಗಿ
    ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಉಪಯೋಗಿಸುವೆನು.
11 ಎಲ್ಲಾ ಜನಾಂಗಗಳಿಗಿಂತ ನೆಬೂಕದ್ನೆಚ್ಚರನು
    ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು.
    ಈಜಿಪ್ಟನ್ನು ನಾಶಮಾಡಲು ಅವರನ್ನು ಕರೆಹಿಸುವೆನು.
ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು
    ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು.
12 ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು.
    ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು.
ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು.
    ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”

ಈಜಿಪ್ಟಿನ ವಿಗ್ರಹಗಳು ನಾಶವಾಗುವವು

13 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ:
“ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು.
    ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು.
ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು.
    ಅವರಲ್ಲಿ ಭಯವನ್ನು ಹುಟ್ಟಿಸುವೆನು.
14 ಪತ್ರೋಸನ್ನು ನಾನು ಬರಿದಾಗಿ ಮಾಡುವೆನು.
    ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು.
    ತೆಬೆಸವನ್ನು ನಾನು ಶಿಕ್ಷಿಸುವೆನು.
15 ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನ್ನ ಕೋಪವನ್ನು ಸುರಿಸುವೆನು.
ತೆಬೆಸದ ಜನರನ್ನು ನಾನು ನಾಶಮಾಡುವೆನು.
16 ಈಜಿಪ್ಟಿನಲ್ಲಿ ಬೆಂಕಿಯನ್ನು ಬರಮಾಡುವೆನು.
    ಸೀನ್ ನಗರವು ಭಯದಿಂದ ಕಂಗೆಡುವದು.
ಸೈನಿಕರು ತೆಬೆಸವನ್ನು ಧಾಳಿ ಮಾಡುವರು.
    ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು.
17 ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು.
    ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.
18 ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು.
    ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು.
ಈಜಿಪ್ಟಿನ ಮೇಲೆ ಮೋಡವು ಕವಿಯುವುದು.
    ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
19 ನಾನು ಈಜಿಪ್ಟನ್ನು ಶಿಕ್ಷಿಸುವಾಗ
    ನಾನೇ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.”

ಈಜಿಪ್ಟ್ ನಿತ್ಯಕಾಲಕ್ಕೂ ಬಲಹೀನವಾಗುವದು

20 ಸೆರೆಹಿಡಿಯಲ್ಪಟ್ಟ ಹನ್ನೊಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, 21 “ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”

22 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು. 23 ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. 24 ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು. 25 ನಾನು ಬಾಬಿಲೋನಿನ ರಾಜನ ಕೈಗಳನ್ನು ಬಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು.

“ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು. 26 ನಾನು ಈಜಿಪ್ಟಿನ ಜನರನ್ನು ದೇಶಾಂತರ ಚದರಿಸಿಬಿಡುವೆನು. ಆಗ ನಾನು ಯೆಹೋವನೆಂದು ಅವರು ತಿಳಿದುಕೊಳ್ಳುವರು.”

ಕೀರ್ತನೆಗಳು 78:38-72

38 ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು.
    ಆತನು ಅವರನ್ನು ನಾಶಮಾಡಲಿಲ್ಲ.
ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು;
    ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.
39 ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು.
    ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.
40 ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು.
    ಆತನನ್ನು ಬಹಳವಾಗಿ ನೋಯಿಸಿದರು.
41 ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು.
    ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.
42 ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು.
    ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.
43 ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ
    ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು.
44 ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು!
    ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ.
45 ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು;
    ಅವು ಈಜಿಪ್ಟಿನ ಜನರನ್ನು ಕಚ್ಚಿದವು.
ಆತನು ಕಪ್ಪೆಗಳನ್ನು ಕಳುಹಿಸಿದನು;
    ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.
46 ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ
    ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು.
47 ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು;
    ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.
48 ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ
    ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು.
49 ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು.
    ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.
50 ಆತನು ತನ್ನ ಕೋಪವನ್ನು ತೋರಿಸಿದನು.
    ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು.
    ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು.
51 ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು.
    ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.
52 ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು.
    ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು.
53 ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ
    ಸುರಕ್ಷಿತವಾಗಿ ಮುನ್ನಡೆಸಿದನು.
ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ.
    ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು.
54 ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ
    ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು.
55 ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು.
    ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು;
    ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.
56 ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು.
    ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.
57 ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು.
    ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.
58 ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು.
    ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.
59 ದೇವರು ಇದನ್ನು ತಿಳಿದು ಬಹು ಕೋಪಗೊಂಡನು,
    ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!
60 ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು.
    ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.
61 ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು.
    ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು.
62 ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು.
    ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು.
63 ಯುವಕರು ಬೆಂಕಿಯ ಪಾಲಾದರು.
    ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.
64 ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು,
    ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.
65 ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ
    ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.
66 ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು.
    ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು.
67 ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು.
    ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ.
68 ಆತನು ಯೆಹೂದಕುಲವನ್ನೇ ಆರಿಸಿಕೊಂಡನು.
    ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.
69 ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ
    ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು.
70 ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು.
    ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು.
71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ
    ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.
72 ದಾವೀದನು ಯಥಾರ್ಥಹೃದಯದಿಂದಲೂ
    ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International