Revised Common Lectionary (Complementary)
23 ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು.
ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!
24 ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು;
ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು.
25 ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
26 ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ
ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.
27 ಯೌವನದಲ್ಲೇ ಸಂಕಟದ ನೊಗವನ್ನು
ಹೊರುವುದು ಮನುಷ್ಯನಿಗೆ ಒಳ್ಳೆಯದು.
28 ಯೆಹೋವನು ಈ ಸಂಕಟದ ನೊಗವನ್ನು
ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು.
29 ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು.
ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.
30 ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು.
ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.
31 ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ
ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.
32 ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ.
ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.
33 ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ.
ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ.
ದೇವಾಲಯದ ಪ್ರತಿಷ್ಠೆಗಾಗಿ ರಚಿಸಲ್ಪಟ್ಟಿದೆ. ರಚನೆಗಾರ: ದಾವೀದ.
30 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ;
ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ;
ಆದ್ದರಿಂದ ನಿನ್ನನ್ನು ಕೊಂಡಾಡುವೆನು.
2 ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ
ನೀನು ನನ್ನನ್ನು ಗುಣಪಡಿಸಿದೆ.
3 ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ;
ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.[a]
4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ!
ಆತನ ಪರಿಶುದ್ಧ ಹೆಸರನ್ನು[b] ಕೊಂಡಾಡಿರಿ.
5 ಆತನ ಕೋಪವು ಕ್ಷಣಮಾತ್ರವಿರುವುದು.
ಆತನ ಪ್ರೀತಿಯಾದರೋ ಶಾಶ್ವತವಾದದ್ದು.
ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ
ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.
6 ನಾನು ಸುರಕ್ಷಿತವಾಗಿದ್ದಾಗ
ನನಗೆ ಕೇಡೇ ಇಲ್ಲವೆಂದುಕೊಂಡೆನು.
7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ
ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು.
ಆದರೆ ನೀನು ನನಗೆ ವಿಮುಖನಾದಾಗ
ಭಯದಿಂದ ನಡುಗತೊಡಗಿದೆ.
8 ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ;
ಕರುಣೆತೋರು ಎಂದು ನಿನ್ನನ್ನು ಕೇಳಿಕೊಂಡೆ.
9 “ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ,
ಅದರಿಂದ ಒಳ್ಳೆಯದೇನಾದೀತು?
ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು!
ಅವರು ನಿನ್ನನ್ನು ಸ್ತುತಿಸುವುದಿಲ್ಲ!
ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು!
ಯೆಹೋವನೇ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡೆನು.
11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು
ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ.
ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ
ಹರ್ಷವಸ್ತ್ರಗಳನ್ನು ಹೊದಿಸಿದೆ.
12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು.
ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.
7 ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.
8 ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ. 9 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.
10 ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ. 11 ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ. 12 ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ. 13 ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ. 14 ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು. 15 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು,
“ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ,
ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.”(A)
ಸತ್ತು ಹೋಗಿದ್ದ ಹುಡುಗಿಯೊಬ್ಬಳಿಗೆ ಜೀವದಾನ ಕಾಯಿಲೆಯ ಸ್ತ್ರೀಗೆ ಆರೋಗ್ಯದಾನ
(ಮತ್ತಾಯ 9:18-26; ಲೂಕ 8:40-56)
21 ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು. 22 ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, 23 “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.
24 ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.
25 ಆ ಜನರ ನಡುವೆ ಒಬ್ಬ ಸ್ತ್ರೀ ಇದ್ದಳು. ಆಕೆಗೆ ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿತ್ತು. 26 ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.
27 ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು. 28 ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ 29 ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು. 30 ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು.
31 ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.
32 ಆದರೆ ಯೇಸು ತನ್ನನ್ನು ಸ್ಪರ್ಶಿಸಿದವರು ಯಾರೆಂದು ಇನ್ನೂ ನೋಡುತ್ತಲೇ ಇದ್ದನು. 33 ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು. 34 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.
35 ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
36 ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
37 ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು. 38 ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು. 39 ಯೇಸು ಮನೆಯನ್ನು ಪ್ರವೇಶಿಸಿ, ಆ ಜನರಿಗೆ, “ನೀವು ಅಳುತ್ತಿರುವುದೇಕೆ? ಇಷ್ಟೊಂದು ಗದ್ದಲ ಮಾಡುತ್ತಿರುವುದೇಕೆ? ಈ ಹುಡುಗಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಎಂದು ಹೇಳಿದನು. 40 ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು.
ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು. 41 ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.) 42 ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು. 43 ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.
Kannada Holy Bible: Easy-to-Read Version. All rights reserved. © 1997 Bible League International