Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಲೂಕ 9:37-62

ದೆವ್ವದಿಂದ ಪೀಡಿತನಾಗಿದ್ದ ಬಾಲಕನಿಗೆ ಬಿಡುಗಡೆ

(ಮತ್ತಾಯ 17:14-18; ಮಾರ್ಕ 9:14-27)

37 ಮರುದಿನ, ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಬೆಟ್ಟದಿಂದಿಳಿದು ಬಂದರು. ಜನರ ಬಹು ದೊಡ್ಡ ಗುಂಪೊಂದು ಯೇಸುವನ್ನು ಎದುರುಗೊಂಡಿತು. 38 ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು. 39 ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ. 40 ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು.

41 ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.

42 ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು. 43 ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು.

ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟಣೆ

(ಮತ್ತಾಯ 17:22-23; ಮಾರ್ಕ 9:30-32)

ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ, 44 “ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು. 45 ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.

ಅತ್ಯಂತ ದೊಡ್ಡ ವ್ಯಕ್ತಿ

(ಮತ್ತಾಯ 18:1-5; ಮಾರ್ಕ 9:33-37)

46 ತಮ್ಮಲ್ಲಿ ಯಾವನು ಅತ್ಯಂತ ಪ್ರಮುಖನು ಎಂಬುದರ ಬಗ್ಗೆ ಯೇಸುವಿನ ಶಿಷ್ಯರು ವಾದಮಾಡತೊಡಗಿದರು. 47 ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಒಂದು ಚಿಕ್ಕ ಮಗುವನ್ನು ಕರೆದು ತನ್ನ ಬಳಿಯಲ್ಲಿ ನಿಲ್ಲಿಸಿದನು. 48 ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.

ನಿಮಗೆ ವಿರೋಧವಾಗಿಲ್ಲದ ವ್ಯಕ್ತಿ ನಿಮ್ಮವನೇ

(ಮಾರ್ಕ 9:38-40)

49 ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.

50 ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿ. ಏಕೆಂದರೆ, ನಿಮಗೆ ವಿರೋಧವಾಗಿಲ್ಲದವನು ನಿಮ್ಮವನೇ” ಎಂದನು.

ಸಮಾರ್ಯ ಪಟ್ಟಣ

51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು. 52 ಯೇಸು ಕೆಲವರನ್ನು ತನ್ನ ಮುಂದಾಗಿ ಕಳುಹಿಸಿದನು. ಯೇಸುವಿಗಾಗಿ ಪ್ರತಿಯೊಂದನ್ನು ಸಿದ್ಧಪಡಿಸಲು ಅವರು ಸಮಾರ್ಯ ಪಟ್ಟಣಕ್ಕೆ ಹೋದರು. 53 ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ. 54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!”[a] ಎಂದು ಕೇಳಿದರು.

55 ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು.[b] 56 ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.

ಯೇಸುವನ್ನು ಹಿಂಬಾಲಿಸಿ

(ಮತ್ತಾಯ 8:19-22)

57 ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.

58 ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.

59 ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.

ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.

60 ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.

61 ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.

62 ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International