Old/New Testament
ಜಲಪ್ರಳಯದ ಪ್ರಾರಂಭ
7 ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು. 2 ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ. 3 ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ. 4 ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು. 5 ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.
6 ಮಳೆಯು ಆರಂಭವಾದಾಗ ನೋಹನ ವಯಸ್ಸು ಆರುನೂರು ವರ್ಷ. 7 ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಹೆಂಡತಿ, ತನ್ನ ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯೊಳಗೆ ಹೋದನು. 8 ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ 9 ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು. 10 ಏಳು ದಿನಗಳ ನಂತರ ಜಲಪ್ರಳಯ ಪ್ರಾರಂಭವಾಯಿತು. ಭೂಮಿಯ ಮೇಲೆ ಮಳೆ ಸುರಿಯತೊಡಗಿತು.
11-13 ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು. 14 ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು. 15 ಉಸಿರಾಡುವ ಪ್ರತಿಯೊಂದು ಬಗೆಯ ಪ್ರಾಣಿಗಳು ತಮ್ಮತಮ್ಮ ಜಾತಿಗನುಸಾರವಾಗಿ ಎರಡೆರಡಾಗಿ ಬಂದವು. 16 ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.
17 ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು. 18 ನೀರು ಇನ್ನೂ ಮೇಲೇರತೊಡಗಿದ್ದರಿಂದ ನಾವೆಯೂ ಭೂಮಿಯಿಂದ ಬಹು ಮೇಲೆ ಚಲಿಸತೊಡಗಿತು. 19 ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು. 20 ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು.
21-22 ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು. 23 ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು. 24 ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು.
ಜಲಪ್ರಳಯದ ಮುಕ್ತಾಯ
8 ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.
2 ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು. 3-4 ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು. 5 ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.
6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು. 7 ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವ ವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು. 8 ನೆಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು.
9 ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.
10 ಏಳು ದಿನಗಳವರೆಗೆ ನೋಹನು ಕಾದುಕೊಂಡಿದ್ದು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. 11 ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು. 12 ಏಳು ದಿನಗಳ ನಂತರ ನೋಹನು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಆದರೆ ಅದು ಈ ಸಲ ಹಿಂತಿರುಗಿ ಬರಲಿಲ್ಲ.
13 ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು. 14 ಎರಡನೆಯ ತಿಂಗಳ ಇಪ್ಪತ್ತೇಳನೆಯ ದಿನದೊಳಗೆ ನೆಲವೆಲ್ಲಾ ಸಂಪೂರ್ಣವಾಗಿ ಒಣಗಿಹೋಯಿತು.
15-16 ಆಮೇಲೆ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ನಿನ್ನ ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬನ್ನಿ. 17 ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.
18 ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು. 19 ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.
20 ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.
21 ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ. 22 ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.
ಹೊಸ ಪ್ರಾರಂಭ
9 ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ. 2 ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ. 3 ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ. 4 ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು. 5 ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.
6 “ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು.
ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”
7 “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು.
8-9 ಆಮೇಲೆ ದೇವರು ನೋಹನಿಗೂ ಅವನ ಮಕ್ಕಳಿಗೂ, “ನಾನು ನಿಮಗೆ ಮತ್ತು ಮುಂದೆ ಜೀವಿಸುವ ನಿಮ್ಮ ಜನರಿಗೆ ವಾಗ್ದಾನ ಮಾಡುತ್ತೇನೆ. 10 ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ. 11 ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
12 ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು. 13 ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು. 14 ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ. 15 ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ. 16 ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.
17 ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು.
ಸಮಸ್ಯೆಗಳ ಪ್ರಾರಂಭ
18 ನೋಹನ ಗಂಡುಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಫೆತ್ (ಹಾಮನು ಕಾನಾನನ ತಂದೆ.) 19 ಈ ಮೂವರು ನೋಹನ ಗಂಡುಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲಪುರುಷರು.
20 ನೋಹನು ರೈತನಾದನು. ಅವನು ಒಂದು ದ್ರಾಕ್ಷಿತೋಟ ಮಾಡಿದನು. 21 ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು. 22 ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು. 23 ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.
24 ಆಮೇಲೆ ನೋಹನು ಎಚ್ಚರಗೊಂಡನು. ಕಿರಿಮಗನಾದ ಹಾಮನು ಏನು ಮಾಡಿದನು ಎಂದು ಅವನಿಗೆ ತಿಳಿಯಿತು. 25 ಆದ್ದರಿಂದ ನೋಹನು,
“ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ”
ಎಂದು ಶಪಿಸಿದನು.
26 ಅಲ್ಲದೆ ನೋಹನು,
“ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ!
ಕಾನಾನನು ಶೇಮನಿಗೆ ಗುಲಾಮನಾಗಿರಲಿ.
27 ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ.
ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ
ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು.
28 ಜಲಪ್ರಳಯದ ನಂತರ ನೋಹನು ಮುನ್ನೂರೈವತ್ತು ವರ್ಷ ಬದುಕಿದ್ದನು. 29 ನೋಹನು ಒಟ್ಟು ಒಂಭೈನೂರೈವತ್ತು ವರ್ಷ ಬದುಕಿ ಸತ್ತನು.
ಸ್ನಾನಿಕ ಯೋಹಾನನ ಉಪದೇಶ
(ಮಾರ್ಕ 1:1-8; ಲೂಕ 3:1-9,15-17; ಯೋಹಾನ 1:19-28)
3 ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು. 2 “ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.
3 “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ;
ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’
ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ”(A)
ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.
4 ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು. 5 ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು. 6 ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.
7 ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು? 8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ. 9 ‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ. 10 ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.
11 “ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು. 12 ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.
ಯೋಹಾನನಿಂದ ಯೇಸುವಿಗೆ ದೀಕ್ಷಾಸ್ನಾನ
(ಮಾರ್ಕ 1:9-11; ಲೂಕ 3:21-22)
13 ಆ ಸಮಯದಲ್ಲಿ ಯೋಹಾನನಿಂದ ಯೇಸು ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಗಲಿಲಾಯದಿಂದ ಜೋರ್ಡನ್ ನದಿಗೆ ಬಂದನು. 14 ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.
15 ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.
16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು. 17 ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.
Kannada Holy Bible: Easy-to-Read Version. All rights reserved. © 1997 Bible League International