Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 100-102

ಕೃತಜ್ಞತಾ ಸ್ತುತಿಗೀತೆ.

100 ಸಮಸ್ತ ಭೂನಿವಾಸಿಗಳೇ,
    ಯೆಹೋವನಿಗೆ ಗಾಯನ ಮಾಡಿರಿ!
ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ;
    ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
    ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು.
    ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.
ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ.
    ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ.
    ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
ಯೆಹೋವನು ಒಳ್ಳೆಯವನು!
    ಆತನ ಪ್ರೀತಿಯು ಶಾಶ್ವತವಾದದ್ದು,
    ಆತನ ನಂಬಿಗಸ್ತಿಕೆಯು ನಿರಂತರವಾದದ್ದು.

ರಚನೆಗಾರ: ದಾವೀದ.

101 ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು.
    ಯೆಹೋವನೇ, ನಿನಗೆ ಗಾಯನ ಮಾಡುವೆನು.
ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು;
    ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು.
    ನೀನು ನನ್ನ ಬಳಿಗೆ ಬರುವುದು ಯಾವಾಗ?
ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ.
    ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ.
    ನಾನು ಅವರಂತೆ ಮಾಡುವುದಿಲ್ಲ!
ನಾನು ನಿನಗೆ ಯಥಾರ್ಥನಾಗಿರುವೆನು;
    ದುಷ್ಕೃತ್ಯಗಳನ್ನು ಮಾಡುವುದಿಲ್ಲ.
ನೆರೆಯವನ ಕುರಿತು ಗುಟ್ಟಾಗಿ
    ಚಾಡಿ ಹೇಳುವವನನ್ನು ನಾನು ತಡೆಯುವೆನು.
ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ
    ನಾನು ಅವರಿಗೆ ಅವಕಾಶ ಕೊಡುವುದಿಲ್ಲ.

ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ.
    ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು.
    ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.
ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ.
    ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.
ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ.
    ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.

ಹಿಂಸೆ ಸಂಕಟಗಳಲ್ಲಿರುವವನ ಪ್ರಾರ್ಥನೆ.

102 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು.
    ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.
ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು.
    ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ.
    ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.
ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ.
    ನಾನು ಊಟವನ್ನೂ ಮರೆತುಬಿಡುವೆನು.
ದೀರ್ಘ ದುಃಖದಿಂದಾಗಿ
    ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.
ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ.
    ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.
ನನಗೆ ನಿದ್ರೆಯೂ ಬಾರದು.
    ಮೇಲ್ಛಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.
ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು.
    ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.
ನನ್ನ ದುಃಖವೇ ನನಗೆ ಆಹಾರವಾಯಿತು.
    ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.
10 ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ.
    ನೀನು ನನ್ನನ್ನು ಮೇಲೆತ್ತಿ ಎಸೆದುಬಿಟ್ಟೆಯಲ್ಲಾ!

11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ.
    ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.
12 ಯೆಹೋವನೇ, ನೀನಾದರೋ ಎಂದೆಂದಿಗೂ ಜೀವಿಸುವೆ!
    ನಿನ್ನ ಹೆಸರು ಶಾಶ್ವತವಾದದ್ದು!
13 ನೀನು ಎದ್ದು ಚೀಯೋನನ್ನು ಸಂತೈಸುವೆ.
    ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.
14 ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು.
    ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!
15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ.
    ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.
16 ಯಾಕೆಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು.
    ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.
17 ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು.
    ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.
18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ.
    ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.
19 ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ.
    ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.
20 ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ.
    ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.
21 ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು:
ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು.
22     ಜನಾಂಗಗಳು ಒಟ್ಟುಗೂಡಿ ಬರುವವು.
    ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು.

23 ನನ್ನ ಬಲವು ಕುಂದಿಹೋಯಿತು.
    ನನ್ನ ಆಯುಷ್ಕಾಲವು ಕಡಿಮೆಯಾಯಿತು.
24 ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ.
    ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!
25 ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ.
    ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!
26 ಲೋಕವೂ ಆಕಾಶವೂ ಕೊನೆಗೊಳುತ್ತವೆ.
    ನೀನಾದರೊ ಶಾಶ್ವತವಾಗಿರುವೆ!
ಅವು ಬಟ್ಟೆಗಳಂತೆ ಹಳೆಯದಾಗುತ್ತವೆ.
    ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ.
    ಅವುಗಳೆಲ್ಲಾ ಬದಲಾಗುತ್ತವೆ.
27 ದೇವರೇ, ನೀನಾದರೋ ಎಂದಿಗೂ ಬದಲಾಗುವುದಿಲ್ಲ.
    ನೀನು ಎಂದೆಂದಿಗೂ ಜೀವಿಸುವೆ!
28 ನಾವು ನಿನ್ನ ಸೇವಕರಾಗಿದ್ದೇವೆ.
    ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ;
    ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”

1 ಕೊರಿಂಥದವರಿಗೆ 1

ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ.

ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.

ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.

ಪೌಲನು ದೇವರಿಗೆ ಸಲ್ಲಿಸುವ ಕೃತಜ್ಞತಾಸ್ತುತಿ

ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ. ಕ್ರಿಸ್ತನ ವಿಷಯವಾದ ಸತ್ಯವು ನಿಮ್ಮಲ್ಲಿ ನಿರೂಪಿಸಲ್ಪಟ್ಟಿದೆ. ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ. ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ. ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.

ಕೊರಿಂಥ ಸಭೆಯಲ್ಲಿ ಸಮಸ್ಯೆಗಳು

10 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

11 ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು. 12 ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ. 13 ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ! 14 ನಿಮ್ಮಲ್ಲಿ ಕ್ರಿಸ್ಪನು ಮತ್ತು ಗಾಯನು ಇವರ ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಮಾಡಿಸಿಲ್ಲವಾದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 15 ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವುದಾಗಿ ಹೇಳಲು ನಿಮ್ಮಲ್ಲಿ ಯಾರಿಗೂ ಈಗ ಸಾಧ್ಯವಿಲ್ಲವಾದ್ದರಿಂದ ನಾನು ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. 16 (ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.) 17 ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.

ದೇವರ ಶಕ್ತಿ ಮತ್ತು ಕ್ರಿಸ್ತನ ಜ್ಞಾನ

18 ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ. 19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:

“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು.
ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”(A)

20 ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ. 21 ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.

22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ. 23 ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ. 24 ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ. 25 ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.

26 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ. 27 ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ. 28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು. 29 ಹೀಗಿರಲು ದೇವರ ಮುಂದೆ ಹೆಮ್ಮೆಪಡಲು ಯಾರಿಗೂ ಆಸ್ಪದವಿಲ್ಲ. 30 ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ. 31 ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, “ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International