Old/New Testament
43 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು.
ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು.
ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.
2 ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ!
ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ?
ಶತ್ರು ಬಾಧೆಯಿಂದ ನಾನೇಕೆ
ದುಃಖಿಸುತ್ತಾ ಸಂಕಟಪಡಬೇಕು?
3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ.
ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ.
ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.
4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು.
ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ.
ದೇವರೇ, ನನ್ನ ದೇವರೇ,
ಹಾರ್ಪ್ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
5 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ?
ಗಲಿಬಿಲಿಗೊಂಡಿರುವುದೇಕೆ?
ದೇವರನ್ನು ನಿರೀಕ್ಷಿಸು;
ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
ರಚನೆಗಾರರು: ಕೋರಹೀಯರು.
44 ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ
ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ.
ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.
2 ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು
ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ.
ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ.
ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
3 ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ.
ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ.
ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು.
ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು.
ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.
4 ನನ್ನ ದೇವರೇ, ನೀನೇ ನನ್ನ ರಾಜನು.
ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು.
5 ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು.
ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.
6 ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ.
ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು.
7 ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ.
ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.
8 ದಿನವೆಲ್ಲಾ ದೇವರನ್ನು ಕೊಂಡಾಡಿದೆವು.
ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು.
9 ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ.
ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ.
ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.
10 ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ.
ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು.
11 ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ;
ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.
12 ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ.
ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.
13 ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ.
ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.
14 ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ.
ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ.
15 ನಾಚಿಕೆಯು ನನ್ನನ್ನು ಕವಿದುಕೊಂಡಿದೆ.
ಅವಮಾನವು ದಿವವೆಲ್ಲಾ ನನ್ನೆದುರಿನಲ್ಲೇ ಇದೆ.
16 ನನ್ನ ವೈರಿಗಳ ಮತ್ತು ದೂಷಕರ
ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ.
17 ನಾವು ನಿನ್ನನ್ನು ಮರೆತಿಲ್ಲದಿದ್ದರೂ
ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.
18 ನಾವು ನಿನಗೆ ವಿಮುಖರಾಗದೆ
ನಿನ್ನನ್ನೇ ಹಿಂಬಾಲಿಸಿದೆವು.
19 ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ.
ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.
20 ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟೆವೋ?
ಅನ್ಯದೇವರುಗಳಿಗೆ ನಾವು ಪ್ರಾರ್ಥಿಸಿದೆವೋ? ಇಲ್ಲ!
21 ದೇವರಿಗೆ ಇವು ಖಂಡಿತವಾಗಿ ತಿಳಿದಿವೆ.
ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.
22 ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ;
ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.
23 ನನ್ನ ಒಡೆಯನೇ, ಎದ್ದೇಳು!
ನೀನು ನಿದ್ರಿಸುತ್ತಿರುವುದೇಕೆ?
ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.
24 ನೀನು ನಮಗೆ ಮರೆಯಾಗಿರುವುದೇಕೆ?
ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ?
25 ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ.
ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ.
26 ಎದ್ದು ಸಹಾಯಮಾಡು!
ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು.
ರಚನೆಗಾರರು: ಕೋರಹೀಯರು.
45 ಒಂದು ದಿವ್ಯ ವಿಷಯವನ್ನು ಹೇಳಲು
ನನ್ನ ಹೃದಯವು ತವಕಪಡುತ್ತದೆ;
ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ.
ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.
2 ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ.
ನಿನ್ನ ಮಾತುಗಳು ಮನೋಹರವಾಗಿವೆ.
ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.
3 ನಿನ್ನ ಖಡ್ಗವನ್ನು ಕಟ್ಟಿಕೊ.
ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.
4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು.
ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.
5 ನಿನ್ನ ಬಾಣಗಳು ತೀಕ್ಷ್ಣವಾಗಿವೆ.
ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ;
ಶತ್ರುಗಳು ನಿನ್ನ ಕಣ್ಣೆದುರಿನಲ್ಲೇ ನೆಲಕ್ಕುರುಳುವರು.
6 ದೇವರೇ,[a] ನಿನ್ನ ಸಿಂಹಾಸನವು ಶಾಶ್ವತವಾದದ್ದು.
ಒಳ್ಳೆಯತನವು ನಿನ್ನ ರಾಜದಂಡವಾಗಿದೆ.
7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ.
ಆದ್ದರಿಂದ ನಿನ್ನ ದೇವರಾಗಿರುವಾತನು
ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.[b]
8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ.
ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.
9 ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ,
ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.
10 ರಾಣಿಯೇ, ನನಗೆ ಕಿವಿಗೊಡು.
ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊ.
ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.
11 ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು.
ಅವನು ನಿನಗೆ ಹೊಸ ಯಜಮಾನನಾಗಿರುವನು.
ಆದ್ದರಿಂದ ನೀನು ಅವನನ್ನು ಗೌರವಿಸಬೇಕು.[c]
12 ತೂರ್ ಪಟ್ಟಣದ ಶ್ರೀಮಂತರು
ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.
13 ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು;
ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
14 ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು
ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.
15 ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ
ರಾಜನ ಅರಮನೆಯೊಳಕ್ಕೆ ಪ್ರವೇಶಿಸುವರು.
16 ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು;
ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.
17 ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು;
ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.
27 ಹದಿನಾಲ್ಕನೆಯ ರಾತ್ರಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡುತ್ತಾ ಪ್ರಯಾಣವನ್ನು ಮುಂದುವರಿಸಿದೆವು. ನಾವು ಭೂಮಿಗೆ ಸಮೀಪವಾಗಿದ್ದೇವೆಂದು ನಾವಿಕರು ಆಲೋಚಿಸಿಕೊಂಡರು. 28 ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು. 29 ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು. 30 ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು. 31 ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು. 32 ಆದ್ದರಿಂದ ಸೈನಿಕರು ಹಗ್ಗಗಳನ್ನು ಕತ್ತರಿಸಿ ದೋಣಿಯನ್ನು ನೀರುಪಾಲು ಮಾಡಿದರು.
33 ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ. 34 ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು. 35 ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು. 36-37 ಆಗ ಜನರೆಲ್ಲರೂ ಪ್ರೋತ್ಸಾಹಗೊಂಡು ತಿನ್ನತೊಡಗಿದರು. ಆ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದರು. 38 ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು.
ನೌಕೆಯ ನಾಶ
39 ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು. 40 ಆದ್ದರಿಂದ ಅವರು ಚುಕ್ಕಾಣಿಗಳನ್ನು[a] ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು. 41 ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.
42 ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು. 43 ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು. 44 ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.
Kannada Holy Bible: Easy-to-Read Version. All rights reserved. © 1997 Bible League International