New Testament in a Year
ಕುರುಬನು ಮತ್ತು ಅವನ ಕುರಿಗಳು
10 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ. 2 ಆದರೆ ಕುರುಬನು ಬಾಗಿಲ ಮೂಲಕ ಪ್ರವೇಶಿಸುತ್ತಾನೆ. 3 ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ. 4 ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ. 5 ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.
6 ಯೇಸು ಹೇಳಿದ ಈ ಸಾಮ್ಯದ ಅರ್ಥವನ್ನು ಜನರು ಗ್ರಹಿಸಿಕೊಳ್ಳಲಿಲ್ಲ.
ಯೇಸು ಒಳ್ಳೆಯ ಕುರುಬ
7 ಆದ್ದರಿಂದ ಯೇಸು ಮತ್ತೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನೇ ಕುರಿಗಳಿಗೆ ಬಾಗಿಲಾಗಿದ್ದೇನೆ. 8 ನಾನು ಬರುವುದಕ್ಕಿಂತ ಮೊದಲು ಬಂದವರೆಲ್ಲರೂ ಕಳ್ಳರಾಗಿದ್ದರು ಮತ್ತು ಸುಲಿಗೆಗಾರರಾಗಿದ್ದರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9 ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು. 10 ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.
11 “ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ. 12 ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ. 13 ಆ ವ್ಯಕ್ತಿಯು ಓಡಿಹೋಗುತ್ತಾನೆ. ಏಕೆಂದರೆ ಅವನು ಕೇವಲ ಕೂಲಿಗಾರನಾಗಿದ್ದಾನೆ. ಅವನ ಕುರಿಗಳ ಬಗ್ಗೆ ನಿಜವಾಗಿಯೂ ಚಿಂತಿಸುವುದಿಲ್ಲ.
14-15 “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ. 16 ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು. 17 ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ. 18 ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
19 ಯೇಸು ಈ ಸಂಗತಿಗಳನ್ನು ಹೇಳಿದ್ದರಿಂದ ಯೆಹೂದ್ಯರಲ್ಲಿ ಮತ್ತೆ ಭೇದ ಉಂಟಾಯಿತು. 20 ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.
21 ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.
ಯೇಸುವಿನ ವಿರುದ್ಧ ಯೆಹೂದ್ಯರು
22 ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ. 23 ಯೇಸು ದೇವಾಲಯದೊಳಗೆ ಸೊಲೊಮೋನನ ಆಲಯದಲ್ಲಿದ್ದನು.
Kannada Holy Bible: Easy-to-Read Version. All rights reserved. © 1997 Bible League International