Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 19-20

ಇಸ್ರೇಲರ ಜೊತೆ ದೇವರ ಒಡಂಬಡಿಕೆ

19 ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ್ ಮರುಭೂಮಿಯನ್ನು ತಲುಪಿದರು. ಜನರು ರೆಫೀದೀಮನ್ನು ಬಿಟ್ಟು ಸೀನಾಯ್ ಮರುಭೂಮಿಗೆ ಬಂದಿದ್ದರು. ಅಲ್ಲಿ ಅವರು ಬೆಟ್ಟದ ಬಳಿ ತಂಗಿದರು. ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು: ‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ. ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ. ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.

ಆದ್ದರಿಂದ ಮೋಶೆ ಬೆಟ್ಟದಿಂದಿಳಿದು ಬಂದು ಜನರ ಹಿರಿಯರನ್ನು ಒಟ್ಟಾಗಿ ಕರೆಸಿದನು. ಯೆಹೋವನು ಹೇಳಬೇಕೆಂದು ಆಜ್ಞಾಪಿಸಿದ ಸಂಗತಿಗಳನ್ನೆಲ್ಲಾ ಮೋಶೆಯು ಹಿರಿಯರಿಗೆ ಹೇಳಿದನು. ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು.

ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು. ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು.

ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು 11 ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು. 12-13 ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.

14 ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.

15 ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.

16 ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು. 17 ಆಗ ಮೋಶೆ ದೇವರನ್ನು ಸಂಧಿಸುವುದಕ್ಕಾಗಿ ಜನರನ್ನು ಪಾಳೆಯದಿಂದ ಹೊರಗೆ ನಡಿಸಿ, ಬೆಟ್ಟದ ಬಳಿಗೆ ಕರೆದುಕೊಂಡು ಬಂದನು. 18 ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು. 19 ತುತ್ತೂರಿಯ ಧ್ವನಿ ಹೆಚ್ಚುಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.

20 ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.

21 ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು. 22 ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು” ಅಂದನು.

23 ಮೋಶೆಯು ಯೆಹೋವನಿಗೆ, “ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ಅದನ್ನು ಪವಿತ್ರ ಸ್ಧಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.

24 ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.

25 ಆದ್ದರಿಂದ ಮೋಶೆ ಜನರ ಬಳಿಗೆ ಇಳಿದುಹೋಗಿ ಈ ಸಂಗತಿಗಳನ್ನು ಅವರಿಗೆ ತಿಳಿಸಿದನು.

ದಶಾಜ್ಞೆಗಳು

20 ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:

“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.

“ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.

“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು. ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು. ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.

“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

“ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ. ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ. 10 ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು. 11 ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.

12 “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.

13 “ನೀವು ಯಾರನ್ನೂ ಕೊಲೆ ಮಾಡಬಾರದು.

14 “ನೀವು ವ್ಯಭಿಚಾರ ಮಾಡಬಾರದು.

15 “ನೀವು ಕದಿಯಬಾರದು.

16 “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.[a]

17 “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”

ಜನರು ದೇವರಿಗೆ ಭಯಪಟ್ಟಿದು

18 ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು. 19 ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.

20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.

21 ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು. 22 ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ. 23 ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”

24 “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು. 25 ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ[b] ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು. 26 ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”

ಮತ್ತಾಯ 18:21-35

ಕ್ಷಮಾಪಣೆಯನ್ನು ಕುರಿತ ಸಾಮ್ಯ

21 ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.

22 ಯೇಸು, “ಏಳು ಸಲಕ್ಕಿಂತಲೂ ಹೆಚ್ಚಾಗಿ ಕ್ಷಮಿಸಬೇಕು. ಅವನು ನಿನಗೆ ಎಪ್ಪತ್ತೇಳು ಸಲ ತಪ್ಪು ಮಾಡಿದರೂ ನೀನು ಅವನನ್ನು ಕ್ಷಮಿಸುತ್ತಲೇ ಇರಬೇಕೆಂದು ನಾನು ನಿನಗೆ ಹೇಳುತ್ತೇನೆ” ಎಂದನು.

23 “ಪರಲೋಕರಾಜ್ಯವು ತನ್ನ ಸೇವಕರು ತನಗೆ ಕೊಡಬೇಕಿದ್ದ ಸಾಲದ ಹಣವನ್ನು ವಸೂಲಿ ಮಾಡಲು ತೀರ್ಮಾನಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ. 24 ರಾಜನು ತನ್ನ ಹಣವನ್ನು ವಸೂಲಿ ಮಾಡುವುದಕ್ಕೆ ಪ್ರಾರಂಭಿಸಿದನು. ಒಬ್ಬ ಸೇವಕನು ಹತ್ತು ಸಾವಿರ ಬೆಳ್ಳಿಯ ನಾಣ್ಯಗಳನ್ನು ರಾಜನಿಗೆ ಸಾಲ ಕೊಡಬೇಕಿತ್ತು. 25 ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.

26 “ಆಗ ಸೇವಕನು ರಾಜನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆ ತಂದುಕೊಳ್ಳಿ. ನಾನು ನಿಮಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ.’ ಎಂದು ಬೇಡಿಕೊಂಡನು. 27 ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.

28 “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.

29 “ಆ ಸೇವಕನು ಅವನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆಯಿಂದಿರು. ನಾನು ನಿನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ’ ಎಂದು ಬೇಡಿಕೊಂಡನು.

30 “ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು. 31 ಇದನ್ನು ಕಂಡ ಇತರ ಸೇವಕರೆಲ್ಲರೂ ಬಹಳವಾಗಿ ದುಃಖಪಟ್ಟು ನಡೆದ ಸಂಗತಿಯನ್ನೆಲ್ಲಾ ಯಜಮಾನನಿಗೆ ತಿಳಿಸಿದರು.”

32 “ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ. 33 ಹೀಗಿರಲು ನಾನು ನಿನಗೆ ಕರುಣೆ ತೋರಿದಂತೆ ನಿನ್ನ ಜೊತೆ ಸೇವಕನಿಗೂ ನೀನು ಕರುಣೆ ತೋರಿಸಬೇಕಿತ್ತು’ ಎಂದು ಹೇಳಿ 34 ಬಹುಕೋಪಗೊಂಡು ಅವನನ್ನು ಶಿಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸಿದನು. ಆ ಸೇವಕನು ತನ್ನ ಸಾಲವನ್ನೆಲ್ಲಾ ತೀರಿಸುವ ತನಕ ಸೆರೆಮನೆಯಲ್ಲಿ ಇರಬೇಕಾಯಿತು.

35 “ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International