Revised Common Lectionary (Complementary)
ರಚನೆಗಾರ: ದಾವೀದ.
15 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು?
ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ
ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ
ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
4 ಅವನು ದೇವದೂಷಕರನ್ನು ತಿರಸ್ಕರಿಸುವವನೂ
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ
ತನಗೆ ತೊಂದರೆಯಾದರೂ
ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
5 ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ
ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು.
ಹೀಗೆ ಜೀವಿಸುವವನು
ದೇವರಿಗೆ ಸಮೀಪವಾಗಿಯೇ ಇರುತ್ತಾನೆ.[a]
ಚಿನ್ನದ ಬಸವ
32 ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
2 ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.
3 ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು. 4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು.
ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.
5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.
6 ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.
7 ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ. 8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.
9 ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು. 10 ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
11 ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ. 12 ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ. 13 ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.
1 ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.
ನಂಬಿಕೆ ಮತ್ತು ಜ್ಞಾನ
2 ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು. 3 ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ. 4 ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.
5 ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ. 6 ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು. 7-8 ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ.
Kannada Holy Bible: Easy-to-Read Version. All rights reserved. © 1997 Bible League International