New Testament in a Year
ಹಣಕ್ಕಿಂತ ದೇವರೇ ಬಹು ಮುಖ್ಯ
(ಲೂಕ 12:33-34; 11:34-36; 16:13)
19 “ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು. 20 ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ. 21 ನಿಮ್ಮ ಭಂಡಾರ ಎಲ್ಲಿರುವುದೋ ಅಲ್ಲೇ ನಿಮ್ಮ ಮನಸ್ಸಿರುವುದು.
22 “ಕಣ್ಣು ಶರೀರಕ್ಕೆ ಬೆಳಕಾಗಿದೆ. ನಿನ್ನ ಕಣ್ಣು ಸರಿಯಿದ್ದರೆ, ನಿನ್ನ ದೇಹವೆಲ್ಲಾ ಬೆಳಕಿನಿಂದ ಕೂಡಿರುವುದು. 23 ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.
24 “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.
ದೇವರ ರಾಜ್ಯಕ್ಕೆ ಪ್ರಥಮ ಸ್ಥಾನ
(ಲೂಕ 12:22-34)
25 “ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ. 26 ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ. 27 ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ.
28 “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ. 29 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ. 30 ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!
31 “‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ. 32 ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ. 33 ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು. 34 ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.
Kannada Holy Bible: Easy-to-Read Version. All rights reserved. © 1997 Bible League International