Print Page Options
Previous Prev Day Next DayNext

Old/New Testament

Each day includes a passage from both the Old Testament and New Testament.
Duration: 365 days
Kannada Holy Bible: Easy-to-Read Version (KERV)
Version
ಜೆಕರ್ಯ 1-4

ತನ್ನ ಜನರು ಹಿಂದಿರುಗಿ ಬರಬೇಕೆಂದು ಯೆಹೋವನು ಆಶಿಸುತ್ತಾನೆ

ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:

ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ. ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.

ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.

ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರು ದಾಟಿಹೋದರು. ಆ ಪ್ರವಾದಿಗಳು ನಿತ್ಯಕಾಲಕ್ಕೂ ಜೀವಿಸಲಿಲ್ಲ. ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”

ನಾಲ್ಕು ಕುದುರೆಗಳು

ಪರ್ಶಿಯದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ (ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಆ ಸಂದೇಶವು ಹೀಗಿತ್ತು.

ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು. ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು.

ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.

10 ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.

11 ಆಗ ಯೆಹೋವನ ದೂತನೊಂದಿಗೆ ಆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.

12 ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.

13 ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.

14 ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ,

“ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.
15     ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು.
ನಾನು ಸ್ವಲ್ಪ ಕೋಪಗೊಂಡಿದ್ದರಿಂದ
    ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು.
    ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”
16 ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.”
    ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”

17 ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ:
    ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು.
ಚೀಯೋನನ್ನು ನಾನು ಸಂತೈಸುವೆನು.
    ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು’” ಎಂದನು.

ನಾಲ್ಕುಕೊಂಬುಗಳೂ ನಾಲ್ಕು ಕೆಲಸಗಾರರೂ

18 ಆಗ ನಾನು ಮೇಲೆ ನೋಡಿದಾಗ ನಾಲ್ಕು ಕೊಂಬುಗಳನ್ನು ಕಂಡೆನು. 19 “ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು.

ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿಹೋಗುವಂತೆ ಮಾಡಿವೆ” ಅಂದನು.

20 ಯೆಹೋವನು ನನಗೆ ನಾಲ್ಕು ಮಂದಿ ಕೆಲಸಗಾರರನ್ನು ತೋರಿಸಿದನು. 21 “ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು.

ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.

ಜೆರುಸಲೇಮನ್ನು ಅಳತೆ ಮಾಡಿದ್ದು

ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು. “ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು.

“ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.

ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು. ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು:

‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು.
    ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’
ಯೆಹೋವನು ಹೇಳುವುದೇನೆಂದರೆ,
‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು.
    ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”

ತಮ್ಮ ಮನೆಗೆ ಬರಲು ದೇವರು ತನ್ನ ಜನರನ್ನು ಕರೆಯುತ್ತಾನೆ

ಯೆಹೋವನು ಹೀಗೆನ್ನುತ್ತಾನೆ,
“ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ.
    ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.
ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ.
    ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ಆ ನಗರದಿಂದ ಓಡಿಹೋಗಿರಿ.”
ಇದು ಸರ್ವಶಕ್ತನಾದ ಯೆಹೋವನ ನುಡಿ.
“ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು.
    ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು.
ಯಾಕೆಂದರೆ, ನಿಮಗೆ ಹಾನಿ ಮಾಡಿದರೆ
    ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.
ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು.
    ಆದರೆ ನಾನು ಅವರನ್ನು ಹೊಡೆಯುವೆನು.
    ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.”
ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.

10 ಯೆಹೋವನು ಹೀಗೆನ್ನುತ್ತಾನೆ,
“ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು
    ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.
11 ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು
    ನನ್ನನ್ನು ನೋಡಲು ಬರುವರು.
ಅವರು ನನ್ನ ಜನರಾಗುವರು.
    ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.”
ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು
    ನಿಮಗೆ ಗೊತ್ತಾಗುವುದು.

12 ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು.
    ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.
13 ಎಲ್ಲರೂ ಮೌನವಾಗಿರಿ.
    ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.

ಪ್ರಧಾನ ಯಾಜಕನು

ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು. ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”

ಯೆಹೋಶುವನು ದೂತನ ಮುಂದೆ ನಿಂತುಕೊಂಡಿದ್ದನು. ಅವನ ವಸ್ತ್ರವು ಮಲಿನವಾಗಿತ್ತು. ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು. ಆಗ ಯೆಹೋವನ ದೂತನು ಯೆಹೋಶುವನಿಗೆ ಹೀಗೆ ಹೇಳಿದನು.

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ,
“ನಾನು ಹೇಳುವ ರೀತಿಯಲ್ಲಿ ಜೀವಿಸು.
    ನಾನು ಹೇಳುವ ರೀತಿಯಲ್ಲಿ ನಡೆ.
ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ.
    ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ.
ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.
ಪ್ರಧಾನ ಯಾಜಕನಾದ ಯೆಹೋಶುವನೇ,
    ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ.
ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ.
    ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು.
    ಆತನ ಹೆಸರು ಕೊಂಬೆ.
ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು.
    ಆ ಕಲ್ಲಿನಲ್ಲಿ ಏಳು ಬದಿಗಳಿವೆ.
ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು.
    ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ:
“ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ
    ಕುಳಿತುಕೊಂಡು ಸಂಭಾಷಿಸುವರು.
ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ
    ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”

ದೀಪಸ್ತಂಭವೂ, ಎರಡು ಆಲೀವ್ ಮರಗಳೂ

ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಬಂದು ನನ್ನನ್ನೆಬ್ಬಿಸಿದನು. ನಾನು ನಿದ್ರೆಯಿಂದ ಎದ್ದೇಳುವವನಂತೆ ಇದ್ದೆನು. ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು.

ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು. ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲಬದಿಯಲ್ಲಿಯೂ ಇನ್ನೊಂದು ಎಡಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರು ಮಾಡುತ್ತಿದ್ದವು.” ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.

ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?”

ನಾನು, “ಇಲ್ಲ” ಅಂದೆನು.

ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ. ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”

ನನಗೆ ಯೆಹೋವನ ಸಂದೇಶವೂ ಸಹ ಹೀಗೆ ಹೇಳಿತು: “ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ. 10 ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”

11 ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು. 12 ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.

13 ಆಗ ದೇವದೂತನು ಹೇಳಿದ್ದೇನೆಂದರೆ, “ಇವು ಏನನ್ನು ಸೂಚಿಸುತ್ತವೆ ಎಂದು ನಿನಗೆ ತಿಳಿಯದೋ?”

ಅದಕ್ಕೆ ನಾನು, “ಇಲ್ಲ” ಅಂದೆನು.

14 ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.

ಪ್ರಕಟನೆ 18

ಬಾಬಿಲೋನ್ ನಾಶವಾಯಿತು

18 ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು. ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು:

“ಅವಳು ನಾಶವಾದಳು!
    ಬಾಬಿಲೋನೆಂಬ ಮಹಾನಗರಿಯು ನಾಶವಾದಳು!
ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು,
    ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು,
    ಅಶುದ್ಧವಾದ ಮತ್ತು ಅಸಹ್ಯವಾದ
    ಸಕಲ ಹಕ್ಕಿಗಳಿಗೆ ಆಶ್ರಯವಾದಳು.”
ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು.
ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು.
    ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.

ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು:

“ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ.
    ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ;
    ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.
ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ.
    ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.
ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ.
    ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ.
ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ
    ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.
ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು.
    ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ.
‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ.
    ನಾನು ವಿಧವೆಯಲ್ಲ,
    ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.
ಆದ್ದರಿಂದ ಅವಳಿಗೆ ಮರಣ, ಗೋಳಾಟ,
    ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ.
ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು
    ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”

ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು. 10 ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು:

‘ಅಯ್ಯೋ, ಅಯ್ಯೋ, ಮಹಾನಗರಿಯೇ,
    ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ,
ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’

11 “ಭೂಲೋಕದ ವರ್ತಕರು ಬಾಬಿಲೋನಿನ ವಿಷಯದಲ್ಲಿ ಗೋಳಾಡುವರು ಮತ್ತು ದುಃಖಿಸುವರು. ಅವರು ಮಾರುವ ವಸ್ತುಗಳನ್ನು ಕೊಂಡುಕೊಳ್ಳಲು ಯಾರೂ ಇಲ್ಲದಿರುವುದರಿಂದ ಅವರು ದುಃಖಿಸುವರು. 12 ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ. 13 ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:

14 ‘ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು.
ನಿನ್ನಲ್ಲಿದ್ದ ಶ್ರೀಮಂತಿಕೆಯ ಮತ್ತು ಅಲಂಕಾರಿಕ ವಸ್ತುಗಳೆಲ್ಲ ಅದೃಶ್ಯವಾಗಿಬಿಟ್ಟವು.
    ಅವುಗಳನ್ನು ಮತ್ತೆ ನೀನೆಂದಿಗೂ ಪಡೆಯುವುದಿಲ್ಲ.’

15 “ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ. 16 ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು:

‘ಅಯ್ಯೋ, ಅಯ್ಯೋ, ಮಹಾನಗರಿಯೇ!
    ಅವಳು ನಯವಾದ ನಾರುಮಡಿಯನ್ನು,
    ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು.
    ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!
17 ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’

“ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು 18 ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು. 19 ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು:

‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು!
    ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು!
    ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!
20 ಪರಲೋಕವೇ, ಇದರಿಂದ ನೀನೂ ಸಂತೋಷಪಡು!
    ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ!
ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”

21 ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು:

“ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು.
    ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.
22 ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು
    ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ.
ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ.
    ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.
23 ದೀಪದ ಬೆಳಕು ಇನ್ನೆಂದಿಗೂ
    ನಿನ್ನಲ್ಲಿ ಪ್ರಕಾಶಿಸುವುದಿಲ್ಲ.
ವಧೂವರರ ಧ್ವನಿಯು ಇನ್ನೆಂದಿಗೂ
    ನಿನ್ನಲ್ಲಿ ಕೇಳಿಬರುವುದಿಲ್ಲ.
ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು.
    ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.
24 ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ
    ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International