New Testament in a Year
ಯೇಸು ತನ್ನ ಅಪೊಸ್ತಲರನ್ನು ಸೇವೆಗೆ ಕಳುಹಿಸಿದ್ದು
(ಮತ್ತಾಯ 10:5-15; ಮಾರ್ಕ 6:7-13)
9 ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು. 2 ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು. 3 ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ. 4 ನೀವು ಒಂದು ಮನೆಯಲ್ಲಿ ಇಳಿದುಕೊಂಡಾಗ, ಆ ಊರನ್ನು ಬಿಟ್ಟುಹೋಗುವ ಸಮಯದವರೆಗೂ ಅಲ್ಲೇ ತಂಗಿರಿ. 5 ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”
6 ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು.
ಯೇಸುವಿನ ಬಗ್ಗೆ ಹೆರೋದನಿಗಾದ ಗಲಿಬಿಲಿ
(ಮತ್ತಾಯ 14:1-12; ಮಾರ್ಕ 6:14-29)
7 ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು. 8 ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು. 9 ಹೆರೋದನು, “ನಾನು ಯೋಹಾನನ ತಲೆಯನ್ನು ಕತ್ತರಿಸಿದೆನು. ಆದರೆ ಈ ಸಂಗತಿಗಳನ್ನು ಮಾಡುತ್ತಿರುವ ಈ ಮನುಷ್ಯನು ಯಾರು?” ಎಂದು ಆಲೋಚಿಸುತ್ತಾ ಯೇಸುವನ್ನು ನೋಡಲು ಪ್ರಯತ್ನಿಸಿದನು.
ಐದು ಸಾವಿರಕ್ಕಿಂತಲೂ ಹೆಚ್ಚು ಜನರಿಗೆ ಊಟ
(ಮತ್ತಾಯ 14:13-21; ಮಾರ್ಕ 6:30-44; ಯೋಹಾನ 6:1-14)
10 ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. 11 ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.
12 ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.
13 ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು.
ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು. 14 (ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.)
ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು.
15 ಅಂತೆಯೇ ಶಿಷ್ಯರು ಮಾಡಿದರು. ಜನರೆಲ್ಲರೂ ನೆಲದ ಮೇಲೆ ಕುಳಿತುಕೊಂಡರು. 16 ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು. 17 ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
Kannada Holy Bible: Easy-to-Read Version. All rights reserved. © 1997 Bible League International