Revised Common Lectionary (Complementary)
8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು.
ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು.
ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ.
ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ.
ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು.
ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.[a]
12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು.
ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
13 ನೀತಿಯು ಆತನ ಮುಂದೆ ಹೋಗುತ್ತಾ
ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.
6 “ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.
7 “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು. 8 ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.
9 “ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
10 “ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
11 “ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
12 “ಆದ್ದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ ಈ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ, ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೊ.”
13 ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು.
ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ.
ನಾನು ಜನರಿಗೆ ಮಾತನಾಡಲು ಕಲಿಸಿದೆನು.
ಕತ್ತಲೆಯನ್ನು ಬೆಳಕು ಮಾಡಿದೆನು.
ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ.
ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.
ಯೋಹಾನನ ಜನನ
57 ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು. 58 ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
59 ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು. 60 ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.
61 ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು. 62 ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.
63 ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು. 64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು. 65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು. 66 ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
ಜಕರೀಯನ ಪ್ರವಾದನೆ
67 ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
70 ಇದನ್ನು ಆತನು ಪೂರ್ವಕಾಲದ
ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.
76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
78 “ನಮ್ಮ ದೇವರ ಮಹಾಕರುಣೆಯಿಂದ
ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”
80 ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
Kannada Holy Bible: Easy-to-Read Version. All rights reserved. © 1997 Bible League International