Old/New Testament
94 ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು!
ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!
2 ಇಡೀಲೋಕದ ನ್ಯಾಯಾಧಿಪತಿ ನೀನೇ.
ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.
3 ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು?
ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?
4 ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ
ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು?
5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ.
ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.
6 ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ.
ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.
7 ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ.
ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.
8 ದುಷ್ಟರೇ, ನೀವು ಮೂಢರಾಗಿದ್ದೀರಿ!
ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ?
ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ!
ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.
9 ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ?
ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?
10 ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ.
ಜನರಿಗೆ ಉಪದೇಶಿಸುವವನೂ ಆತನೇ.
11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ.
ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.
12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ.
ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.
13 ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ.
ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.
14 ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ.
ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.
15 ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು.
ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.
16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ.
ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.
17 ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ,
ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18 ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ
ಆತನು ನನಗೆ ಆಧಾರ ನೀಡಿದನು.
19 ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ
ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ.
20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ.
ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.
21 ಅವರು ನೀತಿವಂತರಿಗೆ ಎದುರಾಗಿ
ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.
22 ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ.
ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!
23 ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು.
ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು.
ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.
95 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ!
ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
2 ಆತನಿಗೆ ಕೃತಜ್ಞತಾಸುತ್ತಿ ಮಾಡೋಣ.
ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
3 ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ!
ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
4 ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
5 ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ.
ಭೂಮಿಯೂ ಆತನ ಕೈಕೆಲಸವೇ.
6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ.
ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
7 ನಮ್ಮ ದೇವರು ಆತನೇ, ನಾವು ಆತನವರೇ.
ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.
8 ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ
ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು.
ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು,
ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು.
ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು
ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”
96 ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ!
ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ.
2 ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ!
ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ!
3 ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ.
ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.
4 ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ.
ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು.
5 ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ.
ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.
6 ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ.
ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ.
7 ಭೂಜನಾಂಗಗಳೇ, ಸ್ತುತಿಗೀತೆಗಳನ್ನು ಹಾಡುತ್ತಾ
ಯೆಹೋವನನ್ನು ಮಹಿಮೆಪಡಿಸಿರಿ.
8 ಯೆಹೋವನ ಹೆಸರನ್ನು ಸ್ತುತಿಸಿರಿ.
ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ.
9 ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ.
ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.
10 ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ.
ಭೂಮಿಯು ಸ್ಥಿರವಾಗಿರುವುದು.
ಯೆಹೋವನೇ ನೀತಿಯಿಂದ ಅದನ್ನು ಆಳುವನು.
11 ಆಕಾಶಮಂಡಲವೇ, ಸಂತೋಷಪಡು!
ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!
12 ಹೊಲಗಳೇ ಮತ್ತು ಅವುಗಳ ಮೇಲೆ ಬೆಳೆದಿರುವ ಸಮಸ್ತವೇ, ಸಂತೋಷದಿಂದಿರಿ!
ಅರಣ್ಯದ ಮರಗಳೇ, ಹಾಡಿರಿ ಮತ್ತು ಸಂತೋಷಪಡಿರಿ!
13 ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ.
ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.
ತನ್ನ ಸೇವೆಯ ಬಗ್ಗೆ ಪೌಲನ ವಿವರಣೆ
14 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ. 15 ನೀವು ಜ್ಞಾಪಕದಲ್ಲಿ ಇಟ್ಟುಕೊಳ್ಳಬೇಕೆಂದು ನಾನು ಅಪೇಕ್ಷಿಸಿದ ಕೆಲವು ಸಂಗತಿಗಳನ್ನು ನಾನು ನಿಮಗೆ ಧೈರ್ಯವಾಗಿ ಬರೆದಿರುವೆ. ಕ್ರಿಸ್ತ ಯೇಸುವಿನ ಸೇವಕ ಎಂಬ ವಿಶೇಷವಾದ ವರವನ್ನು ದೇವರು ನನಗೆ ಕೊಟ್ಟಿರುವುದರಿಂದ ನಾನು ಹೀಗೆ ಬರೆದಿದ್ದೇನೆ. 16 ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
17 ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಾನು ದೇವರಿಗೋಸ್ಕರ ಮಾಡುವ ಕಾರ್ಯಗಳ ಬಗ್ಗೆ ಹೆಮ್ಮೆಪಡುತ್ತೇನೆ. 18 ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ. 19 ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ. 20 ಕ್ರಿಸ್ತನ ಬಗ್ಗೆ ಜನರು ಎಂದೂ ಕೇಳಿಲ್ಲದ ಸ್ಥಳಗಳಲ್ಲಿ ಸುವಾರ್ತೆಯನ್ನು ಬೋಧಿಸಲು ನಾನು ಯಾವಾಗಲೂ ಅಪೇಕ್ಷಿಸುತ್ತೇನೆ; ಏಕೆಂದರೆ ಮತ್ತೊಬ್ಬನು ಆಗಲೇ ಆರಂಭಿಸಿರುವ ಕೆಲಸದ ಮೇಲೆ ಕಟ್ಟಲು ನನಗೆ ಇಷ್ಟವಿಲ್ಲ. 21 ಆದರೆ ಇದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ:
“ಆತನ ಬಗ್ಗೆ ತಿಳಿಯದ ಜನರು ಆತನನ್ನು (ಕ್ರಿಸ್ತನನ್ನು) ನೋಡುವರು.
ಆತನ ಬಗ್ಗೆ ಕೇಳಿಲ್ಲದ ಜನರು ಆತನನ್ನು ಅರ್ಥಮಾಡಿಕೊಳ್ಳುವರು.”(A)
ರೋಮಿಗೆ ಹೋಗಲು ಪೌಲನ ಯೋಜನೆ
22 ಈ ಕಾರಣದಿಂದಲೇ, ನಿಮ್ಮ ಬಳಿಗೆ ಬಾರದಂತೆ ನನಗೆ ಅನೇಕ ಸಲ ಅಡಚಣೆ ಆಯಿತು.
23 ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮಾಡಿ ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಾನು ನಿಮ್ಮ ಬಳಿಗೆ ಬರಬೇಕೆಂದಿದ್ದೆ. 24 ಆದ್ದರಿಂದ ನಾನು ಸ್ಪೇನಿಗೆ ಹೋಗುವಾಗ ನಿಮ್ಮನ್ನು ಸಂದರ್ಶಿಸುತ್ತೇನೆ. ಹೌದು, ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ ನಿಮ್ಮನ್ನು ಸಂದರ್ಶಿಸಿ, ಸ್ವಲ್ಪಕಾಲ ನಿಮ್ಮೊಂದಿಗೆ ಸಂತೋಷವಾಗಿ ತಂಗಿರುತ್ತೇನೆಂಬ ನಿರೀಕ್ಷೆ ನನಗಿದೆ. ಬಳಿಕ ನೀವು ನನ್ನ ಪ್ರಯಾಣಕ್ಕೆ ಸಹಾಯ ಮಾಡಬಹದು.
25 ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ. 26 ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ. 27 ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ. 28 ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು.
ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು. 29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂದು ಬಲ್ಲೆನು.
30 ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ. 31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ. 32 ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ. 33 ಶಾಂತಿಯನ್ನು ಕೊಡುವ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
Kannada Holy Bible: Easy-to-Read Version. All rights reserved. © 1997 Bible League International