New Testament in a Year
16 ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು. 17 ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. 18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.
20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ. 21 ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.
ಪೌಲನನ್ನು ಸೆಜರೇಯಕ್ಕೆ ಕಳುಹಿಸಲಾಯಿತು
23 ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು. 24 ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು. 25 ಸೇನಾಧಿಪತಿಯು ಒಂದು ಪತ್ರವನ್ನೂ ಬರೆದನು. ಅದರಲ್ಲಿ ಹೀಗೆ ತಿಳಿಸಲಾಗಿತ್ತು:
26 ಕ್ಲಾಡಿಯ ಲೂಸಿಯನಿಂದ ಮಹಾರಾಜಶ್ರೀಗಳಾದ ರಾಜ್ಯಪಾಲ ಫೇಲಿಕ್ಸನಿಗೆ,
ವಂದನೆಗಳು.
27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು. 28 ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ. 29 ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ. 30 ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
31 ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು. 32 ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು. 33 ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.
34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು. 35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
Kannada Holy Bible: Easy-to-Read Version. All rights reserved. © 1997 Bible League International