Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಲೂಕ 19:28-48

ಜೆರುಸಲೇಮಿಗೆ ಯೇಸುವಿನ ಪ್ರವೇಶ

(ಮತ್ತಾಯ 21:1-11; ಮಾರ್ಕ 11:1-11; ಯೋಹಾನ 12:12-19)

28 ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು. 29 ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ[a] ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ, 30 “ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ. 31 ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ‘ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.

32 ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು 33 ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.

34 ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು. 35 ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು. 36 ಯೇಸು ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು. ಶಿಷ್ಯರು ತಮ್ಮ ಬಟ್ಟೆಗಳನ್ನು ರಸ್ತೆಯಲ್ಲಿ ಯೇಸುವಿನ ಮುಂದೆ ಹಾಸಿದರು.

37 ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು. 38 ಅವರು,

“‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’(A)

ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ”

ಎಂದು ಆರ್ಭಟಿಸಿದರು.

39 ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು.

40 ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.

ಜೆರುಸಲೇಮಿನ ವಿಷಯದಲ್ಲಿ ಯೇಸು ಅತ್ತನು

41 ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು 42 ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ. 43 ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ, 44 ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.

ದೇವಾಲಯಕ್ಕೆ ಯೇಸುವಿನ ಪ್ರವೇಶ

(ಮತ್ತಾಯ 21:12-17; ಮಾರ್ಕ 11:15-19; ಯೋಹಾನ 2:13-22)

45 ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ, 46 ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’(B) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’”(C) ಎಂದನು.

47 ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು. 48 ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International