New Testament in a Year
ಯೇಸುವಿನ ಬಂಧನ
(ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11)
47 ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.
48 ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುವಿಯೋ?” ಎಂದು ಕೇಳಿದನು. 49 ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು. 50 ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.
51 ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.
52 ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ? 53 ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.
ಪೇತ್ರನ ವಿಶ್ವಾಸದ್ರೋಹ
(ಮತ್ತಾಯ 26:57-58,69-75; ಮಾರ್ಕ 14:53-54,66-72; ಯೋಹಾನ 18:12-18,25-27)
54 ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ. 55 ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು. 56 ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.
57 ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು. 58 ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು.
ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
59 ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು.
60 ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು.
ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು. 61 ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು. 62 ಬಳಿಕ ಪೇತ್ರನು ಹೊರಗೆ ಹೋಗಿ ಬಹು ದುಃಖದಿಂದ ಅತ್ತನು.
ಯೇಸುವಿಗೆ ಜನರು ಮಾಡಿದ ಅಪಹಾಸ್ಯ
(ಮತ್ತಾಯ 26:67-68; ಮಾರ್ಕ 14:65)
63-64 ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು. 65 ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.
ಯೆಹೂದ್ಯನಾಯಕರ ಮುಂದೆ ಯೇಸು
(ಮತ್ತಾಯ 26:59-66; ಮಾರ್ಕ 14:55-64; ಯೋಹಾನ 18:19-24)
66 ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು, 67 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು.
ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ. 68 ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರಕೊಡುವುದಿಲ್ಲ. 69 ಆದರೆ ಇಂದಿನಿಂದ ಮನುಷ್ಯಕುಮಾರನು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
70 ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.
71 ಆಗ ಅವರು, “ಇನ್ನೇನು ಸಾಕ್ಷಿಬೇಕು? ಆತನು ಹೀಗೆ ಹೇಳುವುದನ್ನು ನಾವೇ ಕೇಳಿದೆವಲ್ಲಾ!” ಅಂದರು.
Kannada Holy Bible: Easy-to-Read Version. All rights reserved. © 1997 Bible League International