Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 142

ದಾವೀದನು ಗುಹೆಯಲ್ಲಿದ್ದಾಗ ಮಾಡಿದ ಪ್ರಾರ್ಥನೆ. ರಚನೆಗಾರ: ದಾವೀದ.

142 ನಾನು ಯೆಹೋವನಿಗೆ ಮೊರೆಯಿಡುವೆನು;
    ಯೆಹೋವನನ್ನು ಕೂಗಿಕೊಳ್ಳುವೆನು.
ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ
    ಆತನಿಗೆ ಅರಿಕೆಮಾಡಿಕೊಳ್ಳುವೆನು.
ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ.
    ನನ್ನ ಆತ್ಮವು ಕುಂದಿಹೋಗಿದೆ.
    ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.

ನಾನು ಸುತ್ತಮುತ್ತ ನೋಡಿದರೂ
    ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ.
ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ.
    ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.
ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು.
    ನನ್ನ ಆಶ್ರಯಸ್ಥಾನವೂ ನೀನೇ,
    ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.
ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು.
    ನೀನು ನನಗೆ ಬೇಕೇಬೇಕು.
ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
    ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು.
    ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು.
ನೀನು ನನ್ನನ್ನು ಕಾಪಾಡಿದ್ದರಿಂದ
    ನೀತಿವಂತರು ನನ್ನೊಂದಿಗೆ ಕೊಂಡಾಡುವರು.

ಆಮೋಸ 5:1-9

ಇಸ್ರೇಲಿಗಾಗಿ ದುಃಖದ ಗೀತೆ

ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.

ಇಸ್ರೇಲ್ ಕುಮಾರಿಯು ಬಿದ್ದಳು.
    ಇನ್ನೆಂದಿಗೂ ಆಕೆ ಏಳುವದಿಲ್ಲ.
ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ.
    ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.

ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ.

“ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ
    ನೂರು ಮಂದಿಯೊಂದಿಗೆ ಹಿಂದಿರುಗುವರು.
ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ
    ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.”

ಇಸ್ರೇಲರು ಮರಳಿ ಬರುವಂತೆ ಯೆಹೋವನ ಆಗ್ರಹ

ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ:
“ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.
    ಆದರೆ ಬೇತೇಲಿನಲ್ಲಿ ಹುಡುಕಬೇಡ,
ಗಿಲ್ಗಾಲಿನಲ್ಲಿ ಕಾಲಿಡಬೇಡ.
    ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ.
ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು.
    ಮತ್ತು ಬೇತೇಲ್ ನಾಶಮಾಡಲ್ಪಡುವದು.
ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ.
    ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು.
    ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು.
    ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.
7-9 ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು.
    ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ.
ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ.
    ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ.
ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ.
    ಆತನ ಹೆಸರು ಯೆಹೋವನು.
ಆತನು ಒಂದು ಬಲವಾದ ನಗರವನ್ನು ರಕ್ಷಿಸಿ
    ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.”

ಇಸ್ರೇಲರು ನಡಿಸಿದ ದುಷ್ಕೃತ್ಯ

ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ.
    ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.

ಅಪೊಸ್ತಲರ ಕಾರ್ಯಗಳು 21:27-39

27 ಆ ಏಳು ದಿನಗಳ ಅವಧಿ ಮುಗಿಯುವುದರಲ್ಲಿತ್ತು. ಆದರೆ ಏಷ್ಯಾದಿಂದ ಬಂದಿದ್ದ ಕೆಲವು ಯೆಹೂದ್ಯರು ಪೌಲನನ್ನು ಕಂಡು ಜನಸಮೂಹವನ್ನು ಉದ್ದೇಶಿಸಿ, 28 “ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು. 29 (ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)

30 ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. 31 ಅವರು ಪೌಲನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾಗ ಇಡೀ ಪಟ್ಟಣದಲ್ಲೇ ಗಲಭೆಯುಂಟಾಗಿದೆ ಎಂಬ ಸುದ್ದಿಯು ಜೆರುಸಲೇಮಿನಲ್ಲಿದ್ದ ರೋಮ್ ಸೇನಾಧಿಪತಿಗೆ ತಿಳಿಯಿತು. 32 ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.

33 ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು. 34 ಅಲ್ಲಿದ್ದ ಜನರಲ್ಲಿ ಕೆಲವರು ಒಂದು ವಿಷಯದ ಬಗ್ಗೆ ಬೊಬ್ಬೆಹಾಕುತ್ತಿದ್ದರೆ, ಉಳಿದವರು ಇತರ ವಿಷಯಗಳ ಬಗ್ಗೆ ಬೊಬ್ಬೆಹಾಕುತ್ತಿದ್ದರು. ಈ ಗಲಿಬಿಲಿಯಿಂದಾಗಿಯೂ ಕೂಗಾಟದಿಂದಾಗಿಯೂ ಏನು ನಡೆಯಿತೆಂಬುದರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಲಾಗಲಿಲ್ಲ. ಆದ್ದರಿಂದ ಸೇನಾಧಿಪತಿಯು ಪೌಲನನ್ನು ಸೈನ್ಯದ ಕೋಟೆಯೊಳಕ್ಕೆ ತೆಗೆದುಕೊಂಡು ಹೋಗಲು ಸೈನಿಕರಿಗೆ ತಿಳಿಸಿದನು. 35-36 ಎಲ್ಲಾ ಜನರು ಅವರನ್ನು ಹಿಂಬಾಲಿಸಿದರು. ಸೈನಿಕರು ಮೆಟ್ಟಿಲುಗಳ ಬಳಿಗೆ ಬಂದಾಗ ಪೌಲನನ್ನು ರಕ್ಷಿಸಲು ಹೊತ್ತುಕೊಂಡು ಹೋದರು. ಯಾಕೆಂದರೆ ಅವನಿಗೆ ಕೇಡುಮಾಡಲು ಸಿದ್ಧರಾಗಿದ್ದ ಜನರು, “ಅವನನ್ನು ಕೊಲ್ಲಿರಿ!” ಎಂದು ಕೂಗುತ್ತಿದ್ದರು.

37 ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು.

ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ? 38 ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.

39 ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International