Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಯೆಶಾಯ 3-4

ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು. ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು. ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.

ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು. ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”

ಆ ಸಮಯದಲ್ಲಿ ಒಬ್ಬನು ತನ್ನ ಸ್ವಂತ ಕುಟುಂಬದ ಸಹೋದರನನ್ನು ಹಿಡಿದು, “ನಿನಗೆ ನಿಲುವಂಗಿಯದೆ. ಆದ್ದರಿಂದ ನೀನು ನಮಗೆ ನಾಯಕನಾಗು. ಈ ಅವಶೇಷಗಳೆಲ್ಲಾ ನಿನಗೆ ಅಧೀನವಾಗಿರಲಿ” ಎಂದು ಹೇಳುವರು.

ಆದರೆ ಆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು.

ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.

ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.

10 ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು. 11 ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು. 12 ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು.

ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.

ದೇವರು ತನ್ನ ಜನರ ಬಗ್ಗೆ ಮಾಡಿದ ತೀರ್ಮಾನ

13 ಯೆಹೋವನು ತನ್ನ ಜನರಿಗೆ ನ್ಯಾಯತೀರಿಸಲು ಎದ್ದುನಿಂತಿದ್ದಾನೆ. 14 ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು.

ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ. 15 ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.

16 ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”

17 ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು. 18 ಆ ಸಮಯದಲ್ಲಿ ಆತನು ಅವರ ಎಲ್ಲಾ ವಸ್ತುಗಳನ್ನು ಅವರಿಂದ ತೆಗೆದುಬಿಡುವನು. ಅವರ ಕಾಲುಸರಗಳನ್ನು, ಸೂರ್ಯಚಂದ್ರಾಕಾರದ ಕೊರಳಿನ ಸರಗಳನ್ನು, 19 ಕಿವಿಯೋಲೆಗಳನ್ನು, ಕೈಬಳೆಗಳನ್ನು, ಸೆರಗುವಸ್ತ್ರಗಳನ್ನು, 20 ರುಮಾಲುಗಳನ್ನು, ಸೊಂಟಪಟ್ಟಿಯನ್ನು, ಪರಿಮಳದ್ರವ್ಯವನ್ನು, ತಾಯಿತಿಗಳನ್ನು, 21 ಮುದ್ರೆಯುಂಗುರವನ್ನು ಮತ್ತು ಮೂಗುತಿಗಳನ್ನು ತೆಗೆದುಬಿಡುವನು. 22 ಅವರ ನಯವಾದ ಮೇಲಂಗಿಗಳನ್ನು, ಮೇಲ್ಹೊದಿಕೆಗಳನ್ನು, ಶಾಲುಗಳನ್ನು, ಕೈಚೀಲಗಳನ್ನು, 23 ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.

24 ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.

25 ಆ ಸಮಯದಲ್ಲಿ ನಿಮ್ಮ ಗಂಡಸರೆಲ್ಲಾ ಖಡ್ಗದಿಂದ ಹತರಾಗುವರು. ನಿಮ್ಮ ವೀರರೆಲ್ಲರೂ ಯುದ್ಧದಲ್ಲಿ ಮಡಿಯುವರು. 26 ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.

ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.

ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು. ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.

ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು. ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು. ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು.

ಗಲಾತ್ಯದವರಿಗೆ 6

ಒಬ್ಬರಿಗೊಬ್ಬರು ಸಹಾಯ ಮಾಡಿರಿ

ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ. ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ. ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು. ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು. ಪ್ರತಿಯೊಬ್ಬನು ತನ್ನ ಜವಾಬ್ದಾರಿಕೆಯನ್ನು ತಾನೇ ಹೊತ್ತುಕೊಳ್ಳಬೇಕು.

ಜೀವನವು ಜಮೀನಿನಲ್ಲಿ ಬಿತ್ತುವಂತಿದೆ

ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.

ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ. ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು. ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು. 10 ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.

ಪೌಲನ ಕಡೇ ಮಾತುಗಳು

11 ಇದನ್ನು ನಾನೇ ಕೈಯಾರೆ ಬರೆಯುತ್ತಿದ್ದೇನೆ. ನಾನು ಎಷ್ಟು ದೊಡ್ಡ ಅಕ್ಷರಗಳಲ್ಲಿ ಬರೆಯುತ್ತಿದ್ದೇನೆಂಬುದನ್ನು ನೋಡಿರಿ. 12 ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ. 13 ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.

14 ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು. 15 ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.[a] 16 ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.

17 ಆದ್ದರಿಂದ ಇನ್ನು ಮೇಲೆ ನನಗೆ ತೊಂದರೆ ಕೊಡಬೇಡಿ. ನನ್ನ ದೇಹದ ಮೇಲೆ ಬಾಸುಂಡೆಯ ಗುರುತುಗಳಿವೆ. ನಾನು ಕ್ರಿಸ್ತನವನೆಂಬುದಕ್ಕೆ ಈ ಗುರುತುಗಳೇ ಸಾಕ್ಷಿ.

18 ನನ್ನ ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲೆಂದು ಪ್ರಾರ್ಥಿಸುತ್ತೇನೆ. ಆಮೆನ್.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International