Old/New Testament
ರಚನೆಗಾರ: ದಾವೀದ.
31 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ.
ನನ್ನನ್ನು ನಿರಾಶೆಗೊಳಿಸಬೇಡ.
ಕರುಣೆತೋರಿ ನನ್ನನ್ನು ರಕ್ಷಿಸು.
2 ನನಗೆ ಕಿವಿಗೊಡು.
ಬೇಗನೆ ಬಂದು, ನನ್ನನ್ನು ರಕ್ಷಿಸು.
ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು
ನನ್ನನ್ನು ಕಾಪಾಡು!
3 ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ
ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.
4 ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ.
ಅವರ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು.
ನೀನೇ ನನ್ನ ಆಶ್ರಯಸ್ಥಾನವಾಗಿರುವೆ.
5 ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ.
ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ.
ನನ್ನನ್ನು ರಕ್ಷಿಸು!
6 ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು.
ನಾನು ಯೆಹೋವನಲ್ಲಿಯೇ ಭರವಸವಿಡುವೆನು.
7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು.
ನನ್ನ ಸಂಕಟವನ್ನು ನೀನು ನೋಡಿರುವೆ;
ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.
8 ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ;
ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.
9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ;
ನನ್ನನ್ನು ಕರುಣಿಸು.
ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ,
ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.
10 ನನ್ನ ಜೀವಿತವು[a] ದುಃಖದಲ್ಲಿ ಕೊನೆಗೊಳ್ಳುತ್ತಿದೆ.
ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ.
ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ.
ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.[b]
11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ;
ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು;
ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು;
ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು.
ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.
13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ.
ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.
14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ.
ನೀನೇ ನನ್ನ ದೇವರು.
15 ನನ್ನ ಜೀವವು ನಿನ್ನ ಕೈಯಲ್ಲಿದೆ.
ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು[c] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ.
ಕರುಣೆಯಿಂದ ನನ್ನನ್ನು ರಕ್ಷಿಸು!
17 ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು.
ಆದ್ದರಿಂದ ನಾನು ನಿರಾಶನಾಗುವುದಿಲ್ಲ.
ಕೆಡುಕರಾದರೋ ನಿರಾಶರಾಗುವರು.
ಅವರು ಮೌನವಾಗಿ ಸಮಾಧಿಗೆ ಹೋಗುವರು.
18 ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ
ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು.
ಅವರು ದುರಹಂಕಾರಿಗಳಾಗಿದ್ದಾರೆ;
ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.
19 ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ.
ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ
ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.
20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ.
ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ;
ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.
21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ
ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ.
22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು.
ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.
23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು!
ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.
24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.
ರಚನೆಗಾರ: ದಾವೀದ.
32 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ
ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ
ಅವನೇ ಧನ್ಯನು.
2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ
ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ
ಅವನೇ ಧನ್ಯನು.
3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ
ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು;
ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.
4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು.
ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು.
ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ.
ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ.
ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.
7 ನೀನು ನನಗೆ ಆಶ್ರಯದುರ್ಗವಾಗಿರುವೆ.
ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ.
ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.
8 ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ
ಮಾರ್ಗದರ್ಶನ ನೀಡುವೆನು;
ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.
9 ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ.
ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”
10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ.
ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.
11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ.
ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.
16 ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು. 17 ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. 18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.
20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ. 21 ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.
ಪೌಲನನ್ನು ಸೆಜರೇಯಕ್ಕೆ ಕಳುಹಿಸಲಾಯಿತು
23 ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು. 24 ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು. 25 ಸೇನಾಧಿಪತಿಯು ಒಂದು ಪತ್ರವನ್ನೂ ಬರೆದನು. ಅದರಲ್ಲಿ ಹೀಗೆ ತಿಳಿಸಲಾಗಿತ್ತು:
26 ಕ್ಲಾಡಿಯ ಲೂಸಿಯನಿಂದ ಮಹಾರಾಜಶ್ರೀಗಳಾದ ರಾಜ್ಯಪಾಲ ಫೇಲಿಕ್ಸನಿಗೆ,
ವಂದನೆಗಳು.
27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು. 28 ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ. 29 ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ. 30 ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
31 ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು. 32 ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು. 33 ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.
34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು. 35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
Kannada Holy Bible: Easy-to-Read Version. All rights reserved. © 1997 Bible League International