New Testament in a Year
ತನ್ನ ಮರಣದ ಬಗ್ಗೆ ಯೇಸುವಿನ ಮೂರನೆ ಪ್ರಕಟನೆ
(ಮಾರ್ಕ 10:32-34; ಲೂಕ 18:31-34)
17 ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು, 18 “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು. 19 ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
ತಾಯಿಯೊಬ್ಬಳ ವಿಶೇಷ ಕೋರಿಕೆ
(ಮಾರ್ಕ 10:35-45)
20 ಆಗ ಜೆಬೆದಾಯನ ಹೆಂಡತಿಯು ಯೇಸುವಿನ ಬಳಿಗೆ ಬಂದಳು. ಅವಳ ಗಂಡುಮಕ್ಕಳು ಅವಳೊಂದಿಗಿದ್ದರು. ಅವಳು ಯೇಸುವಿನ ಮುಂದೆ ಅಡ್ಡಬಿದ್ದು ತನ್ನ ಕೋರಿಕೆಯನ್ನು ಈಡೇರಿಸಬೇಕೆಂದು ಕೇಳಿಕೊಂಡಳು.
21 ಯೇಸು, “ನಿನ್ನ ಕೋರಿಕೆ ಏನು?” ಎಂದನು.
ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.
22 ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು.
ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.
23 ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.
24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು. 25 ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ. 26 ಆದರೆ ನೀವು ಹಾಗೆ ಮಾಡಬಾರದು. ನಿಮ್ಮಲ್ಲಿ ದೊಡ್ಡವನಾಗಲು ಇಚ್ಫಿಸುವವನು ಸೇವಕನಂತೆ ಸೇವೆ ಮಾಡಬೇಕು. 27 ನಿಮ್ಮಲ್ಲಿ ಮೊದಲನೆಯವನಾಗಲು ಇಚ್ಛಿಸುವವನು ಗುಲಾಮನಂತೆ ಸೇವೆ ಮಾಡಬೇಕು. 28 ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
ಇಬ್ಬರು ಕುರುಡರಿಗೆ ಯೇಸುವಿನಿಂದ ಸ್ವಸ್ಥತೆ
(ಮಾರ್ಕ 10:46-52; ಲೂಕ 18:35-43)
29 ಯೇಸು ಮತ್ತು ಆತನ ಶಿಷ್ಯರು ಜೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಬಹಳ ಜನರು ಯೇಸುವನ್ನು ಹಿಂಬಾಲಿಸಿದರು. 30 ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.
31 ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.
32 ಯೇಸು ನಿಂತು, ಆ ಕುರುಡರಿಗೆ “ನಾನು ನಿಮಗೆ ಏನು ಮಾಡಬೇಕೆಂದು ಆಶಿಸುತ್ತೀರಿ?” ಎಂದನು.
33 ಆಗ ಕುರುಡರು, “ಪ್ರಭುವೇ, ನಮಗೆ ಕಣ್ಣು ಕಾಣಿಸುವಂತೆ ಮಾಡು!” ಅಂದರು.
34 ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.
Kannada Holy Bible: Easy-to-Read Version. All rights reserved. © 1997 Bible League International