Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 7-8

ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ಫರೋಹನು ಸಮ್ಮತಿಸುವನು. ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು. ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”

ಯೆಹೋವನು ಆಜ್ಞಾಪಿಸಿದವುಗಳಿಗೆಲ್ಲಾ ಮೋಶೆ ಆರೋನರು ವಿಧೇಯರಾದರು. ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.

ಊರುಗೋಲು ಸರ್ಪವಾಯಿತು

ಯೆಹೋವನು ಮೋಶೆ ಆರೋನರಿಗೆ, “ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.

10 ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋದರು. ಯೆಹೋವನು ಆಜ್ಞಾಪಿಸಿದ್ದಂತೆಯೇ ಅವರು ಮಾಡಿದರು. ಆರೋನನು ತನ್ನ ಊರುಗೋಲನ್ನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ನೆಲದ ಮೇಲೆ ಬಿಸಾಡಿದಾಗ ಅದು ಸರ್ಪವಾಯಿತು.

11 ಆಗ ರಾಜನು ತನ್ನ ವಿಧ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. 12 ಅವರು ತಮ್ಮ ಊರುಗೋಲುಗಳನ್ನು ನೆಲದ ಮೇಲೆ ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. 13 ಯೆಹೋವನು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಮೋಶೆ ಮತ್ತು ಆರೋನರ ಮಾತಿಗೆ ಕಿವಿಗೊಡಲಿಲ್ಲ.

ನೀರು ರಕ್ತವಾದದ್ದು

14 ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ. 15 ಮುಂಜಾನೆ ಅವನು ನದಿಗೆ ಹೋಗುವನು. ಸರ್ಪವಾಗಿ ಮಾರ್ಪಾಟಾದ ಊರುಗೋಲನ್ನು ತೆಗೆದುಕೊಂಡು ನದಿಯ ತೀರಕ್ಕೆ ಹೋಗಿ ಅವನನ್ನು ಭೇಟಿಯಾಗಿ ಅವನಿಗೆ, 16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. 17 ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು. 18 ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು.

19 ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.

20 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. 21 ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯು ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು.

22 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. 23 ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

24 ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಆದ್ದರಿಂದ ಅವರು ನದಿಯ ಸುತ್ತಲೂ ಕುಡಿಯುವ ನೀರಿಗಾಗಿ ಬಾವಿಗಳನ್ನು ಅಗೆದರು.

ಕಪ್ಪೆಗಳಿಂದ ಬಾಧೆ

25 ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು.

ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ. ನನ್ನ ಜನರನ್ನು ನೀನು ಹೋಗಗೊಡಿಸದಿದ್ದರೆ ನಾನು ಈಜಿಪ್ಟನ್ನು ಕಪ್ಪೆಗಳಿಂದ ತುಂಬಿಸುವೆನು. ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು; ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು’” ಅಂದನು.

ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು.

ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.

ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.

ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.

ಮೋಶೆಯು ಫರೋಹನಿಗೆ, “ಕಪ್ಪೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು.

10 ಅದಕ್ಕೆ ಫರೋಹನು, “ನಾಳೆ” ಅಂದನು.

ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ. 11 ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಅಧಿಕಾರಿಗಳನ್ನೂ ನಿನ್ನ ಜನರನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿದುಕೊಳ್ಳುವವು” ಎಂದು ಹೇಳಿದನು.

12 ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. 13 ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು. 14 ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು. 15 ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಹೇನುಗಳು

16 ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.

17 ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.

18 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು. 19 ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಹುಳಗಳು

20 ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ! 21 ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿಕೊಳ್ಳುವವು; ನೆಲದ ಮೇಲೆಲ್ಲಾ ಇರುವವು. 22 ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ. 23 ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ’ ಎಂದು ಹೇಳಬೇಕು” ಎಂದು ಹೇಳಿದನು.

24 ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು. 25 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನಿಮ್ಮ ದೇವರಿಗೆ ಈ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ” ಎಂದು ಹೇಳಿದನು.

26 ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ? 27 ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ” ಅಂದನು.

28 ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು.

29 ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.

30 ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು. 31 ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳೂ ಉಳಿಯಲಿಲ್ಲ. 32 ಆದರೆ ಫರೋಹನು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ಜನರನ್ನು ಹೋಗಗೊಡಿಸಲಿಲ್ಲ.

ಮತ್ತಾಯ 15:1-20

ದೇವರ ಆಜ್ಞೆ ಮತ್ತು ಮನುಷ್ಯರ ನಿಯಮ

(ಮಾರ್ಕ 7:1-23)

15 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು, “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.

ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ? ‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’(A) ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’(B) ಎಂಬುದೂ ದೇವರ ಆಜ್ಞೆ. ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ, ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ. ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:

‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ.
    ಇವರ ಮನಸ್ಸಾದರೋ ನನಗೆ ದೂರವಾಗಿದೆ.
ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ.
    ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’(C)

10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ. 11 ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.

12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.

13 ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು. 14 ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.

15 ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.

16 ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ? 17 ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ. 18 ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. 19 ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ. 20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International