Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 4-6

ರಚನೆಗಾರ: ದಾವೀದ.

ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು!
    ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು!
ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ
    ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ?
    ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?

ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ.
    ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.

ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ.
    ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ;
    ಯೆಹೋವನಲ್ಲಿಯೇ ಭರವಸೆಯಿಡಿರಿ!

“ನಮಗೆ ಒಳ್ಳೆಯದನ್ನು ಯಾರು ತೋರಿಸುವರು?
    ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು.
    ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.

ರಚನೆಗಾರ: ದಾವೀದ.

ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು.
    ನನ್ನ ಆಲೋಚನೆಗಳಿಗೆ ಗಮನಕೊಡು.
ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು.
    ನನ್ನ ಪ್ರಾರ್ಥನೆಯನ್ನು ಆಲೈಸು.
ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು;
    ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.

ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ.
    ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.
ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು;
    ದುಷ್ಟರನ್ನು ನೀನು ದ್ವೇಷಿಸುವೆ.
ಸುಳ್ಳಾಡುವವರನ್ನು ನೀನು ನಾಶಪಡಿಸುವೆ.
    ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.

ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು,
    ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.
ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ
    ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ,
ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ.
    ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ
ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ.
    ಅವರ ಗಂಟಲು ತೆರೆದ ಸಮಾಧಿಗಳಂತಿವೆ.
10 ದೇವರೇ, ಅವರನ್ನು ದಂಡಿಸು!
    ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ.
ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
    ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.
11 ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ.
    ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.
12 ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ;
    ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.

ರಚನೆಗಾರ: ದಾವೀದ.

ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
    ರೋಷದಿಂದ ನನ್ನನ್ನು ದಂಡಿಸಬೇಡ.
ಯೆಹೋವನೇ, ನನ್ನನ್ನು ಕನಿಕರಿಸು!
    ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ,
ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.
ನನ್ನ ಇಡೀ ದೇಹ ನಡುಗುತ್ತಿದೆ.
    ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು?
ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು!
    ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು.
ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ?
    ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ?
    ಆದ್ದರಿಂದ ನನ್ನನ್ನು ಗುಣಪಡಿಸು.

ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು.
    ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ.
ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ.
    ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.
ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ.
    ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.

ದುಷ್ಟರೇ, ತೊಲಗಿಹೋಗಿರಿ.
    ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ.
    ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.

10 ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು.
    ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.

ಅಪೊಸ್ತಲರ ಕಾರ್ಯಗಳು 17:16-34

ಅಥೆನ್ಸಿನಲ್ಲಿ ಪೌಲನು

16 ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು. 17 ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು. 18 ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು.

ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.

19 ಅವರು ಪೌಲನನ್ನು ಅರಿಯೊಪಾಗ ನ್ಯಾಯಸಭೆಗೆ ಕರೆದುಕೊಂಡು ಹೋದರು. ಅವರು ಅವನಿಗೆ, “ನೀನು ಉಪದೇಶಿಸುತ್ತಿರುವ ಹೊಸ ತತ್ವವನ್ನು ದಯವಿಟ್ಟು ನಮಗೆ ವಿವರಿಸು. 20 ನೀನು ಹೇಳುತ್ತಿರುವ ಸಂಗತಿಗಳು ನಮಗೆ ಹೊಸದಾಗಿವೆ. ನಾವು ಹಿಂದೆಂದೂ ಈ ಸಂಗತಿಗಳನ್ನು ಕೇಳಿಲ್ಲ. ಈ ಉಪದೇಶದ ಅರ್ಥವನ್ನು ನಾವು ತಿಳಿದುಕೊಳ್ಳ ಬಯಸುತ್ತೇವೆ” ಎಂದು ಹೇಳಿದರು. 21 (ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.)

22 ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ. 23 ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.

24 “ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ. 25 ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ. 26 ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.

27 “ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ. 28 ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

29 “ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ. 30 ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ. 31 ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”

32 ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು. 33 ಆದ್ದರಿಂದ ಪೌಲನು ಅವರ ಬಳಿಯಿಂದ ಹೊರಟುಹೋದನು. 34 ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International