Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಆದಿಕಾಂಡ 29-30

ಯಾಕೋಬನು ರಾಹೇಲಳನ್ನು ಭೇಟಿಯಾದದ್ದು

29 ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು. ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು. ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.

ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು.

ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.

ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು.

ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು.

ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು.

ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.

ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು.

ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.

ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.) 10 ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು. 11 ಬಳಿಕ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಅತ್ತನು. 12 ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು.

13 ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.

14 ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.

ಯಾಕೋಬನಿಗಾದ ಮೋಸ

15 ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.

16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್.

17 ರಾಹೇಲಳು ಸುಂದರವಾಗಿದ್ದಳು. ಲೇಯಳ ಕಣ್ಣುಗಳು ಸೌಮ್ಯವಾಗಿದ್ದವು.[a] 18 ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.

19 ಲಾಬಾನನು, “ಬೇರೊಬ್ಬನು ಆಕೆಯನ್ನು ಮದುವೆಯಾಗುವುದಕ್ಕಿಂತ ನೀನು ಮದುವೆಯಾಗುವುದೇ ಆಕೆಗೆ ಒಳ್ಳೆಯದು. ಆದ್ದರಿಂದ ನನ್ನೊಂದಿಗಿರು” ಎಂದು ಹೇಳಿದನು.

20 ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.

21 ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.

22 ಆದ್ದರಿಂದ ಲಾಬಾನನು ಆ ಸ್ಥಳದಲ್ಲಿದ್ದ ಜನರಿಗೆಲ್ಲ ಒಂದು ಔತಣಕೂಟವನ್ನು ಏರ್ಪಡಿಸಿದನು. 23 ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು. 24 (ಲಾಬಾನನು ತನ್ನ ಸೇವಕಿಯಾದ ಜಿಲ್ಪಾಳನ್ನು ತನ್ನ ಮಗಳಿಗೆ ಸೇವಕಿಯನ್ನಾಗಿ ಕೊಟ್ಟನು.) 25 ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.

26 ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡ ಮಗಳು ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ. 27 ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು.

28 ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು. 29 (ಲಾಬಾನನು ತನ್ನ ಸೇವಕಿಯಾದ ಬಿಲ್ಹಾಳನ್ನು ತನ್ನ ಮಗಳಾದ ರಾಹೇಲಳಿಗೆ ಸೇವಕಿಯನ್ನಾಗಿ ಕೊಟ್ಟನು.) 30 ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು.

ಯಾಕೋಬನ ಕುಟುಂಬದ ಅಭಿವೃದ್ಧಿ

31 ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.

32 ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.

33 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.

34 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.

35 ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.

30 ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.

ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.

ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.

ಅಂತೆಯೇ ರಾಹೇಲಳು ಬಿಲ್ಹಾಳನ್ನು ತನ್ನ ಗಂಡನಾದ ಯಾಕೋಬನಿಗೆ ಕೊಟ್ಟಳು. ಯಾಕೋಬನು ಬಿಲ್ಹಾಳನ್ನು ಕೂಡಿದನು. ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.

ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.

ಬಿಲ್ಹಾ ಮತ್ತೆ ಬಸುರಾಗಿ ಯಾಕೋಬನಿಗೆ ಎರಡನೆ ಮಗನನ್ನು ಹೆತ್ತಳು. ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.

ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಳು. 10 ಜಿಲ್ಪಳಿಗೂ ಒಬ್ಬ ಮಗನು ಹುಟ್ಟಿದನು. 11 ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾದ್ ಎಂದು ಹೆಸರಿಟ್ಟಳು. 12 ಜಿಲ್ಪಳು ಮತ್ತೊಬ್ಬ ಮಗನನ್ನು ಹೆತ್ತಳು. ಲೇಯಳು, “ನಾನು ಧನ್ಯಳಾದೆ. 13 ಈಗ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಆಶೇರ್ ಎಂದು ಹೆಸರಿಟ್ಟಳು.

14 ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.

15 ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು.

ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.

16 ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.

17 ಲೇಯಳು ಮತ್ತೆ ಬಸುರಾಗುವಂತೆ ದೇವರು ಅನುಗ್ರಹಿಸಿದನು. ಆಕೆ ತನ್ನ ಐದನೆಯ ಮಗನನ್ನು ಹೆತ್ತಳು. 18 ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.

19 ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು. 20 ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.

21 ತರುವಾಯ ಲೇಯಳು ಒಬ್ಬ ಮಗಳನ್ನು ಹೆತ್ತಳು. ಆಕೆ ತನ್ನ ಮಗಳಿಗೆ ದೀನಾ ಎಂದು ಹೆಸರಿಟ್ಟಳು.

22 ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು. 23-24 ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.

ಯಾಕೋಬನು ಲಾಬಾನನಿಗೆ ಮೋಸ ಮಾಡಿದ್ದು

25 ಯೋಸೇಫನು ಹುಟ್ಟಿದ ಮೇಲೆ, ಯಾಕೋಬನು ಲಾಬಾನನಿಗೆ, “ಈಗ ನಾನು ನನ್ನ ಸ್ವಂತ ಮನೆಗೆ ಹೋಗಲು ಅನುಮತಿ ಕೊಡು. 26 ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.

27 ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ. 28 ಹೇಳು, ನಾನು ನಿನಗೆ ಎಷ್ಟು ಸಂಬಳ ಕೊಡಬೇಕು? ನೀನು ಹೇಳಿದಷ್ಟು ಕೊಡುತ್ತೇನೆ” ಎಂದು ಹೇಳಿದನು.

29 ಯಾಕೋಬನು, “ನಾನು ನಿನಗೋಸ್ಕರ ಕಷ್ಟಪಟ್ಟು ಕೆಲಸ ಮಾಡಿರುವುದು ನಿನಗೆ ಗೊತ್ತಿದೆ. ನಾನು ನಿನ್ನ ಕುರಿಮಂದೆಗಳನ್ನು ನೋಡಿಕೊಂಡಿದ್ದರಿಂದ ಅವು ಹೆಚ್ಚಾಗಿವೆ. 30 ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.

31 ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು.

ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ. 32 ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ. 33 ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.

34 ಲಾಬಾನನು, “ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನೀನು ಹೇಳಿದಂತೆ ನಾವು ಮಾಡೋಣ” ಎಂದು ಹೇಳಿದನು. 35 ಆ ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನೂ ಕಪ್ಪಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡುಮಕ್ಕಳಿಗೆ ಆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು. 36 ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.

37 ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು. 38 ಯಾಕೋಬನು ಆ ಕೊಂಬೆಗಳನ್ನು ಮಂದೆಗಳ ಎದುರಿಗೆ ನೀರು ಕುಡಿಯುವ ಸ್ಥಳದಲ್ಲಿಟ್ಟನು. ಪ್ರಾಣಿಗಳು ನೀರು ಕುಡಿಯುವುದಕ್ಕೆ ಬಂದಾಗ ಆ ಸ್ಥಳದಲ್ಲಿ ಸಂಗಮ ಮಾಡುತ್ತಿದ್ದವು. 39 ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.

40 ಯಾಕೋಬನು ಚುಕ್ಕೆಯುಳ್ಳ ಮತ್ತು ಕಪ್ಪಾಗಿರುವ ಆಡುಕುರಿಗಳನ್ನು ಮಂದೆಯ ಇತರ ಆಡುಕುರಿಗಳಿಂದ ಬೇರ್ಪಡಿಸಿದನು. ಯಾಕೋಬನು ತನ್ನ ಪಶುಗಳನ್ನು ಲಾಬಾನನ ಪಶುಗಳಿಂದ ಪ್ರತ್ಯೇಕವಾಗಿರಿಸಿದನು. 41 ಬಲವಾದ ಆಡುಕುರಿಗಳು ಸಂಗಮ ಮಾಡುವಾಗಲೆಲ್ಲ ಯಾಕೋಬನು ಆ ಕೊಂಬೆಗಳನ್ನು ಅವುಗಳ ಕಣ್ಣಿಗೆ ಎದುರಾಗಿಡುತ್ತಿದ್ದನು. ಅವುಗಳು ಆ ಕೊಂಬೆಗಳ ಸಮೀಪದಲ್ಲಿ ಸಂಗಮ ಮಾಡುತ್ತಿದ್ದವು. 42 ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು. 43 ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.

ಮತ್ತಾಯ 9:1-17

ಸ್ವಸ್ಥತೆಯನ್ನು ಹೊಂದಿದ ಪಾರ್ಶ್ವವಾಯು ರೋಗಿ

(ಮಾರ್ಕ 2:1-12; 5:17-26)

ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು. ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು.

ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ? ಯಾವುದು ಸುಲಭ? ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೇ ಅಥವಾ ‘ಮೇಲಕ್ಕೆದ್ದು ನಡೆ’ ಎಂದು ಹೇಳುವುದೇ? ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.

ಆಗ ಅವನು ಎದ್ದು ಮನೆಗೆ ಹೋದನು. ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.

ಸುಂಕದವನು

(ಮಾರ್ಕ 2:13-17; ಲೂಕ 5:27-32)

ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು.

10 ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು. 11 ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.

12 ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ. 13 ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’(A) ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

ಯೇಸು ಇತರ ಧಾರ್ಮಿಕ ಯೆಹೂದ್ಯರಂತಲ್ಲ

(ಮಾರ್ಕ 2:18-22; ಲೂಕ 5:33-39)

14 ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.

15 ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.

16 “ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು. 17 ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International